ಕೋಲಾರದ ಕೆರೆ ತುಂಬಿಸುವ ಕೆ.ಸಿ.ವ್ಯಾಲಿ ಯೋಜನೆಗೆ ಚಾಲನೆ
ಕೋಲಾರ, ಮೇ 31 : ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ.ವ್ಯಾಲಿ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೂಮಿ ಪೂಜೆ ನೆರವೇರಿಸಿದ್ದಾರೆ. ಎರಡೂ ಜಿಲ್ಲೆಗಳ 126 ಕೆರೆಗಳನ್ನು ತುಂಬಿಸುವ ಯೋಜನೆಯನ್ನು ಹದಿನೈದು ತಿಂಗಳಿನಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಿದ್ದಾರೆ.
ಕೋಲಾರ ತಾಲೂಕಿನ ನರಸಾಪುರದಲ್ಲಿ ಸೋಮವಾರ ಸಿದ್ದರಾಮಯ್ಯ ಅವರು ಕೆ.ಸಿ.ವ್ಯಾಲಿ (ಕೋರಮಂಗಲ- ಚಲ್ಲಘಟ್ಟ) ಏತ ನೀರಾವರಿ ಯೋಜನೆ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, 'ಯೋಜನೆಯ ಕಾಮಗಾರಿ ಅವಧಿ 24 ತಿಂಗಳಾದರೂ ಹದಿನೈದು ತಿಂಗಳ ಒಳಗೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸುವೆ' ಎಂದರು. [ಬಯಲುಸೀಮೆ ಗೌರಿಬಿದನೂರಲ್ಲಿ ಹಸಿರು ಕ್ರಾಂತಿ]

'ಕೋಲಾರ ಮತ್ತು ಚಿಕ್ಕಬಳ್ಳಾಪುರ ಭಾಗದ ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ 13 ಸಾವಿರ ಕೋಟಿ ವೆಚ್ಚದಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿ ಆರಂಭಿಸಲಾಗಿದೆ. ಮೂರು ವರ್ಷದಲ್ಲಿ ಯೋಜನೆ ಮುಗಿಯಲಿದೆ' ಎಂದು ಮುಖ್ಯಮಂತ್ರಿಗಳು ಹೇಳಿದರು. [ಶುದ್ಧ ಕುಡಿಯುವ ನೀರು ನೀಡಿದವರಿಗೆ ಅನಂತ ಧನ್ಯವಾದ]
ಏನಿದು ಕೆ.ಸಿ.ವ್ಯಾಲಿ ಯೋಜನೆ? : ಬೆಂಗಳೂರಿನ ಕೋರಮಂಗಲ-ಚಲ್ಲಘಟ್ಟ ಹಾಗೂ ಬೆಳ್ಳಂದೂರಿನ ನೀರು ಸಂಸ್ಕರಣಾ ಘಟಕದಿಂದ ಕೊಳಚೆ ನೀರನ್ನು ಸಂಸ್ಕರಿಸಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಭಾಗದ ಕೆರೆಗಳಿಗೆ ಹರಿಸಿ, 126 ಕೆರೆಗಳನ್ನು ತುಂಬಿಸುವ ಯೋಜನೆ ಇದಾಗಿದೆ. [ಬಂಗಾರಪೇಟೆಯ 4 ಗ್ರಾಮಗಳಿಗೆ ನೀರಿನ ತಲೆಬಿಸಿ ಇಲ್ಲ]
ಕೆ.ಸಿ.ವ್ಯಾಲಿ ಏತ ನೀರಾವರಿ ಯೋಜನೆಯ ಸುಮಾರು 148 ಕೋಟಿ ರೂ. ವೆಚ್ಚದ್ದಾಗಿದೆ. ಈ ಯೋಜನೆಗೆ ಚಿಂತಾಮಣಿ ತಾಲೂಕನ್ನು ಸೇರಿಸಿಕೊಳ್ಳಲು ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.











Click it and Unblock the Notifications