ಆರ್ಎಸ್ಎಸ್ ಸಂಸ್ಥಾಪಕ ಹೆಡಗೇವಾರ್ ಕುರಿತ ಅಧ್ಯಾಯ ಕೈಬಿಡಲು ಸಿದ್ದರಾಮಯ್ಯ ಸರ್ಕಾರ ತೀರ್ಮಾನ
ಬೆಂಗಳೂರು, ಜೂನ್ 08: ಆರ್ಎಸ್ಎಸ್ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡಗೇವಾರ್ ಅವರ ಕುರಿತು ರಾಜ್ಯ ಪಠ್ಯಕ್ರಮದಲ್ಲಿ ಸೇರಿಸಲಾಗಿದ್ದ ಅಧ್ಯಾಯವನ್ನು ಕೈಬಿಡಲಾಗುತ್ತಿದೆ. ಕಳೆದ ಪರಿಷ್ಕರಣೆ ಸಂದರ್ಭದಲ್ಲಿ ಹೆಡಗೇವಾರ್ಗೆ ಸಂಬಂಧಿಸಿದ್ದ ಪಾಠವನ್ನು ಅಳವಡಿಸಲಾಗಿತ್ತು. ಈ ಶೈಕ್ಷಣಿಕ ವರ್ಷದಲ್ಲಿ ಅದನ್ನು ಕೈಬಿಡಲಾಗುತ್ತದೆ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹೇಳಿದೆ.
ಮಂಗಳವಾರ ಸಿಎಂ ಸಿದ್ದರಾಮಯ್ಯ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಶೈಕ್ಷಣಿಕ ಸುಧಾರಣೆಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಹಿಂದಿನ ಬಿಜೆಪಿ ಸರ್ಕಾರವು ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವಾಗ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ಜಾರಿಗೊಳಿಸುವಾಗ ಮಾಡಿದ ಬದಲಾವಣೆಗಳನ್ನು ರದ್ದುಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಮತ್ತು ಮಧು ಬಂಗಾರಪ್ಪ ಹೇಳಿದರು.
ಸಭೆಯ ನಂತರ, ಬಿಜೆಪಿ ಸರ್ಕಾರವು ಪಠ್ಯಪುಸ್ತಕಗಳಲ್ಲಿ ಸೇರಿಸಿರುವ ಅಧ್ಯಾಯಗಳನ್ನು ಅಧ್ಯಯನ ಮಾಡಲು ಮತ್ತು ಪರಿಷ್ಕರಿಸಲು ಸಮಿತಿಯನ್ನು ರಚಿಸುವಂತೆ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಈ ಶೈಕ್ಷಣಿಕ ವರ್ಷದ ಪಠ್ಯಪುಸ್ತಕ ವಿತರಣೆ
ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ, ಪರಿಷ್ಕರಣೆ ಕುರಿತು ಶೀಘ್ರದಲ್ಲೇ ಸುತ್ತೋಲೆ ಹೊರಡಿಸಲಾಗುವುದು. ಆದರೆ ಈಗಾಗಲೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿರುವುದರಿಂದ ಈಗ ಸರಿಯಾದ ಪರಿಷ್ಕರಣೆ ನಡೆಯುತ್ತಿಲ್ಲ ಎಂದು ಹೇಳಲಾಗಿದೆ.

'ಈ ಶೈಕ್ಷಣಿಕ ವರ್ಷಕ್ಕೆ ಈಗಾಗಲೇ ಪಠ್ಯಪುಸ್ತಕಗಳನ್ನು ವಿತರಿಸಲಾಗಿದೆ, ಆದ್ದರಿಂದ ತರಗತಿಗಳಿಗೆ ಅಡ್ಡಿಪಡಿಸಬಾರದು ಎಂದು ಸಚಿವರು ತಿಳಿಸಿರುವುದರಿಂದ ಪರಿಷ್ಕರಣೆ ನಡೆಯುವ ಸಾಧ್ಯತೆಯಿಲ್ಲ. ಆದರೆ, ಆ ಪಾಠಗಳನ್ನು ಕೈಬಿಡುವಂತೆ ಶಿಕ್ಷಕರಿಗೆ ಸೂಚಿಸಲಾಗುವುದು' ಎಂದು ಮೂಲಗಳು ತಿಳಿಸಿವೆ.
2022-23 ಶೈಕ್ಷಣಿಕ ವರ್ಷಕ್ಕೆ ಮುಂಚಿತವಾಗಿ, ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಯಿತು. 10ನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಆರ್ಎಸ್ಎಸ್ ಸಂಸ್ಥಾಪಕರ ಕುರಿತ ಅಧ್ಯಾಯವನ್ನು ಸೇರಿಸಿರುವುದು ಅತ್ಯಂತ ಗಮನಾರ್ಹ ಮತ್ತು ವಿವಾದಾತ್ಮಕ ಪರಿಷ್ಕರಣೆಯಾಗಿದೆ. ಬಿಜೆಪಿ ಸರ್ಕಾರವು ಶಾಲಾ ಹಂತದಲ್ಲಿ ಶಿಕ್ಷಣದ ಕೇಸರಿಕರಣವನ್ನು ಪ್ರೋತ್ಸಾಹಿಸುತ್ತಿದೆ ಎಂದು ಆರೋಪಿಸಿ ಆಗಿನ ಪ್ರತಿಪಕ್ಷ ಕಾಂಗ್ರೆಸ್ ಈ ಕ್ರಮವನ್ನು ಬಲವಾಗಿ ಟೀಕಿಸಿತ್ತು.












Click it and Unblock the Notifications