Alok Kumar: ರಾಜ್ಯ ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭರ್ಜರಿ ಸರ್ಜರಿ!
ಕರ್ನಾಟಕ ಪೊಲೀಸ್ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಇಂದು ಭರ್ಜರಿ ಸರ್ಜರಿ ಮಾಡಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಅಧಿಕಾರಿಗಳ ವರ್ಗಾವಣೆ ಆಗಿದೆ. ಅದರಲ್ಲೂ ಹಲವು ಐಎಎಸ್ ಅಧಿಕಾರಿಗಳನ್ನು ಟ್ರಾನ್ಸ್ಫರ್ ಮಾಡಲಾಗಿದ್ದು, ಈ ನಡುವೆ ಐಪಿಎಸ್ ಅಧಿಕಾರಿಗಳಿಗೆ ಕೂಡ ವರ್ಗಾವಣೆ ಭಾಗ್ಯ ಸಿಕ್ಕಿದೆ. ಅಲೋಕ್ ಕುಮಾರ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳನ್ನ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಹೌದು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳನ್ನ ಇಂದು ಸಿದ್ದರಾಮಯ್ಯ ಅವರ ಸರ್ಕಾರ ವರ್ಗಾವಣೆ ಮಾಡಿದೆ. ಈ ಬಗ್ಗೆ ಆದೇಶ ಹೊರಡಿಸಲಾಗಿದ್ದು, ಪೊಲೀಸ್ ಇಲಾಖೆಯಲ್ಲೂ ಮಹತ್ವದ ಬದಲಾವಣೆಗೆ ಮುಂದಾಗಿದೆ. ಹಾಗಾದರೆ ಎಡಿಜಿಪಿ ಅಲೋಕ್ ಕುಮಾರ್ ಅವರ ಜೊತೆಗೆ ಬೇರೆ ಯಾವೆಲ್ಲಾ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆಗಿದೆ? ಹಾಗೇ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಇದೀಗ ಸಿಕ್ಕಿರುವ ಇಲಾಖೆ ಯಾವುದು? ಸಂಪೂರ್ಣ ಮಾಹಿತಿ ಇಲ್ಲಿದೆ ಮುಂದೆ ಓದಿ.

ಎಡಿಜಿಪಿ ಅಲೋಕ್ಗೆ ಯಾವ ಇಲಾಖೆ?
ರಾಜ್ಯದಲ್ಲಿ ತಮ್ಮ ಕೆಲಸದ ಮೂಲಕವೇ ಗಮನ ಸೆಳೆದ ಕೆಲವೇ ಪೊಲೀಸ್ ಅಧಿಕಾರಿಗಳ ಪೈಕಿ ಎಡಿಜಿಪಿ ಅಲೋಕ್ ಕುಮಾರ್ ಕೂಡ ಒಬ್ಬರು. ಈಗ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದಿಂದ ವರ್ಗಾವಣೆ ಮಾಡಲಾಗಿದೆ. ಇದೀಗ ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ, ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿಯಾಗಿ ಅಲೋಕ್ ಕುಮಾರ್ರನ್ನ ವರ್ಗಾವಣೆ ಮಾಡಿದೆ ಸಿದ್ದರಾಮಯ್ಯ ಅವರ ಸರ್ಕಾರ. ಹಾಗೇ ಮತ್ತೊಬ್ಬ ಐಪಿಎಸ್ ಅಧಿಕಾರಿಯನ್ನೂ ವರ್ಗಾವಣೆ ಮಾಡಲಾಗಿದೆ.
ಡಾ.ಕೆ.ರಾಮಚಂದ್ರ ರಾವ್ ವರ್ಗಾವಣೆ
ಐಪಿಎಸ್ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ಅವರ ಜೊತೆಗೆ ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಎಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರನ್ನು ಕೂಡ ವರ್ಗಾವಣೆ ಮಾಡಲಾಗಿದೆ. ಡಾ.ಕೆ.ರಾಮಚಂದ್ರ ರಾವ್ ಅವರಿಗೆ ಇದೀಗ ಡಿಜಿಪಿ ಹುದ್ದೆಗೆ ಭಡ್ತಿ ನೀಡಿರುವ ರಾಜ್ಯ ಸರ್ಕಾರ, ಪೊಲೀಸ್ ವಸತಿ & ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹೀಗೆ ಕರ್ನಾಟಕ ಬಂದ್ ನಡುವೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ರೋಹಿಣಿ, ರೂಪಾ ಅವರಿಗೂ ಅಧಿಕಾರ!
ಒಟ್ನಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಬಗ್ಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಇದೀಗ ಹಲವು ಅಧಿಕಾರಿಗಳ ವರ್ಗಾವಣೆಗೆ ಆದೇಶ ನೀಡಿದ್ದಾರೆ. ಮತ್ತೊಂದು ಕಡೆ ಕೆಲ ದಿನಗಳ ಹಿಂದೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೂ ಅಧಿಕಾರ ನೀಡಲಾಗಿತ್ತು. ಇದೀಗ ದಿಢೀರ್ ಮತ್ತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಬರೋಬ್ಬರಿ 7 ತಿಂಗಳ ಬಳಿಕ IAS ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಅಧಿಕಾರ ನೀಡಿ, ಕರ್ನಾಟಕ ಗೆಜೆಟಿಯರ್ ಚೀಫ್ ಎಡಿಟರ್ ಆಗಿ ಆದೇಶ ಹೊರಡಿಸಿತ್ತು ರಾಜ್ಯ ಸರ್ಕಾರ. ಹಾಗೇ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೂ ಅಧಿಕಾರವನ್ನ ನೀಡಿತ್ತು ಸಿದ್ದರಾಮಯ್ಯ ಸರ್ಕಾರ. ಈ ಹಿಂದೆ ಈ ಇಬ್ಬರೂ ಅಧಿಕಾರಿಗಳ ಮನಸ್ತಾಪವು, ಬಿಜೆಪಿ ಸರ್ಕಾರಕ್ಕೆ ದೊಡ್ಡ ಸಂಕಷ್ಟ ತಂದೊಡ್ಡಿತ್ತು. ಇದೇ ಕಾರಣಕ್ಕೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೆ ಅಧಿಕಾರ ನೀಡದೆ ಅಂದಿನ ಸಿಎಂ ಬೊಮ್ಮಾಯಿ ಅವರು ವರ್ಗಾವಣೆಗೆ ಆದೇಶ ನೀಡಿದ್ದರು. ಆದರೆ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಬ್ಬರಿಗೂ ಅಧಿಕಾರ ಸಿಕ್ಕಿದೆ.












Click it and Unblock the Notifications