ಚುನಾವಣೆಗೆ ಮುನ್ನ ಕವಲು ದಾರಿಯತ್ತ ರಾಜ್ಯ ಕಾಂಗ್ರೆಸ್?
ಬೆಂಗಳೂರು, ಜ 30: ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಮತ್ತು ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯ ಪ್ರವಾಸದ ಸಂದರ್ಭದಲ್ಲಿ ಏಕತೆಯ ಮಂತ್ರ ಪಠಿಸುತ್ತಿದ್ದ ರಾಜ್ಯ ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಮತ್ತು ವಿರೋಧ ಬಣದ ಚಟುವಟಿಕೆ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.
ಖಾಸಗಿ ಹೋಟೇಲಿನಲ್ಲಿ 23 ಮಂದಿ ಶಾಸಕರು ಸಿದ್ದರಾಮಯ್ಯ ಕಾರ್ಯವೈಖರಿ ಮತ್ತು ಕೆಲವು ಸಚಿವರ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿರುವುದು ಆಡಳಿತ ಪಕ್ಷದಲ್ಲಿ ಹೊಸ ಸಂಚಲನ ಮೂಡಿಸಿದೆ.
ಯಾವುದೇ ಅಸಮಾಧಾನ, ಭಿನ್ನಾಭಿಪ್ರಾಯಗಳಿದ್ದರೆ ಪಕ್ಷದ ವೇದಿಕೆಯಲ್ಲಿ ಚರ್ಚಿಸುವುದೇ ಹೊರತು ಗುಪ್ತಸಭೆ, ಔತಣಕೂಟ ನಡೆಸಿ ಪಕ್ಷದ ಮಾನವನ್ನು ಹರಾಜಾಕಬಾರದೆಂದು ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್ ಶಾಸಕರಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆಂದು ತಿಳಿದು ಬಂದಿದೆ.
ಕಾಂಗ್ರೆಸ್ ಶಾಸಕರು ತಾವು ಹೇಳಿದ ಕೆಲಸ ಆಗಲೇ ಬೇಕೆಂದು ಹಠ ಹಿಡಿಯುವುದು ಸರಿಯಲ್ಲ. ಕೆಲವೊಂದು ಕೆಲಸಗಳಿಗೆ ಕಾನೂನಿನ ತೊಡಕು ಇರುತ್ತದೆಂದು ನೀವೂ ಬಲ್ಲಿರಿ. ಕೆಲಸ ಆಗದಿದ್ದಲ್ಲಿ ಸರಕಾರದ ಕೆಲಸದ ಶೈಲಿಯನ್ನು ಪ್ರಶ್ನಿಸಬಾರದೆಂದು ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆನ್ನಲಾಗುತ್ತಿದೆ.
ವಿಧಾನಸೌಧದಲ್ಲಿ ಬುಧವಾರ (ಜ 29) ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಕೆಲವು ಶಾಸಕರು ಖಾಸಗಿ ಹೋಟಿನಲ್ಲಿ ಸಭೆ ಸೇರಿರುವ ವಿಷಯ ನಮ್ಮ ಗಮನಕ್ಕೆ ಬಂದಿದೆ. ಇದರಿಂದ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಮತ್ತು ಸೋನಿಯಾ ಗಾಂಧಿ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ ಎಂದು ಡಾ. ಪರಮೇಶ್ವರ್ ಮತ್ತು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆಂದು ತಿಳಿದು ಬಂದಿದೆ.
ಮುಂದೆ ಓದಿ..
ಜಿಲ್ಲಾ ಉಸ್ತುವಾರಿ ಸಚಿವರು
ಜಿಲ್ಲಾ ಉಸ್ತುವಾರಿ ಸಚಿವರುಗಳ ಮೇಲೆ ಸ್ಥಳೀಯ ಶಾಸಕರಿಂದ ಬಹಳಷ್ಟು ದೂರುಗಳು ಕೇಳಿ ಬರುತ್ತಿವೆ. ಉಸ್ತುವಾರಿ ಸಚಿವರು, ಶಾಸಕರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳಬೇಕು. ಮೋದಿ ಪ್ರಭಾವ ಇದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲುವ ಸಾಧ್ಯತೆಯಿದೆ. ಇದಕ್ಕೆ ಎಲ್ಲರೂ ಸಹಕರಿಸ ಬೇಕೆಂದು ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಶಾಸಕರಲ್ಲಿ ಕೇಳಿ ಕೊಂಡಿದ್ದಾರೆಂದು ತಿಳಿದು ಬಂದಿದೆ.
ಖಾಸಗಿ ಹೋಟೇಲ್ ನಲ್ಲಿ ಸಭೆ
ಸಿದ್ದರಾಮಯ್ಯ ವಿರೋಧಿ ಬಣದ 23 ಶಾಸಕರು ಖಾಸಗಿ ಹೋಟೇಲಿನಲ್ಲಿ ಮಂಗಳವಾರ (ಜ 28) ರಾತ್ರಿ ಸಭೆ ಸೇರಿದ್ದರು. ಸಭೆಯಲ್ಲಿ ಡಾ. ಪರಮೇಶ್ವರ್ ಪರವಾದ ಮತ್ತು ಹೊಸದಾಗಿ ಆಯ್ಕೆಯಾದ ಶಾಸಕರೂ ಸೇರಿದ್ದಾರೆನ್ನಲಾಗುತ್ತಿದೆ. ಸಿದ್ದರಾಮಯ್ಯ ತಮ್ಮ ಪರವಾದ ಮತ್ತು ಹಿಂಬಾಲಕರ ಕೆಲಸಕ್ಕೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ. ಅವರಿಗೆ ಬೇಕಾದವರ ಕೆಲಸವನ್ನು ಮಾಡಿಕೊಡುತ್ತಿದ್ದಾರೆ, ಇತರರು ಕೇಳಿದರೆ ಕಾನೂನು ತೊಡಕಿನ ನೆಪ ಒಡ್ದುತ್ತಿದ್ದಾರೆನ್ನುವುದು ಈ ಶಾಸಕರುಗಳ ಕೂಗು ಎನ್ನಲಾಗುತ್ತಿದೆ.
ಸಭೆಯಲ್ಲಿ ಯಾರಿದ್ದರು
ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ ಖರ್ಗೆ, ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್, ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್, ಧರಂ ಸಿಂಗ್ ಪುತ್ರ ಅಜಯ್ ಸಿಂಗ್, ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ರೆಡ್ಡಿ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.
ಸೋನಿಯಾ ಗಾಂಧಿ ಭೇಟಿ
ಸೋನಿಯಾ ಗಾಂಧಿ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ನಿಮ್ಮ ಸಮಸ್ಯೆಗಳೇನಾದರೂ ಇದ್ದರೆ, ಸೀದಾ ನನ್ನ ಬಳಿ ಬನ್ನಿ. ಪರಿಹರಿಸಲು ಪ್ರಯತ್ನಿಸುತ್ತೇನೆ. ಅದು ಬಿಟ್ಟು ಸಭೆ ನಡೆಸುವುದು, ಮಾಧ್ಯಮಗಳ ಮುಂದೆ ಮಾತನಾಡುವುದನ್ನು ಸಹಿಸುವುದಿಲ್ಲ ಎಂದು ಸಿದ್ದು ಮತ್ತು ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆನ್ನಲಾಗುತ್ತಿದೆ.
ಅಧಿವೇಶನದ ಸಂದರ್ಭದಲ್ಲಿ
ಅಧಿವೇಶನ ನಡೆಯುತ್ತಿರುವ ಈ ಸಂದರ್ಭದಲ್ಲಿ ವಿರೋಧ ಪಕ್ಷಗಳಿಗೆ ನಿಮ್ಮ ನಡುವಳಿಕೆ ಆಹಾರವಾಗ ಬಾರದು. ಸದ್ಯ, ನಮ್ಮ ಪಕ್ಷಕ್ಕಿರುವ ಮುಂದಿನ ಗುರಿ, ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದು ಎಂದು ಸಿದ್ದು ಕಿವಿಮಾತನ್ನಾಡಿದ್ದಾರೆ. ಒಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ಸಿನಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದಕ್ಕೆ ಮತ್ತೊಂದು ನಿದರ್ಶನ ಇದಾಗಿದೆ.