Siddaramaiah vs Somanna: ಸೋಮಣ್ಣ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ ಎಂದ ಸಿದ್ದರಾಮಯ್ಯ
ವರುಣಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ವಿ ಸೋಮಣ್ಣ ಅವರಿಗೆ ಕ್ಲಾಸ್ ತೆಗೆದುಕೊಂಡು, ಪ್ರಚಾರಕ್ಕೆ ಅಡ್ಡಿ ಮಾಡಿದ್ದರು. ಸೋಮಣ್ಣ ಪ್ರಚಾರವನ್ನು ಮುಂದುವರೆಸದೆ ವಾಪಸ್ ತೆರಳಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಕ್ಷೇತ್ರದಲ್ಲಿ ನಡೆದ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಈ ರೀತಿ ಮಾಡುವುದು ಸರಿಯಲ್ಲ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.
ವರುಣಾ ಕ್ಷೇತ್ರದ ಭಗುತನಹಳ್ಳಿ ಬಳಿ ಸೋಮಣ್ಣ ಕಾರಿಗೆ ಅಡ್ಡಿಪಡಿಸಿದ್ದ ಸಿದ್ದರಾಮಯ್ಯ ಬೆಂಬಲಿಗರು ಘೇರಾವ್ ಹಾಕಿದ್ದರು. ಈ ಸಂದರ್ಭದಲ್ಲಿ ಸೋಮಣ್ಣ ಮತ್ತು ಸಿದ್ದರಾಮಯ್ಯ ಬೆಂಬಲಿಗರ ನಡುವೆ ವಾಗ್ವಾದ ಕೂಡ ನಡೆಯಿತು. ನಂತರ ಮಧ್ಯ ಪ್ರವೇಶಿಸಿದ ಪೊಲೀಸರು. ಪರಿಸ್ಥಿತಿಯನ್ನು ಹತೋಟಿಗೆ ತಂದರು, ಕೆಲವು ಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಸೋಮಣ್ಣ ಪ್ರಚಾರವನ್ನು ಮೊಟಕುಗೊಳಿಸಿ ವಾಪಸ್ ತೆರಳಿದರು.

ತಮ್ಮ ಕ್ಷೇತ್ರದಲ್ಲಿ ನಡೆದ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಇದು ಸರಿಯಲ್ಲ ಎಂದು ಹೇಳಿದ್ದಾರೆ. ಟ್ವೀಟ್ ಮಾಡಿರುವ ಅವರು, "ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರ ಚುನಾವಣಾ ಪ್ರಚಾರಕ್ಕೆ ಕೆಲವರು ಅಡ್ಡಿಪಡಿಸುತ್ತಿರುವುದು ವರದಿಯಾಗಿದೆ. ಇದನ್ನು ನಮ್ಮ ಪಕ್ಷದ ಕಾರ್ಯಕರ್ತರು ಇಲ್ಲವೇ ಬೇರೆಯವರು ಮಾಡಿದ್ದರೆ ಅದು ಸರಿ ಅಲ್ಲ. ಎಲ್ಲ ಅಭ್ಯರ್ಥಿಗಳಿಗೂ ಮುಕ್ತ ಪ್ರಚಾರಕ್ಕೆ ಅವಕಾಶ ಮಾಡಿಕೊಡಬೇಕು." ಎಂದು ಹೇಳಿದ್ದಾರೆ.
"ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆಯಲ್ಲಿ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದಕ್ಕೆ ಅಡ್ಡಿ ಪಡಿಸಬಾರದು. ಅಂತಿಮವಾಗಿ ಮತದಾರರು ತಮ್ಮ ಆಯ್ಕೆಯನ್ನು ತಾವೇ ನಿರ್ಧರಿಸುತ್ತಾರೆ." ಎಂದು ಸಿದ್ದರಾಮಯ್ಯ ತಮ್ಮ ಕಾರ್ಯಕರ್ತರಿಗೆ ಬುದ್ದಿವಾದ ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆಯಲ್ಲಿ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದಕ್ಕೆ ಅಡ್ಡಿ ಪಡಿಸಬಾರದು.
— Siddaramaiah (@siddaramaiah) April 23, 2023
ಅಂತಿಮವಾಗಿ ಮತದಾರರು ತಮ್ಮ ಆಯ್ಕೆಯನ್ನು ತಾವೇ ನಿರ್ಧರಿಸುತ್ತಾರೆ.
2/2
ಇಡೀ ರಾಜ್ಯ ರಾಜಕೀಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿರುವ ಕ್ಷೇತ್ರಗಳಲ್ಲಿ ವರುಣಾ ಕೂಡ ಒಂದಾಗಿದೆ. ಸಿದ್ದರಾಮಯ್ಯ ತಮ್ಮ ತವರು ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ಅವರನ್ನು ಕಟ್ಟಿ ಹಾಕಲು ಬಿಜೆಪಿ ವಿ ಸೋಮಣ್ಣ ಅವರನ್ನು ಕಣಕ್ಕಿಳಿಸಿದೆ. ಇದರಿಂದ ಚುನಾವಣಾ ಅಖಾಡ ಮತ್ತಷ್ಟು ರಂಗೇರಿದೆ. ಸಂಸದ ಪ್ರತಾಪ್ ಸಿಂಹ, ಬಿವೈ ವಿಜಯೇಂದ್ರ ಕೂಡ ವಿ ಸೋಮಣ್ಣ ಪರವಾಗಿ ಭರ್ಜರಿಯಾಗಿ ಪ್ರಚಾರ ಮಾಡುತ್ತಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದ್ದು, ವರುಣಾದಲ್ಲಿ ಮತದಾರ ಯಾರಿಗೆ ಮಣೆ ಹಾಕುತ್ತಾನೆ ಎನ್ನುವುದು ಕುತೂಹಲಕಾರಿ ಸಂತಿಯಾಗಿದೆ. ಮೇ 10ರಂದು ಮತದಾರ ತನ್ನ ತೀರ್ಪು ನೀಡಲಿದ್ದು, ಮೇ 13ಕ್ಕೆ ಮತದಾರನ ಆಯ್ಕೆ ಯಾವುದು ಎನ್ನುವುದು ತಿಳಿಯಲಿದೆ.












Click it and Unblock the Notifications