ಸಿದ್ದರಾಮಯ್ಯ ಸಿಎಂ; ಡಿ. ಕೆ. ಶಿವಕುಮಾರ್ 4 ಷರತ್ತುಗಳು!
ಬೆಂಗಳೂರು, ಮೇ 18; ಕರ್ನಾಟಕದ ಮುಖ್ಯಮಂತ್ರಿ ಯಾರು? ಎಂಬ ಪ್ರಶ್ನೆಗೆ ಉತ್ತರ ಬಹುತೇಕ ಅಂತಿಮಗೊಂಡಿದೆ. ಸಿದ್ದರಾಮಯ್ಯ ಸಿಎಂ ಆಗಲು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ಎಐಸಿಸಿ ಬೆಳಗ್ಗೆ 10ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಿದೆ.
ಗುರುವಾರ ಬೆಳಗ್ಗೆ 10 ಗಂಟೆಗೆ ಎಐಸಿಸಿ ಪತ್ರಿಕಾಗೋಷ್ಠಿ ಕರೆದಿದೆ. ಕರ್ನಾಟಕ ಕಾಂಗ್ರೆಸ್ ಸಂಜೆ 7 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದೆ. ಆದ್ದರಿಂದ ಮುಖ್ಯಮಂತ್ರಿ ಯಾರು? ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತ ಪಡೆದಿದೆ. ಆದರೆ ಭಾನುವಾರದಿಂದ ಮುಖ್ಯಮಂತ್ರಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ದೆಹಲಿ, ಬೆಂಗಳೂರಿನಲ್ಲಿ ನಡೆದ ಸರಣಿ ಸಭೆಗಳ ಬಳಿಕ ಗುರುವಾರ ಬೆಳಗ್ಗೆ ಎಲ್ಲರೂ ಬಗೆಹರಿದಿದೆ.
ಡಿ. ಕೆ. ಶಿವಕುಮಾರ್ ಷರತ್ತುಗಳು; ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗುತ್ತಾರೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷರಾಗಿಯೂ ಅವರೇ ಮುಂದುವರೆಯುತ್ತಾರೆ ಎಂಬುದು ಸದ್ಯದ ಮಾಹಿತಿ. 10 ಗಂಟೆಗೆ ಎಐಸಿಸಿ ನಡೆಸಲಿರುವ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ತಿಳಿಯಲಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಒಪ್ಪಿರುವ ಡಿ. ಕೆ. ಶಿವಕುಮಾರ್ ಹೈಕಮಾಂಡ್ ನಾಯಕರಿಗೆ 4 ಷರತ್ತುಗಳನ್ನು ಹಾಕಿದ್ದಾರೆ. ನೀಡಿದ ಭರವಸೆಗೆ ಬದ್ಧವಾಗಿ ಇರಬೇಕು ಎಂದು ಹೇಳಿದ್ದಾರೆ. ಆದ್ದರಿಂದ ಕರ್ನಾಟಕದ ಮುಂದಿನ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ಷರತ್ತು 1; ಹೈಕಮಾಂಡ್ನ ಅಧಿಕಾರ ಹಂಚಿಕೆ ಸೂತ್ರಕ್ಕೆ ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ಒಪ್ಪಿಗೆ ನೀಡಿದ್ದಾರೆ. ಡಿ. ಕೆ. ಶಿವಕುಮಾರ್ ಅವರು ಮೊದಲ ಎರಡು ವರ್ಷ ಮಾತ್ರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರಬೇಕು ಎಂದು ಷರತ್ತು ಹಾಕಿದ್ದಾರೆ.
ಷರತ್ತು 2; ಅಧಿಕಾರ ಹಂಚಿಕೆ ಸೂತ್ರಕ್ಕೆ ಹೈಕಮಾಂಡ್ ಸಹ ಬದ್ಧರಾಗಿರಬೇಕು. ಎರಡು ವರ್ಷಗಳ ಬಳಿಕ ನನ್ನನ್ನು ಮುಖ್ಯಮಂತ್ರಿ ಮಾಡಬೇಕು. ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಡಿ. ಕೆ. ಶಿವಕುಮಾರ್ ಷರತ್ತು ವಿಧಿಸಿದ್ದಾರೆ.
ಷರತ್ತು 3; ಡಿ. ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲು ಒಪ್ಪಿಗೆ ನೀಡಿದ್ದಾರೆ. ಆದರೆ ಅದಕ್ಕೂ ಷರತ್ತುಇದೆ. ಕೇವಲ ಒಬ್ಬರು ಮಾತ್ರ ಉಪ ಮುಖ್ಯಮಂತ್ರಿ ಇರಬೇಕು. ಬೇರೆ ಯಾರನ್ನೂ ಉಪಮುಖ್ಯಮಂತ್ರಿ ಮಾಡುವಂತಿಲ್ಲ ಎಂದು ಡಿ. ಕೆ. ಶಿವಕುಮಾರ್ ಹೈಕಮಾಂಡ್ ನಾಯಕರ ಮುಂದೆ ಷರತ್ತುಇಟ್ಟಿದ್ದಾರೆ.
ಷರತ್ತು 4; ಹೈಕಮಾಂಡ್ ನಾಯಕರ ಮುಂದೆ ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಮಾಡಿ ಎಂಬ ಬಿಗಿಪಟ್ಟು ಇಟ್ಟಿದ್ದರು. ಅಂತಿಮವಾಗಿ ಅವರ ಮನವೊಲಿಸುವಲ್ಲಿ ನಾಯಕರು ಯಶಸ್ವಿಯಾಗಿದ್ದಾರೆ. ಉಪ ಮುಖ್ಯಮಂತ್ರಿಯ ಜೊತೆ ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ನನ್ನ ಬಳಿಯಲ್ಲೇ ಇರಬೇಕು ಎಂದು ಡಿ. ಕೆ. ಶಿವಕುಮಾರ್ ಷರತ್ತು ಹಾಕಿದ್ದಾರೆ.
ಈ 4 ಷರತ್ತುಗಳ ಪೈಕಿ ಯಾವ ಷರತ್ತಿಗೆ ಹೈಕಮಾಂಡ್ ನಾಯಕರು ಒಪ್ಪಿಗೆ ನೀಡಿದ್ದಾರೆ. ಎರಡು ವರ್ಷಗಳ ಬಳಿಕ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸುವುದು ಅಷ್ಟು ಸುಲಭದ ಮಾತೇ? ಎಂಬುದು ಇನ್ನೂ ತಿಳಿದುಬರಬೇಕಿದೆ.
ಮಹತ್ವದ ಸಭೆ; ಬುಧವಾರ ರಾತ್ರಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡೆಸಿದ ಮಹತ್ವದ ಸಭೆಯಲ್ಲಿ ಸಿದ್ದರಾಮಯ್ಯ ಸಿಎಂ ಮಾಡಲು ಒಪ್ಪಿಗೆ ನೀಡಲಾಗಿದೆ. ಶಿಮ್ಲಾದಲ್ಲಿರುವ ಸೋನಿಯಾ ಗಾಂಧಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಇದಕ್ಕೂ ಮೊದಲು ಡಿ. ಕೆ. ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನಿವಾಸದಲ್ಲಿ ಸಭೆ ನಡೆಸಿದ್ದರು.
ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದು ಕುಳಿತಿದ್ದ ಡಿ. ಕೆ. ಶಿವಕುಮಾರ್ ಸೋನಿಯಾ ಗಾಂಧಿ ಮನವೊಲಿಕೆಗೆ ಒಪ್ಪಿದ್ದಾರೆ ಎಂಬುದು ಸದ್ಯದ ಸುದ್ದಿ. ಈ ಮೂಲಕ ಅವರು ತಾವು ಪಕ್ಷ ನಿಷ್ಠ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.











Click it and Unblock the Notifications