ಶಾಲೆಗಳ ಆರಂಭ: ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ!

ಬೆಂಗಳೂರು, ಅ. 09: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿರುವುದು ಪಾಲಕರ ಆತಂಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಶಾಲೆ ಆರಂಭಿಸುವ ಕುರಿತು ರಾಜ್ಯ ಶಿಕ್ಷಣ ಇಲಾಖೆಯು ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP)ಯನ್ನೂ ಸಿದ್ಧಪಡಿಸಿತ್ತು. ಆದರೆ ಶಾಲೆ ಆರಂಭಿಸುವ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಎಲ್ಲರ ಅಭಿಪ್ರಾಯ ಪಡೆಯಲು ರಾಜ್ಯ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ನಿರ್ಧರಿಸಿದ್ದರು.

ಇದೀಗ ವಿದ್ಯಾಗಮ ಯೋಜನೆ ಮುಂದುವರೆಸಲು ಕೂಡ ಶಿಕ್ಷಕರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅದಕ್ಕೆ ಕಾರಣವಾಗಿರುವುದು ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿರುವ ಶಿಕ್ಷಕರ ಸಾವು, ಶಿಕ್ಷಕರ ನಿರಂತರ ಸಾವುಗಳು ಶಿಕ್ಷಕರ ವಲಯದಲ್ಲಿ ಆತಂಕ ಸೃಷ್ಟಿ ಮಾಡಿದೆ.

ಇದೇ ಸಂದರ್ಭದಲ್ಲಿ ಶಾಲೆ ಆರಂಭಿಸುವ ಕುರಿತು ತಮ್ಮ ನಿಲುವನ್ನು ತಿಳಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಮಕ್ಕಳೂ ಮೃತಪಟ್ಟಿದ್ದಾರೆ!

ಮಕ್ಕಳೂ ಮೃತಪಟ್ಟಿದ್ದಾರೆ!

ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ದೇಶದ ಉಳಿದೆಡೆಗಿಂತ ಕರ್ನಾಟಕದಲ್ಲಿ ಭೀಕರ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ತಮ್ಮ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಸರ್ಕಾರದ ದಾಖಲೆಗಳ ಪ್ರಕಾರ 10 ವರ್ಷದೊಳಗಿನ 20,256 ಮಕ್ಕಳು ಮತ್ತು 11 ರಿಂದ 20 ವರ್ಷದೊಳಗಿನ 47,061 ಮಕ್ಕಳು ಈಗಾಗಲೇ ಕೊರೋನಾ ಸೋಂಕಿತರಾಗಿದ್ದಾರೆ. ಈ ಎರಡೂ ಗುಂಪಿನಿಂದ 61 ಮಕ್ಕಳು ಮೃತಪಟ್ಟಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು ತಮ್ಮ ಪತ್ರದಲ್ಲಿ ಸಿದ್ದರಾಮಯ್ಯ ಬರೆದಿದ್ದಾರೆ.

ಜೀವನದ ಜೊತೆ ಜೀವ ಮುಖ್ಯ

ಜೀವನದ ಜೊತೆ ಜೀವ ಮುಖ್ಯ

ತಜ್ಞರ ಮಾತುಗಳ ಪ್ರಕಾರ ಈ ವರ್ಷ ಜೀವ ಉಳಿಸಿಕೊಳ್ಳಬೇಕೇ ಹೊರತು ಉಳಿದೆಲ್ಲವನ್ನು ನಗಣ್ಯವೆಂದು ಭಾವಿಸಬೇಕು. ಹಿಂದೆ ವಿವಿಧ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಸಂದರ್ಭದಲ್ಲಿ ಸ್ವತಃ ನಾನೇ ಬೆಂಬಲಿಸಿದ್ದೆ. ಆದರೆ ಇಂದಿನ ಪರಿಸ್ಥಿತಿಯೆ ಬೇರೆಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ 99 ಜನ ಮೃತ ಪಟ್ಟಿದ್ದಾರೆಂದು ಸರ್ಕಾರ ಹೇಳುತ್ತಿದೆ. ನನಗಿರುವ ಅಧಿಕೃತ ಮಾಹಿತಿಯ ಪ್ರಕಾರ ದೊಡ್ಡಬಳ್ಳಾಪುರ ಒಂದರಲ್ಲೆ ಇಷ್ಟು ಜನರು ಮರಣ ಹೊಂದಿದ್ದಾರೆ. ಹೊಸಕೋಟೆಯಲ್ಲಿ ಸುಮಾರು 80 ಜನ, ನೆಲಮಂಗಲದಲ್ಲಿ 40 ಜನ, ದೇವನಹಳ್ಳಿಯಲ್ಲಿ 50 ಕ್ಕಿಂತ ಹೆಚ್ಚು ಜನ ಮೃತಪಟ್ಟಿದ್ದಾರೆ. ಈ ಕುರಿತು ನಿಮಗೆ ನಂಬಿಕೆ ಇಲ್ಲದಿದ್ದರೆ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಕೇಳಿ ನೋಡಿ ಸತ್ಯ ಗೊತ್ತಾಗುತ್ತದೆ. ಆಸ್ಪತ್ರೆಗೆ ಹೋಗಲು ಭಯಭೀತರಾಗಿ ಕಾಯಿಲೆ ಪತ್ತೆಯಾಗದೇ ಮೃತಪಟ್ಟವರ ಸಂಖ್ಯೆ ಎಷ್ಟು ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಾಲ್ಯ ವಿವಾಹದ ನೆಪ ಬೇಡ

ಬಾಲ್ಯ ವಿವಾಹದ ನೆಪ ಬೇಡ

ಶಾಲೆಗಳು ಮುಚ್ಚಿದ್ದರಿಂದ ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಪಿಡುಗುಗಳು ಹೆಚ್ಚುತ್ತಿವೆ ಎಂಬ ನಿಮ್ಮ ಮಾತಿನಲ್ಲಿ ಅನುಮಾನಗಳಿಲ್ಲ. ಆದರೆ ಜಿಲ್ಲಾಡಳಿತಗಳು ನಿದ್ದೆಯಿಂದ ಎಚ್ಚೆತ್ತು ಕ್ರಿಯಾಶೀಲವಾದರೆ, ದುಡಿಯುವ ಕುಟುಂಬಗಳಿಗೆ ದುಡಿಯುವ ಅವಕಾಶಗಳನ್ನು ಸರ್ಕಾರವು ಹೆಚ್ಚಿಸಿ ಅವರ ಕೈತುಂಬಾ ಹಣ ಇರುವಂತೆ ನೋಡಿಕೊಂಡರೆ ಈ ಸಮಸ್ಯೆಗಳನ್ನು ನಿಯಂತ್ರಿಸಬಹುದಾಗಿದೆ.

ಒಂದು ಸಮಸ್ಯೆಯನ್ನು ಎದುರಿಸಲು ಮಕ್ಕಳನ್ನು ಯಮನ ಬಾಯಿಗೆ ತಳ್ಳುವುದನ್ನು ಯಾವ ಸೂಕ್ಷ್ಮಮತಿಯಾದ ಮನುಷ್ಯನಿಂದಲೂ ಊಹಿಸಿಕೊಳ್ಳಲಾಗದು. ಸರ್ಕಾರದ ನಿರ್ಲಕ್ಷ್ಯದಿಂದ ಮತ್ತು ತಪ್ಪು ನಿರ್ಧಾರಗಳ ಕಾರಣದಿಂದಾಗಿ ಮೃತಪಟ್ಟ ಮಗುವಿನ ಸಾವು ಅದು ಕೇವಲ ಸಾವು ಆಗಿರುವುದಿಲ್ಲ, ಸಮಾಜ ನಡೆಸಿದ ಕಗ್ಗೊಲೆಯಾಗುತ್ತದೆ. ಮೃತಪಟ್ಟ ಮಗುವಿನ ಕುಟುಂಬದ ನೋವನ್ನು ಊಹಿಸಿಕೊಳ್ಳಲು ನನ್ನಿಂದ ಸಾಧ್ಯವಾಗುವುದಿಲ್ಲ. ಯಾವ ಕಾರಣಕ್ಕೂ ಹೀಗೆ ಆಗದಂತೆ ನೋಡಿಕೊಳ್ಳಬೇಕಾದ ಹೊಣೆಗಾರಿಕೆ ನಿಮ್ಮ ಮೇಲಿದೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಮಕ್ಕಳು ಪಾಲನೆ ಮಾಡುವುದಿಲ್ಲ

ಮಕ್ಕಳು ಪಾಲನೆ ಮಾಡುವುದಿಲ್ಲ

ಮಾಸ್ಕ್ ಹಾಕಿಕೊಳ್ಳುವಲ್ಲಿ, ಸ್ಯಾನಿಟೈಸರ್ ಬಳಸುವಲ್ಲಿ, ದೈಹಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪ್ರಜ್ಞಾವಂತರೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇವೆಲ್ಲವನ್ನೂ ಮಕ್ಕಳಿಂದ ನಿರೀಕ್ಷಿಸುವುದು ಅಸಾಧ್ಯದ ವಿಚಾರ. ಇಷ್ಟು ದಿನ ಮನೆಯಲ್ಲಿದ್ದ ಮಕ್ಕಳು ಶಾಲೆಗೆ ಬಂದ ಕೂಡಲೇ ಎಲ್ಲಾ ನಿಯಮಗಳನ್ನು ಗಾಳಿಗೆ ತೂರುತ್ತವೆ.

ಅಲ್ಲದೆ ದುಡಿಯುವ ಕುಟುಂಬಗಳಲ್ಲಿ ಮಕ್ಕಳ ಲಾಲನೆ ಪಾಲನೆ ಮಾಡುವುದು ಬಹುಪಾಲು ಸಂದರ್ಭಗಳಲ್ಲಿ ಅಜ್ಜ-ಅಜ್ಜಿಯರಾಗಿರುತ್ತಾರೆ ಅಥವಾ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮನೆಗಳಲ್ಲಿ ಉಳಿದು ಕೊಂಡವರಾಗಿರುತ್ತಾರೆ. ಮಕ್ಕಳು ಶಾಲೆಗೆ ಹೋಗಿ ಕೊರೊನಾ ಅಂಟಿಸಿಕೊಂಡು ಬಂದರೆ ಮಕ್ಕಳು ಸಮಸ್ಯೆಗೆ ತುತ್ತಾಗುವುದರ ಜೊತೆಗೆ, ಈ ರೋಗದಿಂದ ಹೆಚ್ಚು ಬಾಧಿತರಾಗುತ್ತಿರುವ ಹಿರಿಯ ಜೀವಗಳು ಮತ್ತು ಇತರೆ ಆರೋಗ್ಯ ಸಂಬಂಧಿತ ಸಮಸ್ಯೆಗಳಿರುವವರಿಗೆ ತೀವ್ರ ರೀತಿಯಲ್ಲಿ ಸೋಂಕು ವ್ಯಾಪಿಸಿ ಸುನಾಮಿ ಸ್ವರೂಪದ ಸಾವು ನೋವುಗಳನ್ನು ಸಮಾಜ ಎದುರಿಸಬೇಕಾಗುತ್ತದೆ.

ಈಗಾಗಲೇ ಅಮೇರಿಕಾ ಮತ್ತು ಯುರೋಪಿನ ಕೆಲವು ದೇಶಗಳು ಶಾಲೆಗಳನ್ನು ತೆರೆದು ಸಮಸ್ಯೆಗಳನ್ನು ಮೈಮೇಲೆ ಹಾಕಿಕೊಂಡಿರುವ ಉದಾಹರಣೆಗಳು ಕಣ್ಣ ಮುಂದೆ ಇವೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಸಿದ್ದರಾಮಯ್ಯ ಎಚ್ಚರಿಕೆಯ ಮಾತನ್ನು ಹೇಳಿದ್ದಾರೆ.

Recommended Video

    RR Nagar ByElection : ಕುಮಾರಣ್ಣ ಸ್ಪಷ್ಟವಾಗಿ ಹೇಳಿದರು | Oneindia Kannada
    ಯಾವ ಕಾರಣಕ್ಕೂ ಶಾಲೆ ತೆರೆಯಬಾರದು

    ಯಾವ ಕಾರಣಕ್ಕೂ ಶಾಲೆ ತೆರೆಯಬಾರದು

    ಹೀಗಾಗಿ ರಾಜ್ಯದಲ್ಲಿ ಕೊರೊನಾ ವೈರಸ್ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳನ್ನು ಯಾವ ಕಾರಣಕ್ಕೂ ತೆರೆಯಬಾರದೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರದಲ್ಲಿ ಆಗ್ರಹಿಸದ್ದಾರೆ.

    ನಗರ ಪ್ರದೇಶಗಳ ಖಾಸಗಿ ಶಾಲೆಗಳ ಮಕ್ಕಳಿಗೆ ಆನ್‌ಲೈನ್ ತರಗತಿಗಳು ನಡೆಯುತ್ತಿವೆ. ರಾಜ್ಯದ ಎಲ್ಲಾ ಮಕ್ಕಳಿಗೂ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸುವುದು ಅಗತ್ಯವಾಗಿದೆ. ಅದಕ್ಕಾಗಿ ಸರ್ಕಾರ ಎಲ್ಲಾ ಸವಲತ್ತುಗಳನ್ನು ಸರ್ಕಾರ ಕಲ್ಪಿಸಿಕೊಡಬೇಕು.

    ಪ್ರಸ್ತುತ ಶೈಕ್ಷಣಿಕ ವರ್ಷದ ಎಲ್ಲಾ ವಿದ್ಯಾರ್ಥಿಗಳನ್ನು ಪಾಸು ಮಾಡಿ ಮುಂದಿನ ತರಗತಿಗಳಿಗೆ ಕಳುಹಿಸಬೇಕೆಂದು ಮತ್ತು ಪರಿಸ್ಥಿತಿ ಹತೋಟಿಗೆ ಬಂದ ನಂತರ ಮತ್ತೊಮ್ಮೆ ಎಲ್ಲರ ಅಭಿಪ್ರಾಯಗಳನ್ನು ಪಡೆದು ಶಾಲೆಗಳನ್ನು ಪ್ರಾರಂಭಿಸಬಹುದೆಂದು ತಮಗೆ ಸಲಹೆ ನೀಡಲು ಬಯಸುತ್ತೇನೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+