ಸಿಎಂ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯಗೆ ಹೈಕಮಾಂಡ್ನಿಂದ ಮಹತ್ವದ ಜವಾಬ್ದಾರಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಗದ್ದುಗೆಯ ಸಸ್ಪೆನ್ಸ್ ಕೊನೆಗೂ ಮುಕ್ತಾಯವಾಗಿದೆ. ಇಷ್ಟು ದಿನ ಮುಖ್ಯಮಂತ್ರಿಯಾಗಿದ್ದ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಸಿಎಂ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ. ಇಂದು ಡಿ.ಕೆ.ಶಿವಕುಮಾರ್ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಆದರೆ ಸಿಎಂ ಸ್ಥಾನ ತ್ಯಾಗ ಮಾಡಿದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ದೆಹಲಿ ಮಟ್ಟದಲ್ಲಿ ಅತ್ಯಂತ ಮಹತ್ವದ ಜವಾಬ್ದಾರಿ ನೀಡುವ ಮೂಲಕ ಮನ್ನಣೆ ನೀಡಿದೆ.
ಸ್ಥಾನ ತ್ಯಾಗಕ್ಕೆ ಸಿಕ್ಕಿತು ಹೈಕಮಾಂಡ್ ಗೌರವ
ಕಾಂಗ್ರೆಸ್ನ ಅತ್ಯುನ್ನತ ಹಾಗೂ ಪ್ರಭಾವಿ ನಿರ್ಧಾರ ಕೈಗೊಳ್ಳುವ ಸಮಿತಿಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಬಡ್ಲ್ಯುಸಿ) ಸದಸ್ಯರನ್ನಾಗಿ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಿ ಹೈಕಮಾಂಡ್ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಲು ಒಪ್ಪಿದ ಬೆನ್ನಲ್ಲೇ, ಹೈಕಮಾಂಡ್ ಅವರಿಗೆ ಸೂಕ್ತ ಸ್ಥಾನಮಾನ ನೀಡಿದೆ.

ಸಿಡಬ್ಲ್ಯೂಸಿ (CWC) ಸದಸ್ಯತ್ವ ಎನ್ನುವುದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮಟ್ಟದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿಶಾಲಿ ವೇದಿಕೆಯಾಗಿದೆ. ಈ ಸಮಿತಿಗೆ ಸಿದ್ದರಾಮಯ್ಯ ಅವರನ್ನು ಸೇರ್ಪಡೆಗೊಳಿಸುವ ಮೂಲಕ, ಅವರ ಹಿರಿತನ ಮತ್ತು ಅನುಭವಕ್ಕೆ ಹೈಕಮಾಂಡ್ ಭಾರಿ ಗೌರವ ನೀಡಿದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.
ರಾಷ್ಟ್ರ ರಾಜಕಾರಣದಲ್ಲಿ ಸಿದ್ದರಾಮಯ್ಯ ಹೊಸ ಇನಿಂಗ್ಸ್?
ರಾಜ್ಯ ರಾಜಕಾರಣದಲ್ಲೇ ದಶಕಗಳ ಕಾಲ ಸಕ್ರಿಯರಾಗಿದ್ದ ಸಿದ್ದರಾಮಯ್ಯ ಅವರಿಗೆ ಈಗ ಕೇಂದ್ರ ಮಟ್ಟದಲ್ಲಿ ಜವಾಬ್ದಾರಿ ಸಿಕ್ಕಿರುವುದು ಅವರ ರಾಜಕೀಯ ಜೀವನದ ಪ್ರಮುಖ ಮೈಲಿಗಲ್ಲಾಗಿದೆ. ಡಿ.ಕೆ.ಶಿವಕುಮಾರ್ ಅವರು ಇಂದು (ಜೂನ್ 3) ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸರಳವಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಹುದ್ದೆ ಸಿಕ್ಕಿರುವುದು, ರಾಜ್ಯ ಕಾಂಗ್ರೆಸ್ನಲ್ಲಿ ಉಭಯ ನಾಯಕರ ನಡುವೆ ಸಮಬಲ ಕಾಯ್ದುಕೊಳ್ಳಲು ಹೈಕಮಾಂಡ್ ಹೆಣೆದಿರುವ ಮಾಸ್ಟರ್ ಪ್ಲಾನ್ ಎಂದೇ ಹೇಳಲಾಗುತ್ತಿದೆ.
ಉಭಯ ನಾಯಕರ ಬ್ಯಾಲೆನ್ಸ್ ತಂತ್ರ
ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಟ್ಟರೂ ಅವರ ವರ್ಚಸ್ಸಿಗೆ ಯಾವುದೇ ಧಕ್ಕೆ ಬಾರದಂತೆ ಹೈಕಮಾಂಡ್ ಎಚ್ಚರಿಕೆ ವಹಿಸಿದೆ. ಒಂದು ಕಡೆ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯದ ಚುಕ್ಕಾಣಿ ನೀಡಿದರೆ, ಮತ್ತೊಂದೆಡೆ ಸಿದ್ದರಾಮಯ್ಯ ಅವರಿಗೆ ದೇಶದ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಿಡಬ್ಲ್ಯೂಸಿ ಸ್ಥಾನ ನೀಡಲಾಗಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್ನಲ್ಲಿ ಯಾವುದೇ ಅಸಮಾಧಾನ ಮೂಡದಂತೆ ಹೈಕಮಾಂಡ್ ಹೆಜ್ಜೆ ಇಟ್ಟಿದೆ. ರಾಜ್ಯ ರಾಜಕಾರಣದ ಇಬ್ಬರೂ ಪ್ರಮುಖ ನಾಯಕರನ್ನು ಸಮಾನವಾಗಿ ಮುನ್ನಡೆಸುವ ನಿಟ್ಟಿನಲ್ಲಿ ಹೈಕಮಾಂಡ್ ಈ ಸಮಬಲದ ತಂತ್ರವಿಧಾನ ಅನುಸರಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಹಿಂದೆ ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದೇ ಸಿದ್ದರಾಮಯ್ಯ ನೇರವಾಗಿ ಹೇಳಿದ್ದರು. ಇದೀಗ ಹೈಕಮಾಂಡ್ ನೀಡಿರುವ ಈ ಸ್ಥಾನವನ್ನು ಸಿದ್ದರಾಮಯ್ಯ ಪರಿಗಣಿಸುತ್ತಾರಾ ಎನ್ನುವುದು ಕಾದುನೋಡಬೇಕಿದೆ.













Click it and Unblock the Notifications