ಕಾಂಗ್ರೆಸ್, ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಔತಣಕೂಟ
Recommended Video

ಬೆಂಗಳೂರು, ಫೆಬ್ರವರಿ 13 : ಆಪರೇಷನ್ ಕಮಲದ ಆಡಿಯೋ ಸಂಚಲನದ ನಡುವೆಯೇ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಔತಣಕೂಟ ಆಯೋಜಿಸಿದ್ದರು. ಈ ಮೂಲಕ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶವನ್ನು ಬಿಜೆಪಿ ರವಾನಿಸಿದ್ದಾರೆ.
ಮಂಗಳವಾರ ರಾತ್ರಿ ಬೆಂಗಳೂರಿನ ನಿವಾಸದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಔತಣಕೂಟ ಆಯೋಜನೆ ಮಾಡಿದ್ದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಹ ಔತಣಕೂಟದಲ್ಲಿ ಪಾಲ್ಗೊಂಡಿದ್ದರು.

ಮಂಗಳವಾರ ಎಚ್.ಡಿ.ಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಅವರ ಜನ್ಮದಿನವೂ ಹೌದು. ಆದ್ದರಿಂದ, ಔತಣ ಕೂಟದಲ್ಲಿ ಕೇಕ್ ಕತ್ತರಿಸಲಾಯಿತು. ಅನಿಲ್ ಚಿಕ್ಕಮಾದು ಅವರು ಸಿದ್ದರಾಮಯ್ಯ ಅವರಿಗೆ ಕೇಕ್ ತಿನ್ನಿಸುವ ಮೂಲಕ ಸಂಭ್ರಮಿಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವರಾದ ಡಿ.ಕೆ.ಶಿವಕುಮಾರ್, ಸಾ.ರಾ.ಮಹೇಶ್, ಜಮೀರ್ ಅಹಮದ್ ಖಾನ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಎಲ್ಲಾ ಸಚಿವರು, ಶಾಸಕರು ಔತಣ ಕೂಟದಲ್ಲಿ ಪಾಲ್ಗೊಂಡಿದ್ದರು.
ಔತಣಕೂಟದಲ್ಲಿ ಅತೃಪ್ತ ಶಾಸಕರ ಬಗ್ಗೆ ಚರ್ಚೆ ನಡೆಯಿತು. ಫೆ.13 ಮತ್ತು 14ರಂದು ಕಲಾಪಕ್ಕೆ ಅವರು ಹಾಜರಾಗಲಿದ್ದಾರೆಯೇ? ಎಂಬ ಚರ್ಚೆಗಳು ನಡೆದವು. ಸಿದ್ದರಾಮಯ್ಯ ಅವರು, 'ಬರುವ ನಿರೀಕ್ಷೆ ಇದೆ, ಕಾದು ನೋಡೋಣ' ಎಂದು ಹೇಳಿದರು.
ಕೆಲವು ಕಾಂಗ್ರೆಸ್ ಶಾಸಕರು ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಎಂದು ಒಪ್ಪುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಸದನದಲ್ಲಿ ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ಸಿದ್ದರಾಮಯ್ಯ ಔತಣಕೂಟದಲ್ಲಿ ಎಲ್ಲರನ್ನು ಒಟ್ಟಿಗೆ ಸೇರಿಸಿದ್ದಾರೆ.
ಫೆ.13 ಮತ್ತು 14ರಂದು ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಕಾಂಗ್ರೆಸ್ ವಿಪ್ ಜಾರಿ ಮಾಡಿದೆ. ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಸೇರಿದಂತೆ ಎಲ್ಲಾ 80 ಶಾಸಕರಿಗೆ ವಿಪ್ ಜಾರಿಗೊಳಿಸಲಾಗಿದೆ.












Click it and Unblock the Notifications