ಪರಿಷತ್ ಅಭ್ಯರ್ಥಿಗಳ ಪಟ್ಟಿ ಹಿಡಿದು ದೆಹಲಿಗೆ ಹೊರಟ ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 01 : ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ.
ಮಂಗಳವಾರ ಸಂಜೆ ಸಿದ್ದರಾಮಯ್ಯ ಮತ್ತು ಗೃಹ ಸಚಿವ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ದೆಹಲಿಗೆ ತೆರಳಲಿದ್ದಾರೆ. ಬುಧವಾರ ಬೆಳಗ್ಗೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಒಪ್ಪಿಗೆ ಪಡೆಯಲಿದ್ದಾರೆ. [ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ]

ಶಿಕ್ಷಕರ, ಪದವೀಧರರ ಕ್ಷೇತ್ರಗಳು ಹಾಗೂ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಬಿಜೆಪಿ ಈಗಾಗಲೇ 12 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. [ನಾನು ಎಂಎಲ್ಸಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದ ರಮ್ಯಾ]
25 ಸ್ಥಾನಗಳಿಗೆ ಹಲವಾರು ಆಕಾಂಕ್ಷಿಗಳಿದ್ದು ಪಟ್ಟಿ ಅಂತಿಮಗೊಳಿಸಲು ವಿಳಂಬವಾಗುತ್ತಿದೆ. ಜೆಡಿಎಸ್ ಪಕ್ಷವೂ ಕಾಂಗ್ರೆಸ್ ಪಟ್ಟಿ ಬಿಡುಗಡೆಯನ್ನು ಎದುರು ನೋಡುತ್ತಿದೆ. ಇದುವರೆಗೂ ಪಟ್ಟಿ ಬಿಡುಗಡೆ ಮಾಡದ ಜೆಡಿಎಸ್, ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದವರನ್ನು ಪಕ್ಷಕ್ಕೆ ಸೆಳೆದು ಟಿಕೆಟ್ ನೀಡುವ ಸಾಧ್ಯತೆ ಇದೆ. [ಪರಿಷತ್ ಚುನಾವಣೆ ವೇಳಾಪಟ್ಟಿ]
ಡಿಸೆಂಬರ್ 2ರ ಬುಧವಾರದಿಂದ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಡಿಸೆಂಬರ್ 9 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅಷ್ಟರೊಳಗೆ ಅಭ್ಯರ್ಥಿಗಳನ್ನು ಅಂತಿಗೊಳಿಸಬೇಕಾಗಿದೆ. ಹಾಲಿ ಸದಸ್ಯರಿಗೆ ಟಿಕೆಟ್ ನೀಡುವ ಪ್ರಸ್ತಾವನೆ ಪಕ್ಷದ ಮುಂದಿದ್ದು, ಇದಕ್ಕೆ ಹೈಕಮಾಂಡ್ ಒಪ್ಪಿಗೆ ನೀಡಲಿದೆಯೇ? ಎಂಬುದು ಸದ್ಯದ ಪ್ರಶ್ನೆಯಾಗಿದೆ.












Click it and Unblock the Notifications