ಜೆಡಿಎಸ್ ಜೊತೆ ಮೈತ್ರಿಗೆ ಸಿದ್ದರಾಮಯ್ಯ ವಿರೋಧ!
Recommended Video
ಬೆಂಗಳೂರು, ಮಾರ್ಚ್ 05 : ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದಲೇ 3ನೇ ಅಭ್ಯರ್ಥಿಯನ್ನು ನಿಲ್ಲಿಸುವ ಬಗ್ಗೆ ಚರ್ಚೆ ನಡೆದಿದೆ. ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಕರ್ನಾಟಕ ವಿಧಾನಸಭೆಯಿಂದ 4 ಸದಸ್ಯರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಮಾರ್ಚ್ 23ರಂದು ಚುನಾವವಣೆ ನಡೆಯಲಿದೆ. ಜೆಡಿಎಸ್ ಪಕ್ಷ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎನ್ನುವ ಸುದ್ದಿ ಹಬ್ಬಿತ್ತು.
ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ಜೆಡಿಎಸ್ನಿಂದ ಆಹ್ವಾನ!
ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಇರುವಾಗ ಮೈತ್ರಿ ಮಾಡಿಕೊಂಡರೆ ತಪ್ಪು ಸಂದೇಶ ರವಾನೆ ಮಾಡಿದಂತೆ ಆಗುತ್ತದೆ ಎಂದು ಅವರು ಪಕ್ಷದ ನಾಯಕರ ಬಳಿ ಚರ್ಚೆ ನಡೆಸಿದ್ದಾರೆ.
ರಾಜ್ಯಸಭೆ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಲು ಪೈಪೋಟಿ!
ವಿಧಾನಸಭೆ ಬಲಾಬಲದ ಆಧಾರದ ಮೇಲೆ ಬಿಜೆಪಿ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಳಿಸಬಹುದಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಪಕ್ಷದ 7 ಶಾಸಕರ ಬೆಂಬಲವೂ ಇದ್ದು, ಒಟ್ಟು ಮೂರು ಅಭ್ಯರ್ಥಿಗಳನ್ನು ಆಯ್ಕೆ ಮಾಡಬಹುದಾಗಿದೆ. ಒಬ್ಬ ಅಭ್ಯರ್ಥಿ ಗೆಲುವಿಗೆ 45 ಮತಗಳು ಬೇಕಾಗಿದೆ...
ಜೆಡಿಎಸ್ ಪಕ್ಷದಿಂದ ಆಹ್ವಾನ
'ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗೆ ಬೆಂಬಲ ನೀಡಿ, ಭವಿಷ್ಯದಲ್ಲಿ ನಮ್ಮ ಬೆಂಬಲ ನಿಮಗೆ ಸಿಗಲಿದೆ' ಎಂದು ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ಹೇಳಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಎರಡು ದಿನಗಳ ಹಿಂದೆ ಕುಮಾರಸ್ವಾಮಿ ಅವರೂ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ, ಪರಮೇಶ್ವರ
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಜೊತೆ ರಾಜ್ಯಸಭೆ ಚುನಾವಣೆ ಬಗ್ಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಈ ಸಮಯದಲ್ಲಿ ಮೈತ್ರಿಯ ಬಗ್ಗೆಯೂ ಚರ್ಚೆ ನಡೆದಿದೆ.
ಸಿದ್ದರಾಮಯ್ಯ ವಿರೋಧ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. 'ವಿಧಾನಸಭೆ ಚುನಾವಣೆ ಎದುರಿರುವಾಗ ಮೈತ್ರಿ ಮಾಡಿಕೊಂಡರೆ ಜನರಿಗೆ ತಪ್ಪು ಸಂದೇಶ ರವಾನೆ ಮಾಡಿದಂತೆ ಆಗುತ್ತದೆ. ಇದರಿಂದ ಚುನಾವಣೆಯಲ್ಲಿ ಹಿನ್ನಡೆ ಉಂಟಾಗಬಹುದು' ಎಂದು ಹೇಳಿದ್ದಾರೆ.
ಬಿಬಿಎಂಪಿಯಲ್ಲಿ ಮೈತ್ರಿ
'ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮೈತ್ರಿ ಮಾಡಿಕೊಂಡು ಆಡಳಿತ ನಡೆಸುತ್ತಿರುವುದು ಸಾಕು. ರಾಜ್ಯಸಭೆ ಚುನಾವಣೆಯಲ್ಲಿ ಮೈತ್ರಿ ಬೇಡ. ಕಾಂಗ್ರೆಸ್ ಪಕ್ಷದಿಂದಲೇ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸೋಣ' ಎಂದು ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ.
ಶಾಸಕರ ಬಲ
ವಿಧಾನಸಭೆಯಲ್ಲಿ ಕಾಂಗ್ರೆಸ್ 120ಕ್ಕೂ ಅಧಿಕ ಶಾಸಕ ಬಲ ಹೊಂದಿದೆ. ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ 7 ಶಾಸಕರು ಕಾಂಗ್ರೆಸ್ ಜೊತೆ ಇದ್ದಾರೆ. ಆದ್ದರಿಂದ, ಕಾಂಗ್ರೆಸ್ 3 ಅಭ್ಯರ್ಥಿಗಳನ್ನು ಗೆಲ್ಲಿಸಬಹುದಾಗಿದೆ. ಮೈತ್ರಿ ಮಾಡಿಕೊಂಡು ಜೆಡಿಎಸ್ ಬೆಂಬಲಿಸುವುದಕ್ಕಿಂತ ಕಾಂಗ್ರೆಸ್ ಪಕ್ಷದಿಂದಲೇ 3ನೇ ಅಭ್ಯರ್ಥಿ ಗೆಲ್ಲಿಸುವುದು ಕಾಂಗ್ರೆಸ್ ತಂತ್ರ.
ಜೆಡಿಎಸ್ ಬಯಸಿದ್ದೇನು?
ಕಾಂಗ್ರೆಸ್ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಬಳಿಕ ಹೆಚ್ಚಿನ ಮತಗಳು ಉಳಿಯಲಿವೆ. ಅವುಗಳನ್ನು ಪಡೆದು ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ, ಮುಸ್ಲಿಂ ಸಮುದಾಯದ ಮುಖಂಡ ಬಿ.ಎಂ.ಫಾರೂಕ್ ಅವರನ್ನು ರಾಜ್ಯಸಭೆಗೆ ಆರಿಸಿ ಕಳಿಸಲು ಜೆಡಿಎಸ್ ಬಯಸಿತ್ತು. ಉದ್ಯಮಿಯಾಗಿರುವ ಫಾರೂಕ್ ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರು. 8 ಶಾಸಕರು ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ ಕಾರಣದಿಂದಾಗಿ ಫಾರೂಕ್ ಅವರಿಗೆ ಸೋಲಾಗಿತ್ತು
ಮೀರಾ ಕುಮಾರ್ ಸ್ಪರ್ಧೆ?
ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಇನ್ನೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಪರಮೇಶ್ವರ್ ಮತ್ತು ಸಿದ್ದರಾಮಯ್ಯ ಈ ವಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರು ಅಭ್ಯರ್ಥಿಯಾಗಬಹುದು ಎಂಬ ಸುದ್ದಿಗಳು ಹಬ್ಬಿವೆ.
ಮಾರ್ಚ್ 23ರಂದು ಮತದಾನ
2012ರಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಕೆ.ರೆಹಮಾನ್ ಖಾನ್ (ಕಾಂಗ್ರೆಸ್), ಎಂ.ರಾಜೀವ್ ಚಂದ್ರಶೇಖರ್ (ಪಕ್ಷೇತರ), ಬಸವರಾಜ ಪಾಟೀಲ್ ಸೇಡಂ (ಬಿಜೆಪಿ), ಆರ್.ರಾಮಕೃಷ್ಣ (ಬಿಜೆಪಿ) ಅವರ ಅವಧಿ ಏಪ್ರಿಲ್ 2ರಂದು ಕೊನೆಗೊಳ್ಳಲಿದೆ. ಈ ಸ್ಥಾನಗಳನ್ನು ಭರ್ತಿ ಮಾಡಲು ಮಾರ್ಚ್ 23ರಂದು ಮತದಾನ ನಡೆಯಲಿದೆ.
ಇಬ್ಬರ ಹೆಸರು
ಬಿಜೆಪಿಯಿಂದ ರಾಜೀವ್ ಚಂದ್ರಶೇಖರ್ ಮತ್ತು ವಿಜಯ ಸಂಕೇಶ್ವರ ಅವರ ಹೆಸರು ಕೇಳಿಬರುತ್ತಿದೆ. ರಾಜ್ಯ ನಾಯಕರು ಇಬ್ಬರ ಹೆಸರನ್ನು ಹೈಕಮಾಂಡ್ಗೆ ಕಳಿಸಲಿದ್ದಾರೆ. ಯಾರು ಅಭ್ಯರ್ಥಿ? ಎಂದು ಹೈಕಮಾಂಡ್ ನಾಯಕರು ಘೋಷಣೆ ಮಾಡಲಿದ್ದಾರೆ.