ಇಬ್ಬರು ಶಾಸಕರ ರಾಜೀನಾಮೆ : ರಾಹುಲ್ಗೆ ಸಿದ್ದರಾಮಯ್ಯ ಕರೆ
ಬೆಂಗಳೂರು, ಜುಲೈ 01 : ಕರ್ನಾಟಕದ ರಾಜಕೀಯದಲ್ಲಿ ಹಲವು ಬೆಳವಣಿಗೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕರೆ ಮಾಡಿ ವಿವರಣೆಯನ್ನು ನೀಡಿದ್ದಾರೆ.
ಸೋಮವಾರ ವಿಜಯನಗರ ಕ್ಷೇತ್ರದ ಆನಂದ್ ಸಿಂಗ್, ಗೋಕಾಕ್ ಕ್ಷೇತ್ರದ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ, ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಉಳಿವಿನ ಬಗ್ಗೆ ಪ್ರಶ್ನೆ ಎದ್ದಿದೆ.
ಕಾಂಗ್ರೆಸ್ ಶಾಸಕರಿಗೆ ಎಚ್.ಡಿ.ಕುಮಾರಸ್ವಾಮಿ ಫೋನ್ ಕರೆ!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಮಹತ್ವದ ಸಭೆ ಸೋಮವಾರ ಮಧ್ಯಾಹ್ನ ನಡೆಯಿತು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಜೀನಾಮೆ ನಿರ್ಧಾರಕ್ಕೆ ಸ್ಪಷ್ಟ ಕಾರಣ ನೀಡಿದ ಆನಂದ್ ಸಿಂಗ್
ಸಭೆಗೂ ಮೊದಲು ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕರೆ ಮಾಡಿ ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದರು. ಸರ್ಕಾರವನ್ನು ಉಳಿಸಿಕೊಳ್ಳಲು ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಸಲಹೆಯನ್ನೂ ನೀಡಿದರು....
ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ
ಸರ್ಕಾರ ಉಳಿಸಿಕೊಳ್ಳುವ ಭರವಸೆ
ಇಬ್ಬರು ಶಾಸಕರು ರಾಜೀನಾಮೆ ನೀಡಿದರೆ ಸಮ್ಮಿಶ್ರ ಸರ್ಕಾರಕ್ಕೆ ಏನೂ ಆಗುವುದಿಲ್ಲ. ಸರ್ಕಾರವನ್ನು ನಾವು ಉಳಿಸಿಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರಿಗೆ ಭರವಸೆ ನೀಡಿದ್ದಾರೆ. ಇನ್ನು ಯಾವುದೇ ಶಾಸಕರು ರಾಜೀನಾಮೆ ನೀಡುವುದಿಲ್ಲ ಎಂದು ಅವರು ರಾಹುಲ್ ಗಾಂಧಿ ಅವರಿಗೆ ತಿಳಿಸಿದರು.
ರಾಹುಲ್ ಗಾಂಧಿ ಸಲಹೆ ಏನು?
ರಾಹುಲ್ ಗಾಂಧಿ ಅವರು ಸರ್ಕಾರ ಉಳಿಸಿಕೊಳ್ಳಲು ಅಸಮಾಧಾನಗೊಂಡಿರುವ ಶಾಸಕರಿಗೆ ಸಚಿವ ಸ್ಥಾನ ನೀಡಿ. ಪಕ್ಷಕ್ಕೆ ನಿಷ್ಠರಾಗಿರುವ 4 ಸಚಿವರಿಂದ ರಾಜೀನಾಮೆ ಪಡೆಯಿರಿ. ಅಸಮಾಧಾನಗೊಂಡಿರುವ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ರಾಹುಲ್ ಗಾಂಧಿ ಸಲಹೆ ನೀಡಿದರು.
ನಾಯಕರೊಂದಿಗೆ ಸಿದ್ದರಾಮಯ್ಯ ಸಭೆ
ರಾಹುಲ್ ಗಾಂಧಿ ಅವರಿಗೆ ವಿವರಣೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜೊತೆ ಸಭೆ ನಡೆಸಿದರು. ರಾಜಕೀಯ ಬೆಳವಣಿಗೆ ಕುರಿತು ಸಭೆ ನಡೆಸಿದರು.
ಶಾಸಕಾಂಗ ಪಕ್ಷದ ಸಭೆ?
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಎಲ್ಲಾ ಶಾಸಕರ ಸಭೆ ಕರೆಯುವ ನಿರೀಕ್ಷೆ ಇದೆ. ಸಭೆಯಲ್ಲಿ ಶಾಸಕರ ಅಹವಾಲುಗಳನ್ನು ಆಲಿಸಿ ಅವರು ಸಮಸ್ಯೆ ಬಗೆಹರಿಸಲು ಸೂಚನೆ ನೀಡುವ ಸಾಧ್ಯತೆ ಇದೆ. ಬುಧವಾರ ಶಾಸಕಾಂಗ ಪಕ್ಷದ ಸಭೆ ಕರೆಯಬಹುದು ಎಂಬ ನಿರೀಕ್ಷೆ ಇದೆ.