ಕೋಲಾರದ ಹಾಸ್ಟೆಲ್ ನಲ್ಲಿ ಊಟದಲ್ಲಿ ಆದ ಸಮಸ್ಯೆಗೆ ಯಾರು ಹೊಣೆ? ಸಮಸ್ಯೆ ಯಾಕಾಯ್ತು? : ಅಧಿಕಾರಿಗಳ ಮೇಲೆ ಸಿಎಂ ಗರಂ
ಬೆಂಗಳೂರು, ಜನವರಿ 31: ಕೋಲಾರದ ಹಾಸ್ಟೆಲ್ ನಲ್ಲಿ ಊಟದಲ್ಲಿ ಆದ ಸಮಸ್ಯೆಗೆ ಯಾರು ಹೊಣೆ? ಸಮಸ್ಯೆ ಯಾಕಾಯ್ತು? ಮೊದಲೇ ಅಧಿಕಾರಿಗಳು ಈ ಬಗ್ಗೆ ನಿಗಾ ಇಡಬೇಕಿತ್ತು. ನಿಗಾ ವಹಿಸದ ಕಾರಣಕ್ಕೆ ಈ ರೀತಿಯ ಘಟನೆಗಳು ಸಂಭವಿಸುತ್ತದೆ. ಇವು ಮರು ಕಳಿಸಿದರೆ ಸೂಕ್ತ ಕ್ರಮ ಅನಿವಾರ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಗಳ ವಿರುದ್ಧ ಗರಂ ಆಗಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅಧಿಕಾರಿಗಳ ಕುರಿತು ಸಿಎಂ ಮಾತನಾಡಿ, ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು, ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ. ಸರ್ಕಾರ ಬಂದು 8 ತಿಂಗಳಾಗಿದೆ. DC, CEO ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿ 3-4 ತಿಂಗಳಾಗಿದೆ. ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎನ್ನುವ ಮಾಹಿತಿಗಳನ್ನು ಸಭೆಗೆ ನೀಡಬೇಕು.

ಕೆಲವು ಕಡೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕೆಲವೇ ಕೆಲವು ಫಲಾನುಭವಿಗಳಿಗೆ ತಲುಪಲು ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಇನ್ನೂ ಏಕೆ ಆಗಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು, "ಕೆಲವರಿಗೆ ಮಾತ್ರ ಗ್ಯಾರಂಟಿ ಅನುಕೂಲ ತಲುಪಿಲ್ಲ. ಈ ಕೆಲವರೇ ಹೆಚ್ಚು ಹೇಳಿಕೊಂಡು ತಿರುಗುತ್ತಿದ್ದಾರೆ. ಗ್ಯಾರಂಟಿ ಯೋಜನೆಯ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಆದ್ದರಿಂದ ತಾಂತ್ರಿಕ ಸಮಸ್ಯೆ ಮೊದಲು ಬಗೆಹರಿಸಿ, ಅನರ್ಹ ಫಲಾನುಭವಿಗಳಿಗೆ ಮಾಹಿತಿ ನೀಡಿ ಅವರ ಅರ್ಜಿ ತಿರಸ್ಕರಿಸಿ ಎನ್ನುವ ಸೂಚನೆ ನೀಡಿದರು
ಸಾರ್ವಜನಿಕರು ರೆವಿನ್ಯೂ ಇಲಾಖೆ, ತಹಶೀಲ್ದಾರ್ ಮತ್ತು ,AC ಹಾಗೂ DC ಕಚೇರಿಗಳಿಗೆ ಅಲೆದಾಟ ಕಡಿಮೆ ಆಗಿದೆಯಾ? ತಹಶೀಲ್ದಾರ್, AC, DC ಕಚೇರಿಗಳಲ್ಲಿ ಜನರ ಸಮಸ್ಯೆಗೆ ಪರಿಹಾರ ಸಿಗ್ತಾ ಇದೆಯಾ? ಜನರ ಅರ್ಜಿಗಳು ಎಷ್ಟು ದಿನಗಳಿಂದ ಬಾಕಿ ಇವೆ ಪರಿಶೀಲನೆ ನಡೆಸಿದ್ದೀರಾ? ಎಷ್ಟು ಬಾಕಿ ಅರ್ಜಿ ನಿಮ್ಮಿಂದ ಬಗೆಹರಿದಿದೆ? ಎಷ್ಟು ಆಸ್ಪತ್ರೆಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೀರಿ? ಡಯಾಲಿಸಿಸ್ ಕೇಂದ್ರಗಳಲ್ಲಿ ಸಮರ್ಪಕ ಸೇವೆ ಜನರಿಗೆ ಸಿಗುತ್ತಿದೆಯಾ? ಜನತಾ ಸ್ಪಂದನದಲ್ಲಿ ಬಂದ ಸಮಸ್ಯೆಗಳಿಗೆ ಸಮರೋಪಾದಿಯಲ್ಲಿ ಪರಿಹಾರ ಒದಗಿಸಿಕೊಡಿ ಎನ್ನುವ ಸೂಚನೆ ನೀಡಿದ್ದೆ. ಸದ್ಯ ಸಮಾಧಾನಕರವಾಗಿ ಕೆಲಸ ಮಾಡಿದ್ದೀರಿ. ಇದರ ಪ್ರಮಾಣ ಮತ್ತು ವೇಗವನ್ನು ಇನ್ನಷ್ಟು ಹೆಚ್ಚಿಸಿ ಎನ್ನುವ ಸೂಚನೆ ನೀಡಿದರು.
ನೀವು ಉಸ್ತುವಾರಿ ವಹಿಸಿರುವ ಜಿಲ್ಲೆಯಲ್ಲಿನ ಅಧಿಕಾರಿಗಳು- ಫಲಾನುಭವಿಗಳ ಜತೆ ಸಂಪರ್ಕ, ಸಂಬಂಧ ಇನ್ನಷ್ಟು ಹೆಚ್ಚು ಹೆಚ್ಚು ಏರ್ಪಡಬೇಕು. ಜನ ಹೆಚ್ಚು ಹೋಗೋದು ಕೃಷಿ, ಕಂದಾಯ, ಪೊಲೀಸ್ ಇಲಾಖೆ, ಠಾಣೆಗಳಿಗೆ ಬರ್ತಾರೆ. ನೀವು ಎಷ್ಟು ಠಾಣೆಗಳಿಗೆ ಭೇಟಿ ನೀಡಿದ್ರಿ? ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ? ನಿಮ್ಮಿಂದ ಜಿಲ್ಲಾಡಳಿತಕ್ಕೆ ಏನು ಸಲಹೆ ಸಿಕ್ಕಿದೆ? ನಿಮ್ಮ ಅನುಭವದ ಅನುಕೂಲ ಜಿಲ್ಲೆಗಳಿಗೆ ಎಷ್ಟಾಗಿದೆ ಎಂದು ಪ್ರಶ್ನಿಸಿದರು
DC ಗಳಿಗೆ ಜಾತ್ಯತೀತತೆ ಬಗ್ಗೆ ಕಮಿಟ್ ಮೆಂಟ್ ಇರಬೇಕು. ಸಂವಿಧಾನದ ಬಗ್ಗೆ ಗೌರವ ಇರಬೇಕು. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಅಂತಹ ಅಧಿಕಾರಿಗಳಿಗೆ ಇಲ್ಲಿ ಮುಂದುವರೆಯುವ ಹಕ್ಕಿಲ್ಲ. ಅವಕಾಶವೂ ಇಲ್ಲ ನಿಮ್ಮ ಲೆವೆಲ್ ನಲ್ಲಿ ಸಮಸ್ಯೆ ಬಗೆಹರಿಯದೆ ಹೋದರೆ, ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಬೇಕು. ಕರ್ತವ್ಯಲೋಪ, ನಿರ್ಲಕ್ಷ್ಯಕ್ಕೆ ಜಿಲ್ಲಾ ಮಟ್ಟದಲ್ಲಿ ನೀವು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳದೇ ಹೋದರೆ ಜಿಲ್ಲಾ ಮಟ್ಟದಲ್ಲಿ ಹೇಗೆ ಶಿಸ್ತು ತರ್ತೀರಿ ಎಂದರು.












Click it and Unblock the Notifications