ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಳಿಕ ಸಿದ್ದರಾಮಯ್ಯ ರಾಜೀನಾಮೆ: ವಿಜಯೇಂದ್ರ ಸ್ಟೋಟಕ ಹೇಳಿಕೆ
ಬೆಂಗಳೂರು, ನವೆಂಬರ್ 15: ಮೊನ್ನೆ ನಡೆದ 3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಹಿನ್ನಡೆ ಆಗುವುದಾಗಿ ಖಾತ್ರಿಯಾಗಿ, ಕಾಂಗ್ರೆಸ್ಸಿನ ಘಟಾನುಘಟಿಗಳು ಇವತ್ತು ಸಾವಿರಾರು ಕೋಟಿಯೊಂದಿಗೆ ತಮ್ಮದೇ ಪಕ್ಷದ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂಬ ಮಾಹಿತಿ ನಮಗೂ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಆಡಳಿತದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರಿಗೂ ಈ ಮಾಹಿತಿ ಸಿಕ್ಕಿದೆ. ಹಾಗಾಗಿ, ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆ ಆರೋಪ ಮಾಡಲು ಸಾಧ್ಯವಾಗದೇ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಶಾಸಕರ ಖರೀದಿ ವಿಚಾರಕ್ಕೆ ಬರುವ ದಿನಗಳಲ್ಲಿ ಕಾಲವೇ ಉತ್ತರ ಕೊಡಲಿದೆ ಎಂದು ವಿಜಯೇಂದ್ರ ಅವರು ಹೇಳಿದರು.

ರಾಜೀನಾಮೆ ಕೊಡುವ ಕಾಲ ಸನ್ನಿಹಿತವಾಗಿದೆ ಎಂಬುದು ಸ್ವತಃ ಸಿದ್ದರಾಮಯ್ಯನವರಿಗೆ ಮನವರಿಕೆ ಆಗಿದೆ. ಹಾಗಾಗಿ ಬಿಜೆಪಿ ವಿರುದ್ಧ ಈ ರೀತಿ ಆರೋಪ, ಗೂಬೆ ಕೂರಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ದೂರಿದರು. ಯಾವತ್ತು ರಾಜೀನಾಮೆ ಕೊಡುತ್ತಾರೆ? ಯಾರು ಹೊಸ ಸಿಎಂ ಎಂಬುದೇ ಪ್ರಶ್ನೆ. ಕಾಂಗ್ರೆಸ್ ಪಕ್ಷದೊಳಗಡೆ ಕುದುರೆವ್ಯಾಪಾರ ನಡೆದಿದೆ. ಬಿಜೆಪಿಯಲ್ಲಿ ಇರುವುದು ಕೇವಲ 66 ಶಾಸಕರು ಮಾತ್ರ. ಆ ಪ್ರಶ್ನೆ ಉದ್ಭವಿಸುವುದಿಲ್ಲ; ಸಿದ್ದರಾಮಯ್ಯನವರೇ, ನಿಮ್ಮ ಅಕ್ಕಪಕ್ಕ ಇರುವ ಹಿರಿಯ ಸಚಿವರಿಗೆ ತಾವು ಭಯ ಪಡಬೇಕಿದೆ. ಬಿಜೆಪಿ ಬಗ್ಗೆ ಆತಂಕ ಬೇಕಿಲ್ಲ ಎಂದು ಹೇಳಿದರು.
ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ವಿಚಾರದಲ್ಲಿ ಬದಲಾವಣೆ ಆಗುವುದಿಲ್ಲ. ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಳಿಕ ಯಾವಾಗ ಬೇಕಿದ್ದರೂ ತೀರ್ಮಾನ ಆಗಲಿದೆ. ಸಿದ್ದರಾಮಯ್ಯನವರು ಅತಿ ಶೀಘ್ರದಲ್ಲೇ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರಿನ ವಿಧಾನಸಭಾ ಉಪ ಚುನಾವಣೆಯಲ್ಲಿ ಎನ್ಡಿಎ ಗೆಲ್ಲಲಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ಭ್ರಮೆಯಲ್ಲಿತ್ತು. ಆದರೆ, ಅಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರು ಗೆದ್ದೇಗೆಲ್ಲುವ ವಾತಾವರಣ ಇದೆ ಎಂದು ತಿಳಿಸಿದರು. ಅದೇರೀತಿ ಸಂಡೂರಿನಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿನ ವಿಶ್ವಾಸ ಇದೆ. ಶಿಗ್ಗಾಂವಿಯಲ್ಲೂ ಭರತ್ ಬೊಮ್ಮಾಯಿಯವರು ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ. 3 ಕ್ಷೇತ್ರಗಳಲ್ಲೂ ಬಿಜೆಪಿ- ಎನ್ಡಿಎ ಗೆದ್ದು ಹೊಸ ಇತಿಹಾಸ ಸೃಷ್ಟಿ ಆಗಲಿದೆ ಎಂದು ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಹತಾಶರಾಗಿ ಮಾತನಾಡಿದ್ದಾರೆ. ಬಿಜೆಪಿ, ಕಾಂಗ್ರೆಸ್ ಪಕ್ಷದ ಶಾಸಕರಿಗೆ ₹50 ಕೋಟಿಯನ್ನು ಆಮಿಷವಾಗಿ ಒಡ್ಡುತ್ತಿದ್ದು, ಸರಕಾರ ಅಸ್ಥಿರಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಸಿದ್ದರಾಮಯ್ಯನವರು ಮಾಡಿದ್ದು ಬಿಜೆಪಿ ವಿರುದ್ಧ ನೇರ ಆರೋಪ ಮಾಡಿದ್ದಾಗಿ ಆಕ್ಷೇಪಿಸಿದರು.
ವಾಸ್ತವಿಕವಾಗಿ ಕಾಂಗ್ರೆಸ್ ಪಕ್ಷದಲ್ಲಿ ಸ್ವತಃ ಮುಖ್ಯಮಂತ್ರಿಗಳು, ಅವರ ಕುಟುಂಬವೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಸಿದ್ದರಾಮಯ್ಯರಿಗೆ ತಮ್ಮ ಮುಖ್ಯಮಂತ್ರಿ ಕುರ್ಚಿ ಅಲ್ಲಾಡುತ್ತಿದೆ ಎಂದು ಮನವರಿಕೆಯಾಗಿದೆ. ಕಾಂಗ್ರೆಸ್ಸಿನ ಒಳಗಡೆ ಇವತ್ತು ನಾಲ್ಕಾರು ಜನ ಕಾಂಗ್ರೆಸ್ಸಿನ ಹಿರಿಯ ಮುಖಂಡರು ಹೇಗಾದರೂ ಮಾಡಿ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಲು ಮುಂದಾಗಿದ್ದಾರೆ. ಹೊರಗಡೆಯಿಂದ ಬಂದವರಿಗೆ 5 ವರ್ಷ ಅವಕಾಶ ಕೊಟ್ಟಿದ್ದು, ಈಗ ಮತ್ತೆ 2 ವರ್ಷವಾಗಿದೆ ಎಂಬ ಭಾವನೆ ಇದೆ ಎಂದರು.
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದ ಭ್ರಮೆಯಲ್ಲಿದ್ದರು. ಕರ್ನಾಟಕದ ಭ್ರಷ್ಟಾಚಾರದ ಪರಿಣಾಮವಾಗಿ ಕಾಂಗ್ರೆಸ್ ಹರಿಯಾಣದಲ್ಲಿ ಸೋತಿದೆ. ಈಗ ಮಹಾರಾಷ್ಟ್ರದಲ್ಲೂ ಸೋಲಲಿದ್ದಾರೆ. ಬಿಜೆಪಿ ಹಿರಿಯರ ಜೊತೆ ಚರ್ಚೆ ನಡೆಸಿದ್ದು, ಎರಡು ಹಂತದಲ್ಲಿ ಹೋರಾಟಕ್ಕೆ ತೀರ್ಮಾನ ಮಾಡಲಾಗಿದೆ. ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿಯಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಒಟ್ಟಾರೆಯಾಗಿ ಎರಡು ಹಂತದಲ್ಲಿ ಹೋರಾಟಕ್ಕೆ ನಿರ್ಧರಿಸಿದ್ದೇವೆ. ಅದರ ಪ್ರಕಾರ 3 ತಂಡಗಳ ರಚನೆ ಮಾಡಿದ್ದೇವೆ ಎಂದು ತಿಳಿಸಿದರು.
ರೈತರ ಪರವಾಗಿ ಹೋರಾಟಕ್ಕೆ ಮುಜುಗರ ಯಾಕೆ? ಅದರ ಬಗ್ಗೆ ನಮ್ಮ ತಕರಾರಿಲ್ಲ ಎಂದ ಅವರು, ವಕ್ಫ್ ವಿಚಾರದಲ್ಲಿ ಕಾಂಗ್ರೆಸ್ ಸರಕಾರ ಅಯೋಗ್ಯತನವನ್ನು ಪ್ರದರ್ಶಿಸುತ್ತಿದೆ. ರೈತರ ಜಮೀನು ಕಿತ್ತುಕೊಳ್ಳುತ್ತಿದ್ದು, ರಾಜ್ಯದ ರೈತರು ಆತಂಕದಲ್ಲಿದ್ದಾರೆ. ಮಠಮಾನ್ಯಗಳ ಜಮೀನು, ದೇವಸ್ಥಾನಗಳ ಜಮೀನನ್ನು ಕಿತ್ತುಕೊಳ್ಳಲಾಗುತ್ತಿದೆ. ರಾಜ್ಯ ಸರಕಾರ ಸ್ಪಷ್ಟ ಉತ್ತರ ಕೊಡುವವರೆಗೆ, ಎಲ್ಲಿನವರೆಗೆ ರೈತರಿಗೆ ನಿರಾಳತೆ ಸಿಗುವುದಿಲ್ಲವೋ ಅಲ್ಲಿನವರೆಗೆ ದೃಢವಾಗಿ ಹೋರಾಟ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು.
ಎಲ್ಲ ಶಾಸಕರು, ಹಿರಿಯರು, ವಿಧಾನಪರಿಷತ್ ಸದಸ್ಯರು, ಕೇಂದ್ರ ಸಚಿವರೂ ಹೋರಾಟದಲ್ಲಿ ಇರಲಿದ್ದಾರೆ ಎಂದು ತಿಳಿಸಿದರು. ರೈತರ ಪರವಾಗಿ ಧ್ವನಿ ಎತ್ತಿದ ಪಕ್ಷ ಬಿಜೆಪಿ. ಯಡಿಯೂರಪ್ಪನವರು ರೈತರ ಪರವಾಗಿ ರೈತರ ಹೆಸರಿನಲ್ಲೇ ಪ್ರಮಾಣವಚನ ಸ್ವೀಕರಿಸಿ ಆಡಳಿತ ನಡೆಸಿದವರು. ಹಾಗಾಗಿ ರೈತರ ವಿಚಾರದ ಹೋರಾಟದಲ್ಲಿ ಬಿಜೆಪಿ ಹಿಂದೆ ಬೀಳುವ ಪ್ರಶ್ನೆಯೇ ಇಲ್ಲ. ಪಕ್ಷದ ಹಿರಿಯರ ತಂಡವನ್ನು ರಚಿಸಿದ್ದು, ಶೀಘ್ರವೇ ವಿವರ ನೀಡುವುದಾಗಿ ತಿಳಿಸಿದರು.












Click it and Unblock the Notifications