ಮಳೆ ಪೀಡಿತ ಕರ್ನಾಟಕ ನೋಡೋಕೆ ಬನ್ನಿ ಮೋದಿಗೆ ಸಿದ್ದು ಆಹ್ವಾನ
ಬೆಂಗಳೂರು, ಆ. 10: ದೇಶದಲ್ಲಿ ಮಳೆ ಪೀಡಿತ ರಾಜ್ಯಗಳ ಪ್ರತಿನಿಧಿಗಳ ಜೊತೆಗೆ ಪ್ರಧಾನಿ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಅವರ ಅನುಪಸ್ಥಿತಿಯಲ್ಲಿ ಸಚಿವ ಆರ್ ಅಶೋಕ ಹಾಗೂ ಸಚಿವ ಬಸವರಾಜ ಬೊಮ್ಮಾಯಿ ಅವರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೋದಿಗೆ ಸರಣಿ ಟ್ವೀಟ್ ಮೂಲಕ ಪ್ರಶ್ನೆಗಳನ್ನು ಹಾಕಿದ್ದು, ಕರ್ನಾಟಕದ ದುಃಸ್ಥಿತಿ ವೀಕ್ಷಣೆಗೆ ಆಹ್ವಾನಿಸಿದ್ದಾರೆ.
Recommended Video
ಇದಲ್ಲದೆ, ರಾಜ್ಯದ ಪ್ರತಿನಿಧಿಗಳಾಗಿ ಭಾಗವಹಿಸಿರುವ ಸಚಿವರುಗಳು ಮೋದಿ ಅವರ ಮುಂದೆ ಕೈ ಕಟ್ಟಿ ಕೂತು ಸುಮ್ಮನೆ ಎದ್ದು ಬರದೆ, ಅತಿವೃಷ್ಟಿ ಪೀಡಿತ ರಾಜ್ಯಕ್ಕೆ ಸೂಕ್ತ ಅನುದಾನ ಕೇಳುವ ಪ್ರಯತ್ನ ಮಾಡುವಂತೆ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಕಳೆದ ಬಾರಿ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಅವರು ಈ ಬಾರಿ ಸಭೆ ಕರೆದಿರುವುದು ಒಳ್ಳೆಯ ಬೆಳವಣಿಗೆ. ಆದರೆ, ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನವನ್ನು ಸಚಿವರುಗಳು ಮಾಡಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಅತಿವೃಷ್ಟಿಯ ಅಂದಾಜು ನಷ್ಟ ರೂ.1,00,000 ಕೋಟಿ
ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ ರೂ.1,00,000 ಕೋಟಿ
ರಾಜ್ಯಸರ್ಕಾರದ ವರದಿ ಪ್ರಕಾರ ನಷ್ಟ- ರೂ50,000 ಕೋಟಿ.
ಪರಿಹಾರ ಕೇಳಿದ್ದು ರೂ.35,000 ಕೋಟಿ. ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ ರೂ.1860 ಕೋಟಿ ಮಾತ್ರ. ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ. ಕಳೆದ ವರ್ಷ ಕರ್ನಾಟಕ ಸರ್ಕಾರ ಅತಿವೃಷ್ಟಿಯ ವರದಿ ಕಳಿಸಿರುವುದು ಆಗಸ್ಟ್ ವರೆಗಿನ ಹಾನಿ ಬಗ್ಗೆ ಮಾತ್ರ.
ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅತಿವೃಷ್ಟಿ ವರದಿ ಕಳಿಸದೆ ಸರ್ಕಾರ ನೊಂದ ಜನತೆಗೆ ಮೋಸ ಮಾಡಿದೆ.
ಈ ಬಾರಿ ಪರಿಹಾರವನ್ನು ಕೇಳುವಾಗ ಇದನ್ನು ಪ್ರಧಾನಿ ಅವರ ಗಮನಕ್ಕೆ ತರಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಒಂದು ಲಕ್ಷ ಕೋಟಿ ರೂಪಾಯಿ ಕೃಷಿ ಪ್ಯಾಕೇಜ್
ಭಾನುವಾರ ಘೋಷಿಸಿರುವ ಒಂದು ಲಕ್ಷ ಕೋಟಿ ರೂಪಾಯಿ ಕೃಷಿ ಪ್ಯಾಕೇಜ್, ಕಳೆದ ಮೇ ತಿಂಗಳಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದ ಕೋವಿಡ್ ಪರಿಹಾರ ಯೋಜನೆಯ ಭಾಗವಾಗಿದೆ.
ಅದನ್ನೇ ಹೊಸ ಪ್ಯಾಕೇಜ್ ಎಂದು ಬಿಂಬಿಸಿ ಪ್ರಧಾನಿಯವರು ರೈತರ ದಾರಿ ತಪ್ಪಿಸಿದ್ದಾರೆ. ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರ್ಕಾರ ಗುರುತಿಸಿರುವ ರೈತ ಫಲಾನುಭವಿಗಳ ಸಂಖ್ಯೆ ಕೇವಲ 52 ಲಕ್ಷ ಮಾತ್ರ. ರಾಜ್ಯ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರವೇ ರಾಜ್ಯದಲ್ಲಿರುವ ಒಟ್ಟು ರೈತ ಕುಟುಂಬಗಳ ಸಂಖ್ಯೆ 82 ಲಕ್ಷ. ಈ ಮಾಹಿತಿಯನ್ನು ಬಚ್ಚಿಟ್ಟು ರಾಜ್ಯ ಸರ್ಕಾರ ರೈತರಿಗೆ ಮೋಸ ಮಾಡಿದೆ.

ಈ ಬಾರಿಯಾದರೂ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಬೇಕು
15ನೇ ಹಣಕಾಸು ಆಯೋಗ ರಾಜ್ಯಕ್ಕೆ ರೂ.5495 ಕೋಟಿ ವಿಶೇಷ ಅನುದಾನದ ಶಿಫಾರಸು ಮಾಡಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅಡ್ಡಗಾಲು ಹಾಕಿ ಆ ಅನುದಾನ ರಾಜ್ಯಕ್ಕೆ ಸಿಗದಂತೆ ಮಾಡಿದ್ದಾರೆ.
ಈ ಅನ್ಯಾಯವನ್ನು ಕೂಡಾ ರಾಜ್ಯದ ಸಚಿವರು ಇಂದಿನ ಸಭೆಯಲ್ಲಿ ಪ್ರಧಾನಿ ಗಮನಕ್ಕೆ ತರಬೇಕು.ರಾಜ್ಯದ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು.
ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ ಒತ್ತಾಯ ಮಾಡಬೇಕು.

ರಾಜ್ಯದ ಹಿತಾಸಕ್ತಿ ರಕ್ಷಣೆಯ ಪರ ಗಟ್ಟಿ ದನಿಯೆತ್ತಿ
ಪ್ರಧಾನಿ ಅವರ ಜೊತೆಗಿನ ರಾಜ್ಯದ ಸಚಿವರ ಸಭೆ ಕಾಟಾಚಾರದ ಕಸರತ್ತು ಆಗಬಾರದು. ಕರ್ನಾಟಕದ ಮುಖ್ಯಮಂತ್ರಿಗಳು ತಕ್ಷಣ ಅಧಿಕಾರಿಗಳ ತಂಡವನ್ನು ಅತಿವೃಷ್ಟಿ ಪೀಡಿತ ಪ್ರದೇಶಕ್ಕೆ ಕಳಿಸಿ ನಷ್ಟದ ಅಧ್ಯಯನ ಮಾಡಿಸಿ ಪ್ರಧಾನಿ ಅವರಿಗೆ ಕಳಿಸಿಕೊಟ್ಟು ನ್ಯಾಯಯುತ ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು. ಈ ವರೆಗಿನ ಅನುಭವದ ಪ್ರಕಾರ ರಾಜ್ಯದ ಹಿತಾಸಕ್ತಿ ರಕ್ಷಣೆಯ ಪರ ಗಟ್ಟಿಯಾಗಿ ನಿಂತು ಪ್ರಧಾನಿ ಅವರ ಜೊತೆ ಮಾತನಾಡಿ ಹೆಚ್ಚು ಪರಿಹಾರ ಪಡೆಯುವ ಶಕ್ತಿ ಕರ್ನಾಟಕದ ಸಚಿವರಿಗಿಲ್ಲ. ಇದಕ್ಕಾಗಿ, ಹೆಚ್ಚಿನ ಪರಿಹಾರಕೋರಲು ಸರ್ವಪಕ್ಷಗಳ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಬೇಕು.












Click it and Unblock the Notifications