ಸಿಎಂ ಸಿದ್ದರಾಮಯ್ಯ ಜನತಾದರ್ಶನಕ್ಕೆ ಹೆಚ್ ಡಿ ಕುಮಾರಸ್ವಾಮಿ ಕೌಂಟರ್: ಹೀಗೆ ಹೇಳಿದ್ಯಾಕೆ?
ಬೆಂಗಳೂರು,ನವೆಂಬರ್ 27: ಸಿಎಂ ಸಿದ್ಧರಾಮಯ್ಯ ಅವರು ಜನತಾದರ್ಶನ ಮಾಡುವುದಾಗಿ ಜಾಹೀರಾತು ಕೊಟ್ಟು ಹೇಳಿದ್ದಾರೆ. ಅವರ ಜನತಾದರ್ಶನ ಜಾಹೀರಾತಿಗೆ ಸೀಮಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟಾಂಗ್ ನೀಡಿದ್ದಾರೆ.
ಜನರ ತೆರಿಗೆ ಖರ್ಚು ಮಾಡಿ ಜಾಹಿರಾತು ನೀಡ್ತಿದಾರೆ. ಪ್ರತಿ ದಿನ ಆ ಜಾಹೀರಾತುಗಳಲ್ಲಿ ಸುಳ್ಳು ಹೇಳುತ್ತಿದ್ದಾರೆ. ನಾನು, ಯಡಿಯೂರಪ್ಪ ಇದ್ದಾಗ ಹೇಗೆ ಜನತಾದರ್ಶನ ನಡೆಸಿದೆವು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಬಿಡುವು ಪಡೆಯದೇ ಅಸಂಖ್ಯಾತ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಕೊಡುತ್ತಿದ್ದ ಆ ದಿನಗಳನ್ನು ಜನರು ಮರೆತಿಲ್ಲ ಎಂದರು ಕುಮಾರಸ್ವಾಮಿ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜನತಾದರ್ಶನ !
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ನವೆಂಬರ್ 27 ರಂದು ಬೆಳಿಗ್ಗೆ 9.30 ಗಂಟೆಯಿಂದ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಸಚಿವಾಲಯವು ಸಕಲ ಸಿದ್ಧತೆಗಳನ್ನು ನಡೆಸಿದ್ದು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಅವರು ಇಂದು ಸಂಜೆ ಗೃಹ ಕಚೇರಿ ಕೃಷ್ಣಾ ಕ್ಕೆ ಭೇಟಿ ನೀಡಿ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದರು.
ಅಹವಾಲುಗಳನ್ನು ಸ್ವೀಕರಿಸಲು ಒಟ್ಟು 20 ಕೌಂಟರುಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಕೌಂಟರ್ ಗಳನ್ನು ಮೀಸಲಿರಿಸಲಾಗಿದೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸುವರು.
ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯವರು ಈಗಾಗಲೇ ಸುತ್ತೋಲೆ ಹೊರಡಿಸಿ ಸರ್ಕಾರದ ಎಲ್ಲ ಕಾರ್ಯದರ್ಶಿಗಳು / ಇಲಾಖಾ ಮುಖ್ಯಸ್ಥರು ಖುದ್ದು ಹಾಜರಿರುವಂತೆ ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ/ ಉಪವಿಭಾಗ/ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಸೂಚಿಸಿದ್ದಾರೆ.

ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ತರುವಂತೆ ಕೋರಲಾಗಿದೆ. ಇದರಿಂದ ತಂತ್ರಾಂಶದಲ್ಲಿ ದಾಖಲಿಸುವ ಅರ್ಜಿಗಳ ಸ್ಥಿತಿಗತಿಯನ್ನು ಪತ್ತೆಹಚ್ಚಲು ಅನುಕೂಲವಾಗಲಿದೆ. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ದಲ್ಲಿ ಕಳೆದ ಮೂರು ದಿನಗಳಿಂದ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು, ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರಿಗೆ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯ ಮತ್ತು ಇತರ ವ್ಯವಸ್ಥೆಗಳನ್ನು ಸಜ್ಜುಗೊಳಿಸಲಾಗುತ್ತಿದೆ.












Click it and Unblock the Notifications