ದೀಪಾವಳಿ ಕೊಡುಗೆ: ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ
Recommended Video
ಬೆಂಗಳೂರು, ಅಕ್ಟೋಬರ್ 06: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆಯಾಗಿ ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ.
ಹಣಕಾಸು ಖಾತೆ ಹೊಂದಿರುವ ಸಿದ್ದರಾಮಯ್ಯ ಅವರು ತುಟ್ಟಿಭತ್ಯೆ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿ ಮಂಜೂರಾತಿ ನೀಡಿದ್ದಾರೆ. ನೌಕರರ ಮೂಲವೇತನದ ಶೇ. 4.25ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡುವ ನಿರೀಕ್ಷೆಯಿತ್ತು. ಆದರೆ, ಶೇ 2ರಷ್ಟು ಮಾತ್ರ ಹೆಚ್ಚಳವಾಗಿದ್ದು, ಇದು ಜುಲೈ 1ರಿಂದಲೇ ಅನ್ವಯವಾಗಲಿದೆ.
ಈ ಕೊಡುಗೆಯಿಂದ ಸುಮಾರು 6 ಲಕ್ಷ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ. ತುಟ್ಟಿಭತ್ಯೆ ಹೆಚ್ಚಳದಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಅಂದಾಜು 660 ಕೋಟಿ ರೂ. ಹೆಚ್ಚಿಗೆ ಹೊರೆಯಾಗಲಿದೆ.
ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯಸರ್ಕಾರವೂ ನೌಕರರ ತುಟ್ಟಿಭತ್ಯೆ ಮಾಡುವ ನಿರೀಕ್ಷೆಯಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರ ವಿಳಂಬ ನೀತಿ ಅನುಸರಿಸಿತು.
ರಾಜ್ಯ ಸರ್ಕಾರಿ ನೌಕರರು, ಜಿಲ್ಲಾ ಪಂಚಾಯತ್ ಗಳ ಪೂರ್ಣಾವಧಿ ನೌಕರರು, ಕಾಲಿಕ ವೇತನ ಶ್ರೇಣಿಗಳಲ್ಲಿ ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರು, ಸರ್ಕಾರದ ಸಹಾಯಾನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳ, ವಿಶ್ವವಿದ್ಯಾಲಯಗಳ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಳದ ಲಾಭ ದೊರೆಯಲಿದೆ.
ಸರ್ಕಾರಿ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುವವರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಈ ಹೆಚ್ಚಳ ಅನ್ವಯವಾಗಲಿದೆ.
ತುಟ್ಟಿ ಭತ್ಯೆ(dearness allowance) : ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.