ಬಜೆಟ್ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?, ವಿಡಿಯೋ ವೈರಲ್
Recommended Video

ಬೆಂಗಳೂರು, ಜೂನ್ 25 : ಬಜೆಟ್ ಮಂಡನೆ ವಿಚಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಜಟಾಪಟಿ ನಡೆಯುತ್ತಿದೆ. ಬಜೆಟ್ ಮಂಡನೆಗೆ ಕುಮಾರಸ್ವಾಮಿ ಅವರು ಸಿದ್ಧತೆಯನ್ನು ನಡೆಸುತ್ತಿದ್ದು, ಸರಣಿ ಸಭೆ ನಡೆಸುತ್ತಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ನಡುವೆ ಸಮನ್ವಯ ಸಾಧಿಸಲು ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ. ಆದರೆ, ಆಪ್ತಶಾಸಕರ ಜೊತೆ ಸಭೆ ನಡೆಸುವಾಗ ಸಿದ್ದರಾಮಯ್ಯ ನೀಡಿದ ಹೇಳಿಕೆ ಜಟಾಪಟಿಗೆ ಕಾರಣವಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಅವರು ಆಪ್ತ ಶಾಸಕರ ಜೊತೆ ಸಭೆ ನಡೆಸಿದರು. ಈ ಸಭೆಯಲ್ಲಿ ಅವರ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸಿದ್ದರಾಮಯ್ಯ ಅವರನ್ನು ಭಾನುವಾರ ಸಂಜೆ ಭೇಟಿ ಮಾಡಿ ಮಾತುಕತೆ ನಡೆಸಿದರು. ಸಿದ್ದರಾಮಯ್ಯ ಅವರು ಸರ್ಕಾರದ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬುದು ಈಗ ಚರ್ಚೆಗೆ ಕಾರಣವಾಗಿರುವ ಅಂಶ...ವಿಡಿಯೋದಲ್ಲೇನಿದೆ ಇಲ್ಲಿದೆ ನೋಡಿ ಮಾಹಿತಿ...

ಸಿದ್ದರಾಮಯ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಅವರು ಅಲ್ಲಿಯೇ ಆಪ್ತ ಶಾಸಕರ ಜೊತೆ ಸಭೆ ನಡೆಸಿದ್ದು, ಸಭೆಯ ವಿಡಿಯೋ ವೈರಲ್ ಆಗಿದೆ.
ಶಾಸಕರಾದ ಬೈರತಿ ಬಸವರಾಜು, ಮುನಿರತ್ನ, ಎಸ್.ಟಿ.ಸೋಮಶೇಖರ್, ರಹೀಂಖಾನ್ ಮತ್ತು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರು ಸಿದ್ದರಾಮಯ್ಯ ಅವರ ಜೊತೆ ನಡೆಸ ಸಭೆಯಲ್ಲಿ ಪಾಲ್ಗೊಂಡಿದ್ದರು.

ಏನ್ ಬಜೆಟ್ ಮಂಡನೆ ಮಾಡ್ತಾರೆ?
ಬಜೆಟ್ ಮಂಡನೆ ಬಗ್ಗೆ ಮಾತು ಬಂದಾಗ ಸಿದ್ದರಾಮಯ್ಯ ಅವರು, 'ಏನ್ ಬಜೆಟ್ ಮಂಡನೆ ಮಾಡ್ತಾರೆ? ರಾಹುಲ್ ಗಾಂಧಿ ಹತ್ತಿರ ಹೋಗಿದ್ದಾರೆ. ಅಲ್ಲಿಂದ ಬಂದು ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಅಂತ ಹೇಳ್ಕೊಂಡು ಓಡಾಡುತ್ತಿದ್ದಾರೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಕ್ಕೆ ಇದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಒಂದೇ ಪಕ್ಷವಿದ್ದರೆ ಮಾಡಲಿ
ಸಭೆಯಲ್ಲಿ ಮಾತು ಮುಂದುವರೆಸಿರುವ ಸಿದ್ದರಾಮಯ್ಯ ಅವರು, 'ಒಂದೇ ಪಕ್ಷ ಅಧಿಕಾರಕ್ಕೆ ಬಂದಿದ್ದರೆ ಮಾಡಲಿ. ಕಾಂಗ್ರೆಸ್ ಪಕ್ಷದಿಂದ ಬೆಂಬಲದಿಂದ ಅವರು ಮುಖ್ಯಮಂತ್ರಿಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರವೇ ಮಂಡಿಸಿದ ಬಜೆಟ್ ಇದೆ. ಅದನ್ನೇ ಮುಂದುವರೆಸಲಿ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದು ಸಮ್ಮಿಶ್ರ ಸರ್ಕಾರ
'ಇದು ಸಮ್ಮಿಶ್ರ ಸರ್ಕಾರ. ಮುಂದಿನ ವರ್ಷ ಅವರಿದ್ದರೆ ಬಜೆಟ್ ಮಾಡಿಕೊಳ್ಳಲಿ. ನಮ್ಮ ವಿರೋಧವೇನಿಲ್ಲ. ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಪಟ್ಟಿಯನ್ನೇ ಅಂತಿಮಗೊಳಿಸಿಲ್ಲ. ಈಗಾಗಲೇ ಅವರು ಬಜೆಟ್ ತಯಾರಿ ಮಾಡಿಕೊಳ್ಳುತ್ತಿದ್ದಾರೆ' ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.












Click it and Unblock the Notifications