ಬಿಜೆಪಿ ನಡೆಸಿದ ಆಂತರಿಕ ಸಮೀಕ್ಷೆ ಗೆದ್ದ ಸ್ಥಾನಗಳೆಷ್ಟು? ಬಹಿರಂಗ ಪಡಿಸಿದ ಸಿದ್ದರಾಮಯ್ಯ
ಮೈಸೂರು, ಏಪ್ರಿಲ್ 01: ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು ಗೆಲ್ಲುವುದೂ ಕಷ್ಟ ಎನ್ನುವುದು ಗೊತ್ತಾಗಿದೆ. ಹೀಗಾಗಿ ತಂತ್ರಗಾರಿಕೆ ಕಾರಣದಿಂದ 400 ಸೀಟು ಗೆಲ್ಲುವುದಾಗಿ ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗ ಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ ಎಂದು ಹೊರಟವರೇ ಜನರ ಎದುರು ಮೂರ್ಖರಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಈ ಬಾರಿ 400 ದಾಟುತ್ತೇವೆ ಎಂದು ಪ್ರಧಾನಿ ಮೋದಿಯವರು ತಮ್ಮ ಭಾಷಣದಲ್ಲಿ ಹೇಳಿಕೊಂಡಿರುವ ಬಗ್ಗೆ ಮಾತನಾಡಿ, ಬಿಜೆಪಿಯದ್ದು ಅಭಿವೃದ್ಧಿ ಶೂನ್ಯ ಸಾಧನೆ. ಮೋದಿಯವರ ಸುಳ್ಳಿನ ಪಿಕ್ಚರ್ ಇನ್ನೂ ಬಾಕಿ ಇದೆ. ಸುಳ್ಳಿನ ಕನಸುಗಳನ್ನು ಬಿತ್ತುತ್ತಾ ಬಂದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 20 ಸೀಟುಗಳವರೆಗೆ ಗೆದ್ದೇ ಗೆಲ್ಲುತ್ತದೆ. ಸೋಲುವ ಭಯಕ್ಕೆ ಒಳಗಾಗಿರುವ ಬಿಜೆಪಿಯವರು ಕರ್ನಾಟಕದಲ್ಲಿ ಬಿಜೆಪಿ 28 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದರು.
ಕೇಂದ್ರ ಗೃಹಸಚಿವರ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಯತೀಂದ್ರ ಸಿದ್ದರಾಮಯ್ಯರವರಿಗೆ ಸಂಸ್ಕಾರದ ಪಾಠವನ್ನು ಬಿಜೆಪಿ ಹೇಳುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿಯವರಿಗೆ ಸಂಸ್ಕಾರವಿಲ್ಲ. ಯತೀಂದ್ರ ಅವರು ಸಿಬಿಐ ನವರು ಕೊಟ್ಟಿರುವ ರಿಪೋರ್ಟ್ ಆಧಾರದ ಮೇಲೆ ಹೇಳಿಕೆಯನ್ನು ನೀಡಿದ್ದಾರೆಯೇ ಹೊರತು, ಅಮಿತ್ ಶಾ ಅವರಿಗೆ ಅವಮಾನ ಮಾಡುವ ಉದ್ದೇಶ ಅವರಿಗೆ ಇಲ್ಲ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ಇತರೆ ಪಕ್ಷಗಳಿಂದ ಜನರು ಬರುವ ಸಾಧ್ಯತೆಯಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ಪಕ್ಷಕ್ಕೆ ಬಹಳಷ್ಟು ಜನರು ಸೇರ್ಪಡೆಯಾಗಲು ಉತ್ಸುಕರಿದ್ದಾರೆ. ಕಾಂಗ್ರೆಸ್ ಸಿದ್ಧಾಂತವನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷದಲ್ಲಿ ಸ್ವಾಗತವಿದೆ ಎಂದರು.
ರಾಜ್ಯದಲ್ಲಿ ಪ್ರಧಾನಿ ಮೋದಿಯವರು ರ್ಯಾಲಿ ಪ್ರಾರಂಭಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ವಿಧಾನಸಭಾ ಚುನಾವಣೆಯಲ್ಲಿಯೂ ಮೋದಿಯವರು ಪ್ರಚಾರ ಕೈಗೊಂಡಿದ್ದರೂ, ಬಿಜೆಪಿ ಗೆಲ್ಲಲು ಸಾಧ್ಯವಾಗಲಿಲ್ಲ. ಕೇಂದ್ರದಲ್ಲಿ ಮೋದಿ ಸರ್ಕಾರದ ವೈಫಲ್ಯಗಳು ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಗೆಲುವನ್ನು ಖಾತ್ರಿಪಡಿಸಿದೆ ಎಂದರು. ಮೋದಿ ಗ್ಯಾರಂಟಿ ಗಳ ಬಗ್ಗೆ ಮಾತನಾಡಿ ನಮ್ಮಿಂದ ಗ್ಯಾರಂಟಿ ಪದವನ್ನು ಕದ್ದಿದ್ದಾರೆ ಎಂದರು.
2014 ರಲ್ಲಿ 47 ರೂ.ಗಳಿದ್ದ ಡೀಸೆಲ್ ಬೆಲೆ ಈಗ 97 ರೂಗಳಾಗಿದೆ. 77ರೂ.ಗಳಿದ್ದ ಪೆಟ್ರೋಲ್ ಬೆಲೆ ಈಗ 105ರೂ.ಗಳಾಗಿದೆ. ಅಡುಗೆ ಅನಿಲ ಬೆಲೆಯನ್ನು ಚುನಾವಣೆ ಸಂದರ್ಭ ದಲ್ಲಿ ಇಳಿಸಿದ್ದಾರೆ. ಈ ಬೆಲೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 414ರೂ.ಗಳಿತ್ತು. ನಮ್ಮ ಕಾಲಕ್ಕಿಂತಲೂ ಬಿಜೆಪಿ ಕಾಲದಲ್ಲಿ ಬೆಲೆ ಹೆಚ್ಚಾಗಿದೆ ಎಂದರು.ಜನರ ಮೇಲೆ ಇದು ಭಾರವಾಗಿಲ್ಲವೆ ಎಂದರು.
ಮಾಜಿ ಪ್ರಧಾನಿ ದೇವೇಗೌಡರು ಮುಖ್ಯಮಂತ್ರಿಗಳ ಗರ್ವಭಂಗವಾಗಬೇಕೆಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನನಗೆ ಯಾವ ಗರ್ವವೂ ಇಲ್ಲ. ದೇವೇಗೌಡರು ಹೇಳಿದ್ದಕ್ಕೆ ಹೇಳಿಕೆ ನೀಡಿದ್ದೇನೆ ಎಂದರು. ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದು ಹೇಳಿದ್ದು ನಿಜ. ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಅದನ್ನು ಹೇಳಿದರೆ ತಪ್ಪೇ ಎಂದರು.
ತಮಗೆ ಮೋದಿಯವರೊಂದಿಗೆ ಅವಿನಾಭಾವ ಸಂಬಂಧವಿದೆ ಎಂದು ದೇವೇಗೌಡರು ಹೇಳಿದ್ದಾರೆ. ಹಾಗಾದರೆ ಮೇಕೆದಾಟು ಅಣೆಕಟ್ಟು ಮಾಡಿಸಲಿ. ಸುಳ್ಳು ಯಾಕೆ ಹೇಳುತ್ತಾರೆ. ಎನ್.ಡಿ.ಎ ಬಂದರೆ ಮಾಡಿಸುತ್ತಾರೆ ಎನ್ನುವವರು ಈಗಲೇ ಮಾಡಿಸಲಿ ಎಂದರು. ಸತ್ಯ ಹೇಳಿದರೆ ಅವರ ದೃಷ್ಟಿಯಲ್ಲಿ ಗರ್ವ. ಸುಳ್ಳು ಹೇಳಿದವರು ಅವರು. ನಾನು ಸತ್ಯ ಹೇಳಿದರೆ ಗರ್ವ ಎನ್ನುತ್ತಾರೆ. ಇದಕ್ಕೆ ಏನು ಮಾಡುವುದು ಎಂದರು.
ಮೈತ್ರಿ ಎಂದರೇನು ಎಂದು ಈ ಬಾರಿ ತೋರಿಸುತ್ತೇವೆ ಎಂಬ ಹೇಳಿಕೆಗೆ ಉತ್ತರಿಸಿ ಕಳೆದ ಬಾರಿಯೂ ತೋರಿಸಿದ್ದರಲ್ಲ ಎಂದು ವ್ಯಂಗ್ಯವಾಡಿದರು. ನಾವು ಜೊತೆಯಾಗುವುದಲ್ಲ ಜನರು ಜೊ ತೆಯಾಗಬೇಕು. ಜನರು ಯಾವ ಪಕ್ಷಕ್ಕೂ ಸೇರಿದವರಲ್ಲ.ಬಡವರ ಹಸಿವು ನೀಗಿಸಬೇಕು ಎಂದು ತಿಳಿಸಿದರು.












Click it and Unblock the Notifications