ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಸಿದ್ದರಾಮಯ್ಯ ನಾಟಕ!
ಬೆಂಗಳೂರು, ಸೆಪ್ಟೆಂಬರ್ 14; ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವಿದೆ. ಬಿಜೆಪಿಯವರೇ ಹೇಳುವ ಪ್ರಕಾರ ಈಗ ರಾಜ್ಯದಲ್ಲಿ 'ಡಬಲ್ ಎಂಜಿನ್' ಸರ್ಕಾರವಿಲ್ಲ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ರಾಜ್ಯ ಸರ್ಕಾರ ಮುನ್ನಡೆಸುತ್ತಿದ್ದಾರೆ.
ಸಿದ್ದರಾಮಯ್ಯ ಹಲವಾರು ಸಮಸ್ಯೆಗಳ ಸಮಯದಲ್ಲಿ ಕೇಂದ್ರ ಸರ್ಕಾರದ ಕಡೆ ಕೈ ತೋರಿಸುತ್ತಾರೆ. ಈ ಬಗ್ಗೆ ಗುರುವಾರ ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ. 'ಸಿದ್ದರಾಮಯ್ಯ ಅವರು ಬೀದಿಯಲ್ಲಿ ನಿಂತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಬೃಹನ್ನಳೆ ನಾಟಕವಾಡುತ್ತಿದ್ದಾರೆ' ಎಂದು ಆರೋಪಿಸಿದೆ.

'ಎಲ್ಲದಕ್ಕೂ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುತ್ತಾ ಪತ್ರ ಬರೆಯುತ್ತೇನೆ ಎನ್ನುತ್ತಾ ಕಾಲ ಕಳೆಯುತ್ತಿರುವ ನೀವು ಮುಖ್ಯಮಂತ್ರಿ ಆಗಿರುವುದು ಯಾವ ಪುರುಷಾರ್ಥಕ್ಕೆ..?' ಎಂದು ಕರ್ನಾಟಕ ಬಿಜೆಪಿ ಪ್ರಶ್ನೆ ಮಾಡಿದೆ.
ಬಿಜೆಪಿ ಟ್ವೀಟ್ನ ವಿವರಗಳು
* ಗ್ಯಾರಂಟಿ ಈಡೇರಿಸಲು 10 ಕೆಜಿ ಅಕ್ಕಿ ಬೇಕು, ಕೇಂದ್ರಕ್ಕೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ..!
* ರಾಜ್ಯದಲ್ಲಿ ಬರಗಾಲ ತಾಂಡವ ಆಡುತ್ತಿದೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ..!
* ಕಾವೇರಿಯಲ್ಲಿ ನೀರಿಲ್ಲ ಆದರೂ ತಮಿಳುನಾಡಿಗೆ ನೀರು ಬಿಟ್ಟಿದ್ದೇವೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ..!
* ರಾಜ್ಯದಲ್ಲಿ ಕಲುಷಿತ ನೀರು ಪೂರೈಕೆಯಿಂದ ಅಪಾರ ಸಾವು-ನೋವು, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ..!
* ರಾಜ್ಯದಲ್ಲಿ 200ಕ್ಕೂ ಹೆಚ್ಚು ರೈತರ ಸರಣಿ ಆತ್ಮಹತ್ಯೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ..!
* ರಾಜ್ಯ ಸರ್ಕಾರದ ಸಂಪುಟದಲ್ಲಿ ಗೂಂಡಾ ಸಚಿವರುಗಳ ಉಪಟಳ ಹೆಚ್ಚಾಗಿದೆ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ..! ಎಂದು ಸಿದ್ದರಾಮಯ್ಯ ಹೇಳುತ್ತಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಕರ್ನಾಟಕ ಸರ್ಕಾರ ಬುಧವಾರ ಸರ್ವಪಕ್ಷಗಳ ಸಭೆಯನ್ನು ನಡೆಸಿತ್ತು. ಸಭೆಯ ಬಳಿಕ ಮಾತನಾಡಿದ್ದ ಸಿದ್ದರಾಮಯ್ಯ, "ಕಾವೇರಿ ವಿಚಾರವಾಗಿ ಪ್ರಧಾನಿ ಬಳಿ ನಿಯೋಗವನ್ನು ಕರೆದುಕೊಂಡು ಹೋಗಲು ಸಮಯ ಕೇಳಿ ಮತ್ತೊಮ್ಮೆ ಪತ್ರ ಬರೆಯಲಾಗುತ್ತದೆ. ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಿ ಹೋರಾಟ ಮಾಡುವುದಾಗಿಯೂ ಸಂಸದರು ತಿಳಿಸಿದ್ದಾರೆ. ಇದೇ ಸೆಪ್ಟೆಂಬರ್ 18ರಿಂದ ನಡೆಯುವ ಅಧಿವೇಶನದ ವೇಳೆಯಲ್ಲಿ ಪ್ರಧಾನಿಯವರು ಸಮಯ ನೀಡಿದರೆ ದೆಹಲಿಗೆ ನಿಯೋಗ ಕರೆದೊಯ್ಯತ್ತೇನೆ" ಎಂದು ತಿಳಿಸಿದ್ದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದೆಹಲಿಯಲ್ಲಿ ಮಾತನಾಡಿದ್ದರು. "ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ ಕಾಡುತ್ತಿದೆ. ಕುಡಿಯುವ ನೀರಿಗೂ ಅಭಾವ ಕಾಡುತ್ತಿದೆ. ಇಂತಹ ಪರಿಸ್ಥಿತಿಯಲ್ಲೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದೇವೆ. ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರ ಮಹತ್ವದ್ದಾಗಿದ್ದು, ಕೇಂದ್ರ ಸರ್ಕಾರವನ್ನು ಎಳೆದು ತರುವುದು ಅಪ್ರಸ್ತುತ' ಎಂದು ಹೇಳಿದ್ದರು.
ಕಾವೇರಿ ನೀರು ನಿಯಂತ್ರಣ ಸಮಿತಿ ಮಂಗಳವಾರ ಬುಧವಾರದಿಂದ 15 ದಿನಗಳ ತನಕ ಪ್ರತಿದಿನ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಶಿಫಾರಸು ಮಾಡಿದೆ. ಈ ಹಿನ್ನಲೆಯಲ್ಲಿ ಬುಧವಾರ ಸರ್ವಪಕ್ಷಗಳ ಸಭೆ ನಡೆಸಲಾಗಿದೆ. ಪ್ರತಿ ದಿನ 5 ಸಾವಿರ ಕ್ಯುಸೆಕ್ ನೀರು ಬಿಡುವ ಸ್ಥಿತಿಯಲ್ಲಿ ರಾಜ್ಯ ಇಲ್ಲ, ನೀರು ಬಿಡುವ ಕುರಿತು ಕಾನೂನು ತಜ್ಞರ ತಂಡದ ಜೊತೆ ಗುರುವಾರ ಚರ್ಚೆ ನಡೆಸಲಾಗುತ್ತದೆ, ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಪಕ್ಷಗಳ ಸಭೆ ಬಳಿಕ ತಿಳಿಸಿದ್ದರು.












Click it and Unblock the Notifications