Cabinet Meeting: ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ತೀರ್ಮಾನ: ಕ್ಯಾಬಿನೆಟ್ನ ಪ್ರಮುಖ ಹೈಲೈಟ್ಸ್ ಇಲ್ಲಿವೆ
ಬೆಂಗಳೂರು, ಅಕ್ಟೋಬರ್ 28: ಪರಿಶಿಷ್ಟ ಜಾತಿಗೆ (ಎಸ್ಸಿ) ಒಳ ಮೀಸಲಾತಿ ಕಲ್ಪಿಸುವ ವಿಚಾರ ಕುರಿತು ಇಂದು(ಸೋಮವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಯಾಗಿದ್ದು, ಅಂತಿಮವಾಗಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ತೀರ್ಮಾನ ಮಾಡಿದೆ.
ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಕೊನೆಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ. ಇಂದು (ಅಕ್ಟೋಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸಲು ನಿರ್ಣಯಿಸಲಾಗಿದ್ದು, ನಿವೃತ್ತ ಹೈ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ವರದಿ ಸಲ್ಲಿಕೆಗೆ ಸೂಚಿಸಲಾಗಿದೆ.

ನಿವೃತ್ತ ಹೈ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದೆ. ಅಲ್ಲದೇ ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡಲು ಆಯೋಗಕ್ಕೆ ಸೂಚನೆ ನೀಡಲಾಗಿದೆ. ನೇಮಕಾತಿ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ. ಯಾವುದೇ ನೇಮಕಾತಿ ಮಾಡದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಅವರು ಮಾತನಾಡಿ, ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ಬೆಳಗಾವಿಯಲ್ಲಿ ಡಿಸೆಂಬರ್ ಎರಡು ಇಲ್ಲವೇ ಮೂರನೇ ವಾರದಲ್ಲಿ ನಡೆಸಲಾಗುವುದು. ಚಳಿಗಾಲದ ಅಧಿವೇಶನದ ದಿನಾಂಕ ನಿರ್ಧಾರ ಮಾಡುವುದನ್ನು ಮುಖ್ಯಮಂತ್ರಿ ವಿವೇಚನೆಗೆ ಬಿಡಲಾಗುವುದು ಎಂದರು.
ಹಾಸನ ಮೇಲ್ದರ್ಜೆಗೆ
ಹಾಸನ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ದೊರೆತಿದೆ. ಬೀದರ್ ವಿಮಾನಯಾನ ಕಾರ್ಯಾಚರಣೆಗೂ ಅನುಮೋದನೆ ದೊರೆತಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಮೂಲಸೌಕರ್ಯ ಕಲ್ಪಿಸಲು 39.07 ಕೋಟಿ ರೂ. ಅಂದಾಜು ವೆಚ್ಚಕ್ಕೆ ಒಪ್ಪಿಗೆ ದೊರೆತಿದೆ ಎಂದ ಅವರು, ರಾಯಚೂರು ವಿಶ್ವವಿದ್ಯಾಲಯಕ್ಕೆ ವಾಲ್ಮೀಕಿ ಹೆಸರನ್ನು ಮರುನಾಮಕರಣ ಮಾಡಲು ಸಮತಿಸಿದೆ ಎಂದು ಹೇಳಿದರು.
ಕರ್ನಾಟಕ ಗೃಹಮಂಡಳಿಯು ಆನೇಕಲ್ ತಾಲ್ಲೂಕು ಸೂರ್ಯನಗರದ ಒಂದನೇ ಹಂತದಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಎರಡು ಬಹುಮಹಡಿ ವಸತಿ ಸಮುಚ್ಚಯಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. 101 ಕೋಟಿ ರೂ. ಅಂದಾಜು ಮೊತ್ತದ ಈ ಯೋಜನೆಗೆ ಆಡಳಿತಾತಕ ಅನುಮೋದನೆ ದೊರೆತಿದೆ ಎಂದು ಹೇಳಿದರು.
ಬೆಳಗಾವಿ, ಸಂಡೂರು ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅದನ್ನು ಪಾಲನೆ ಮಾಡುವ ಬಗ್ಗೆ ಸೂಕ್ತ ನಿರ್ದೇಶನ ನೀಡಲು ನಿರ್ಣಯಿಸಲಾಗಿದೆ.
ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ 33 ಘಟಕಗಳನ್ನು ವಿಶೇಷ ಪೊಲೀಸ್ ಠಾಣೆಗಳೆಂದು ಘೋಷಿಸಲು ತೀರ್ಮಾನಿಸಲಾಗಿದೆ. ಈ ಠಾಣೆಗಳ ನಿರ್ವಹಣೆಗೆ ಅಗತ್ಯವಿರುವ 450 ವಿವಿಧ ಹುದ್ದೆಗಳಿಗೂ ಮಂಜೂರಾತಿ ನೀಡಲಾಗಿದೆ. ಪರಿಶಿಷ್ಟರ ದೌರ್ಜನ್ಯ ಪ್ರಕರಣಗಳ ತುರ್ತು ವಿಲೇವಾರಿಗಾಗಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಸ್ಥಾಪಿಸಲಾಗುತ್ತದೆ ಎಂದು ಹೇಳಿದರು.
ಶಿವಮೊಗ್ಗ ವಿಮಾನನಿಲ್ದಾಣ ಅಭಿವೃದ್ಧಿಗೆ ಸಂಬಂಧಿಸಿದ 127 ಕೋಟಿ ರೂ. ಮೊತ್ತದ ಪರಿಷ್ಕೃತ ಅಂದಾಜು ಮೊತ್ತಕ್ಕೆ ಸಮತಿಸಲಾಗಿದೆ. ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಬಾರದಿದ್ದರೆ ಪರಿಶೀಲಿಸುತ್ತೇವೆ ಎಂದು ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹೇಳಿದರು.












Click it and Unblock the Notifications