KPCC President: ಸಿದ್ದರಾಮಯ್ಯ ಅವರೂ ಕೆಪಿಸಿಸಿ ಅಧ್ಯಕ್ಷ....: ಡಿ ಕೆ ಸುರೇಶ್ ಹೇಳಿಕೆ
ಬೆಂಗಳೂರು, ಜನವರಿ 07: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ ಕೆ ಶಿವಕುಮಾರ್ ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಹೆಸರು ಕೇಳಿಬರುತ್ತಿದೆ. ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಸಿದ್ದರಾಮಯ್ಯ ಅವರು ಬೇಕಾದರೂ ಅಧ್ಯಕ್ಷರಾಗಬಹುದು, ನಾನಂತೂ ಆಕಾಂಕ್ಷಿಯಲ್ಲ. ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ ಎಂದು ಡಿ ಕೆ ಸುರೇಶ್ ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ. ಜನ ಕೊಟ್ಟ ತೀರ್ಪನ್ನು ಗೌರವಯುತವಾಗಿ ಸ್ವೀಕರಿಸಿದ್ದೇನೆ. ಈಗಾಗಲೇ ಸಿಎಂ ಸ್ಥಾನದಲ್ಲಿ ಒಬ್ಬರು ಕೂತಿದ್ದಾರೆ. ಪಕ್ಷದ ಅದ್ಯಕ್ಷ ಸ್ಥಾನದಲ್ಲಿ ಮತ್ತೊಬ್ಬರು ಕೂತಿದ್ದಾರೆ. ಆ ಸ್ಥಾನಗಳು ಖಾಲಿಯಾಗುವ ಸಂದರ್ಭದಲ್ಲಿ ಪಕ್ಷ ಅದರ ಬಗ್ಗೆ ಚರ್ಚೆ ಮಾಡಲಿದೆ. ನಾನು ನೀವು ಇಲ್ಲಿ ಕೂತು ಚರ್ಚೆ ಮಾಡಿದರೆ ಅರ್ಥವಿಲ್ಲ. ಏನೇ ತೀರ್ಮಾನ ಮಾಡಬೇಕಾದರೂ ನಮ್ಮ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ತೀರ್ಮಾನ ಮಾಡಬೇಕು.

ಆಕಾಂಕ್ಷಿಗಳು ಇದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಶಿವಕುಮಾರ್ ಅವರೇ ಇರಬೇಕು ಎಂದೇನಿಲ್ಲ. ಅವರು ನಾಲ್ಕೈದು ವರ್ಷಗಳಿಂದ ಪಕ್ಷ ಸಂಘಟಿಸಿ ಅಧಿಕಾರಕ್ಕೆ ತಂದಿದ್ದಾರೆ. ಆ ಹುದ್ದೆಗೆ ಸತೀಶ್ ಜಾರಕಿಹೊಳಿ, ರಾಜಣ್ಣ, ಪರಮೇಶ್ವರ್ ಅವರು ಮತ್ತೊಮ್ಮೆ ಆದರೂ ಸಂತೋಷ. ಈ ಸ್ಥಾನ ಅಲಂಕರಿಸಬೇಕು ಎಂದು ಬೇರೆ ಯಾರಿಗೆ ಆತುರವಿದೆಯೋ ಅವರೇ ಆದರೂ ಸಂತೋಷ. ಯಾರೂ ಆಗಬಾರದು ಎಂಬುದೇನಿಲ್ಲ. ಪಕ್ಷದ ದೃಷ್ಟಿಯಿಂದ ಎಲ್ಲರನ್ನು ಒಗ್ಗಟ್ಟಾಗಿ ತೆಗೆದುಕೊಂಡು ಹೋಗಬೇಕಾದ ಗುರುತರ ಜವಾಬ್ದಾರಿ ಎಲ್ಲಾ ನಾಯಕರ ಮೇಲಿದೆ ಎಂದು ತಿಳಿಸಿದರು.
ಅಧ್ಯಕ್ಷ ಸ್ಥಾನ ಬದಲಾವಣೆಗೆ ಪಕ್ಷದಲ್ಲಿ ತರಾತುರಿಯಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾರೂ ತರಾತುರಿಯಲ್ಲಿಲ್ಲ. ಪಕ್ಷದ ಏಳಿಗೆ, ಒಳಿತು ಬಯಸುವವರು, ಜನರ ಸಂಕಷ್ಟ ಅರಿತಿರುವವರು, ತಮ್ಮ ಮುಂದಿರುವ ಸವಾಲು ತಿಳಿದು ಪಕ್ಷವನ್ನು ಸಂಘಟಿಸುವವರು ಈ ಸ್ಥಾನಕ್ಕೆ ಆಯ್ಕೆಯಾಗಬೇಕು ಎಂದು ಚಿಂತನ ಮಂಥನ ಸಭೆ ನಡೆದರೆ ಒಳ್ಳೆಯದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದರು.
ಒಬ್ಬ ವ್ಯಕ್ತಿಗೆ ಒಂದು ಹುದ್ದೆ ಎಂಬ ಬೇಡಿಕೆ ವಿಚಾರವಾಗಿ ಮಾತನಾಡಿ, ಅಧ್ಯಕ್ಷ ಸ್ಥಾನವನ್ನು ಪಕ್ಷ ಶಿವಕುಮಾರ್ ಅವರಿಗೆ ನೀಡಿದೆಯೇ ಹೊರತು, ಶಿವಕುಮಾರ್ ಅವರು ಕಿತ್ತುಕೊಂಡಿಲ್ಲ. ಪಕ್ಷದ ವರಿಷ್ಠರಾದ ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಖರ್ಗೆ ಅವರು ಶಿವಕುಮಾರ್ ಅವರಿಗೆ ಈ ಜವಾಬ್ದಾರಿ ನೀಡಿದ್ದಾರೆ. ಅವರು ಬೇಡ ಎಂದು ತೀರ್ಮಾನಿಸಿದರೆ ಈ ಸ್ಥಾನ ತ್ಯಜಿಸಲು ಶಿವಕುಮಾರ್ ಅವರು ಸಿದ್ಧರಿದ್ದಾರೆ. ಇವು ಶಾಶ್ವತವಾದ ಹುದ್ದೆಗಳಲ್ಲ. ತೀರ್ಮಾನ ಮಾಡಬೇಕಾದವರು ವರಿಷ್ಠರು. ಒಂದು ವ್ಯಕ್ತಿಗೆ ಒಂದು ಹುದ್ದೆ ಎಂದು ಹೇಳುವುದು ಎಐಸಿಸಿ ನಾಯಕರನ್ನು ಪ್ರಶ್ನೆ ಮಾಡುವಂತಾಗುತ್ತದೆ. ಇಂತಹ ವಿಚಾರವನ್ನು ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಪಕ್ಷ ಸಂಘಟನೆ ದೃಷ್ಟಿಯಿಂದ ಯಾರು ಬೇಕಾದರೂ ತಮ್ಮ ಬೇಡಿಕೆ, ಸಲಹೆಗಳನ್ನು ಅವರ ಮುಂದೆ ಇಡಬಹುದು ಎಂದು ತಿಳಿಸಿದರು.
ಸಿಎಂ ಕುರ್ಚಿ ಬಗ್ಗೆ ಚರ್ಚೆಯಾಗುತ್ತಿದ್ದು, 2028ಕ್ಕೆ ಸಿಎಂ ಆಕಾಂಕ್ಷಿ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ಕುರಿತು ಮಾತನಾಡಿ, ಈ ವಿಚಾರವಾಗಿ ನೀವು ಅವರನ್ನು ಕೇಳಬೇಕು. ಅವರು ಆಕಾಂಕ್ಷಿಯಾಗಿದ್ದರೆ ಅದು ಅವರ ವೈಯಕ್ತಿಕ ಅಭಿಪ್ರಾಯ. ಅವರು ನಮ್ಮ ಪಕ್ಷದ ನಾಯಕರು, ಸಮುದಾಯದ ಮುಖಂಡರು. ರಾಜಕೀಯದಲ್ಲಿರುವವರು ತಮ್ಮದೇ ಆಸೆ ಆಕಾಂಕ್ಷಿ ಇಟ್ಟುಕೊಂಡಿರುತ್ತಾರೆ. ಅವರೊಬ್ಬರೆ ಅಲ್ಲ, ಈ ಆಸೆ ಆಕಾಂಕ್ಷೆ ಇಟ್ಟುಕೊಂಡಿರುವ ಸಾಕಷ್ಟು ಜನ ಇದ್ದಾರೆ. ಅದು ತಪ್ಪು ಎಂದು ಹೇಳಲು ಆಗುವುದಿಲ್ಲ. ಅವರನ್ನು ಸಿಎಂ ಮಾಡುವ ಬಗ್ಗೆ ನನಗೆ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ನಂತರ ಸಿಎಂ ಮಾಡುವ ವಿಚಾರ ಚರ್ಚೆಯಾಗುತ್ತದೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಜವಾಬ್ದಾರಿ ನಮ್ಮ 140 ಶಾಸಕರ ಮೇಲಿದೆ. ಜನ ಕಾಂಗ್ರೆಸ್ ಪಕ್ಷವನ್ನು ಜನ ಅಧಿಕಾರಕ್ಕೆ ತಂದಿದ್ದು, ಇದಕ್ಕೆ ಎಷ್ಟು ಕಷ್ಟಪಡಲಾಗಿದೆ ಎಂದು ಎಲ್ಲರೂ ಅರಿತು ಎಚ್ಚರಿಕೆ ನಡೆ ಇಡಬೇಕು ಎಂದರು.












Click it and Unblock the Notifications