ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರದ ಪಿತಾಮಹ
ಮಂಡ್ಯ, ಏ. 14 : ಲೋಕಸಭೆ ಚುನಾವಣೆ ಪ್ರಚಾರಕ್ಕೆ ಒಂದು ದಿನ ಬಾಕಿ ಉಳಿದಿರುವಂತೆಯೇ ನಾಯಕರ ಆರೋಪ ಪ್ರತ್ಯಾರೋಪಗಳು ಮುಗಿಲು ಮುಟ್ಟಿವೆ. "ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಾಚಾರದ ಪಿತಾಮಹ" ಎಂದು ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಆರೋಪಿಸಿದ್ದಾರೆ.
ಸೋಮವಾರ ಕೆ.ಆರ್.ಪೇಟೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶಿವಲಿಂಗಯ್ಯ ಪರವಾಗಿ ಪ್ರಚಾರ ನಡೆಸಿದ ಕೆಎಸ್ ಈಶ್ವರಪ್ಪ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮರಳು ಸೇರಿದಂತೆ ಇತರೆ ಮಾಫಿಯಾದಿಂದ ತಮ್ಮ ಶಿಷ್ಯಂದಿರ ಮೂಲಕ ಕೋಟ್ಯಂತರ ರೂಗಳನ್ನು ಲೂಟಿ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರದ 'ಪಿತಾಮಹ' ಎಂದು ದೂರಿದರು.

ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರು ಹಗರಣಗಳನ್ನು ನಡೆಸಿದ್ದಾರೆ ಎಂದು ಆರೋಪಿಸುತ್ತಾರೆ. ರಾಜ್ಯದಲ್ಲೇ ನಿಮ್ಮದೇ ಸರ್ಕಾರವಿದೆ. "ಮುಖ್ಯಮಂತ್ರಿಗಳು ತಾಕತ್ತಿದ್ದರೆ ಬಿಜೆಪಿ ಮುಖಂಡರು ನಡೆಸಿರುವ ಹಗರಣಗಳನ್ನು ಸಿಬಿಐ ತನಿಖೆಗೆ ವಹಿಸಲಿ" ಎಂದು ಈಶ್ವರಪ್ಪ ಸವಾಲು ಹಾಕಿದರು. [ಎಲ್ಲಿದೆ ಮೋದಿ ಅಲೆ : ಸಿಎಂ ಸಿದ್ದು]
ಸಿದ್ದರಾಮಯ್ಯ ಅಧಿಕಾರದ ಅಮಲಿನಲ್ಲಿ ತೇಲುತ್ತಿದ್ದಾರೆ. ಆದ್ದರಿಂದ ತಮ್ಮ ಹುದ್ದೆಯ ಘನೆತೆಯನ್ನು ಮರೆತು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ತಮ್ಮ ಶಿಷ್ಯಂದಿರು ನಡೆಸುತ್ತಿರುವ ಹಗರಣಗಳನ್ನು ಮುಚ್ಚಿ ಹಾಕಲು ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದರು. [ಅಂಬರೀಶ್ ಅವರನ್ನು ಮಂಡ್ಯದ ಜನ ಸ್ವಾಗತಿಸಿದ್ದು ಹೇಗೆ?]
ದೇಶದ ತುಂಬಾ ನರೇಂದ್ರ ಮೋದಿ ಅಲೆ ಬೀಸುತ್ತಿದೆ. ಇದನ್ನು ಎದುರಿಸಲು ಸಾಧ್ಯವಾಗದ ಕಾಂಗ್ರೆಸ್ ಬಿಜೆಪಿ ನಾಯಕರ ವಿರುದ್ಧ ಆಧಾರವಿಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಈಶ್ವರಪ್ಪ ಹೇಳಿದರು. ಕರ್ನಾಟಕದಲ್ಲಿ ಬಿಜೆಪಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲವು ಸಾಧಿಸುವ ಮೂಲಕ ಮೋದಿ ಅವರಿಗೆ ಶಕ್ತಿ ತುಂಬಲಿದೆ ಎಂದು ಈಶ್ವರಪ್ಪ ವಿಶ್ವಾಶ ವ್ಯಕ್ತಪಡಿಸಿದರು.
ಪ್ರಚಾರ ಸಭೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೊ.ಬಿ.ಶಿವಲಿಂಗಯ್ಯ, ಯುವ ಮುಖಂಡರಾದ ಕೆ.ಜೆ.ವಿಜಯಕುಮಾರ್, ಆರ್ ಎಸ್ಎಸ್ ಮುಖಂಡ ಮಂಜುನಾಥ, ಕೆ.ಎಸ್.ಸುರೇಶ್ ಮುಂತಾದವರು ಪಾಲ್ಗೊಂಡಿದ್ದರು.












Click it and Unblock the Notifications