ಚೆಲುವರಾಯಸ್ವಾಮಿ ಮನೆಯಲ್ಲಿ ಸಿದ್ದರಾಮಯ್ಯ ಭೋಜನ, ಮಾತುಕತೆ!
Recommended Video
ಬೆಂಗಳೂರು, ಫೆಬ್ರವರಿ 26 : ಚುನಾವಣೆ ಸಮೀಪಿಸುತ್ತಿರುವಾಗಲೇ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಜೆಡಿಎಸ್ನಿಂದ ಅಮಾನತುಗೊಂಡಿರುವ ಏಳು ಶಾಸಕರು ಕಾಂಗ್ರೆಸ್ ಸೇರಲು ವೇದಿಕೆ ಸಿದ್ಧವಾಗಿದೆ.
ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದ 8 ಶಾಸಕರನ್ನು ಜೆಡಿಎಸ್ ಪಕ್ಷ ಅಮಾನತು ಮಾಡಿತ್ತು. ಇವರಲ್ಲಿ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಕೆ.ಗೋಪಾಲಯ್ಯ ಪಕ್ಷಕ್ಕೆ ವಾಪಸ್ ಆಗಿದ್ದಾರೆ.
ಚಿತ್ರಗಳು : ಜೆಡಿಎಸ್ ರೆಬಲ್ ಶಾಸಕರ ಮನೆಗೆ ಡಿ.ಕೆ.ಶಿವಕುಮಾರ್ ಭೇಟಿ
ಉಳಿದ 7 ಶಾಸಕರು ಕಾಂಗ್ರೆಸ್ ಪಕ್ಷ ಸೇರಿ ಅದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಎಲ್ಲಾ ಶಾಸಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸಂಪರ್ಕದಲ್ಲಿದ್ದಾರೆ. ಆದರೆ, ಕಾಂಗ್ರೆಸ್ ಸೇರ್ಪಡೆ ದಿನಾಂಕ ಮಾತ್ರ ನಿಗದಿಯಾಗಿರಲಿಲ್ಲ.
ಕರ್ನಾಟಕದ 4 ಸ್ಥಾನ ಸೇರಿ ರಾಜ್ಯಸಭೆಗೆ ಚುನಾವಣೆಗೆ ದಿನಾಂಕ ನಿಗದಿ
ಬಂಡಾಯ ಶಾಸಕ ಚೆಲುವರಾಯಸ್ವಾಮಿ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿದ್ದರು. ಚೆಲುವರಾಯಸ್ವಾಮಿ ಅವರ ಜೊತೆ ರಾತ್ರಿಯ ಊಟ ಸವಿದು, ಬಂಡಾಯ ಶಾಸಕರ ಜೊತೆ ಮಾತಕತೆ ನಡೆಸಿದರು. ಈ ಭೇಟಿಯ ಸಂದರ್ಭದಲ್ಲಿ ಕಾಂಗ್ರೆಸ್ ಸೇರುವ ದಿನಾಂಕ ಅಂತಿಮವಾಗಿದೆ.
ಏಳು ಶಾಸಕರು ಯಾರು?
ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ), ಚೆಲುವರಾಯ ಸ್ವಾಮಿ (ನಾಗಮಂಗಲ), ಎಚ್.ಸಿ.ಬಾಲಕೃಷ್ಣ (ಮಾಗಡಿ), ಇಕ್ಬಾಲ್ ಅನ್ಸಾರಿ (ಗಂಗಾವತಿ), ರಮೇಶ್ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ).
ಚೆಲುವರಾಯಸ್ವಾಮಿ ಆಹ್ವಾನ
ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಊಟಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಉಳಿದ ಬಂಡಾಯ ಶಾಸಕರು ಈ ಸಂದರ್ಭದಲ್ಲಿ ಹಾಜರಿದ್ದರು.
ಬೆಂಗಳೂರಿನ ನಿವಾಸಕ್ಕೆ ಭೇಟಿ
ಶನಿವಾರ ಸಿದ್ದರಾಮಯ್ಯ ಅವರು ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಚೆಲುವರಾಯಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ರಾತ್ರಿ ಅಲ್ಲಿಯೇ ಊಟ ಸವಿದು ಬಂಡಾಯ ಶಾಸಕರ ಜೊತೆ ಮಾತುಕತೆ ನಡೆಸಿದರು.
ಮಾರ್ಚ್ 24ರಂದು ಪಕ್ಷ ಸೇರ್ಪಡೆ?
ಮಾರ್ಚ್ 24ರಂದು ಕಾಂಗ್ರೆಸ್ ಪಕ್ಷ ಸೇರುವಂತೆ 7 ಶಾಸಕರಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಶಾಸಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.
ರಾಜ್ಯಸಭೆ ಚುನಾವಣೆ
ಮಾರ್ಚ್ 23ರಂದು ರಾಜ್ಯ ವಿಧಾನಸಭೆಯಿಂದ 4 ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ. ಏಳು ಶಾಸಕರು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಮರುದಿನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.
ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು
ಕೆಲವು ದಿನಗಳ ಹಿಂದೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಪುಲಿಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ, ಉಪಹಾರ ಸವಿದು, ಮಾತುಕತೆ ನಡೆಸಿದ್ದರು.
ನಮ್ಮ ಜೊತೆಯೇ ಇದ್ದಾರೆ
ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ್ದ ಡಿ.ಕೆ.ಶಿವಕುಮಾರ್ 'ರಾಜ್ಯಸಭೆ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲಾ ಶಾಸಕರು ನಮ್ಮ ಜೊತೆಯೇ ಇದ್ದಾರೆ. ಅವರು ಕಾಂಗ್ರೆಸ್ ಸೇರಲಿದ್ದಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ' ಎಂದು ಹೇಳಿದ್ದರು.