ಮುಂದಿನ ಸಿಎಂ ಕುರಿತು ಸಿದ್ದರಾಮಯ್ಯ ಡ್ಯಾಮೇಜಿಂಗ್ ಹೇಳಿಕೆ: ಕಾಂಗ್ರೆಸ್ ಹೈಕಮಾಂಡ್ಗೆ ಗುಪ್ತ ಸಂದೇಶ ರವಾನೆ?
ಬೆಂಗಳೂರು, ಏಪ್ರಿಲ್ 4: ಕರ್ನಾಟಕ ವಿಧಾನಸಭೆ ಚುನಾವಣೆ ಗೆಲ್ಲಲು ಸಾಕಷ್ಟು ಕಸರತ್ತನ್ನು ಕಾಂಗ್ರೆಸ್ ಮಾಡುತ್ತಿದ್ದು, ಗೆದ್ದೇ ಗೆಲ್ಲುವ ಪಣತೊಟ್ಟಿದೆ. ಒಂದು ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದರೆ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಸದ್ಯ ಕಾಂಗ್ರೆಸ್ನಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಆದರೆ ಮುಂದಿನ ಮುಖ್ಯಮಂತ್ರಿ ಬಗ್ಗೆ ಸಿದ್ದರಾಮಯ್ಯ ಅವರು ಈಗ ನೀಡಿರುವ ಹೇಳಿಕೆ ಕಾಂಗ್ರೆಸ್ಗೆ ದೊಡ್ಡ ಹೊಡೆತ ನೀಡುವ ಸಾಧ್ಯತೆ ಹೆಚ್ಚಿದೆ.

ಸಿದ್ದರಾಮಯ್ಯ ಅವರು ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಪಕ್ಷವು ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಆಕಾಂಕ್ಷಿಗಳಲ್ಲಿ ನಾನೂ ಸೇರಿದ್ದೇನೆ. ತಮ್ಮ ಪ್ರತಿಸ್ಪರ್ಧಿ ಹಾಗೂ ಪಕ್ಷದ ಮುಖ್ಯಸ್ಥ ಡಿ.ಕೆ. ಶಿವಕುಮಾರ್ಗೆ ಉನ್ನತ ಹುದ್ದೆಯ ರೇಸ್ನಲ್ಲಿ ಅವಕಾಶವಿಲ್ಲ. ಕಾಂಗ್ರೆಸ್ ಗೆದ್ದರೂ ಹೈಕಮಾಂಡ್ ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲ್ಲ ಎಂದು ಸಿದ್ದರಾಮಯ್ಯ ಅಚ್ಚರಿ ಹೇಳಿಕೆಯನ್ನ ನೀಡಿದ್ದಾರೆ.
ಇದು ಹಳೆ ಮೈಸೂರು ಭಾಗದ ಒಕ್ಕಲಿಗ ಸಮುದಾಯದ ಮುಖಂಡರಲ್ಲಿ ಅಸಮಾಧಾನವನ್ನು ಹುಟ್ಟುಹಾಕಿದೆ. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಅವರು ಸಿಎಂ ಆಗುವುದಾದರೇ ನಾವು ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಹಳೆ ಮೈಸೂರು ಪ್ರಾಂತ್ಯದ ಒಕ್ಕಲಿಗ ಸಮುದಾಯದವರ ಪಕ್ಷಾತೀತ ಮಾತು. ಆದರೆ ಈಗ ಸಿದರಾಮಯ್ಯ ಅವರು ಡಿಕೆಶಿ ಬಗ್ಗೆ ಹೇಳಿರುವ ಹೇಳಿಕೆಯಿಂದ ಕಾಂಗ್ರೆಸ್ಗೆ ಕೆಲವು ಸ್ಥಾನಗಳಿಗೆ ಕುತ್ತು ತರುವ ಅಪಾಯವಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಹೈಕಮಾಂಡ್ ಮಧ್ಯಪ್ರವೇಶಿಸುವುದಿಲ್ಲ. ಏಕೆಂದರೆ ನಾವು ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ಮೂಲಕ ಹೋಗಬೇಕು. ಹೈಕಮಾಂಡ್ ಸ್ವಂತವಾಗಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಹೊಸದಾಗಿ ಆಯ್ಕೆಯಾದ ಶಾಸಕರ ಅಭಿಪ್ರಾಯದಂತೆ ಹೋಗಬೇಕಾಗುತ್ತದೆ ಎಂದು ಹೇಳಿದ್ದಾರೆ.

ಹಳೆ ಮೈಸೂರ ಭಾಗ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಒಕ್ಕಲಿಗ ಸಮುದಾಯ ಪ್ರಬಲವಾಗಿದೆ. ಹಲವಾರು ಕ್ಷೇತ್ರದಲ್ಲಿ ಇವರೇ ನಿರ್ಣಾಯಕ ಮತದಾರರು. ಡಿಕೆಶಿ ಅವರು ಒಕ್ಕಲಿಗ ಸಮುದಾಯದಲ್ಲಿ ಪ್ರಬಲ ಹಿಡಿತ ಹೊಂದಿದ್ದಾರೆ. ಹೀಗಾಗಿ ಅವರೆಲ್ಲರ ಅವಕೃಪೆಗೆ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಒಳಗಾಗಬೇಕಾಗುತ್ತದೆ.
ಒಂದು ವೇಳೆ ಸಿಎಂ ಸ್ಥಾನದ ಆಕಾಂಕ್ಷಿಗಳಾದ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ಒಳಜಗಳ ತಾರಕಕ್ಕೆ ಹೋದರೆ ಮುಚ್ಚಿಹೋದ ಕೆಂಡದಂತಿರುವ ದಲಿತ ಮುಖ್ಯಮಂತ್ರಿ ಕೂಗು ಮತ್ತೆ ಕೇಳಿ ಬಂದು ದಲಿತ ಸಮುದಾಯದ ಮಾಸ್ ಲೀಡರ್ ಆಗಿರುವ ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ಮುಖ್ಯಮಂತ್ರಿ ಆದರೂ ಆಗಬಹುದು. ಆದರೆ ಇದು ಕಷ್ಟಸಾಧ್ಯದ ವಿಷಯವಾಗಿದೆ. ಹೈಕಮಾಂಡ್ ಮೂಲಗಳ ಪ್ರಕಾರ ಆರಂಭಿಕ 2 ವರ್ಷ ಸಿದ್ದರಾಮಯ್ಯ ಸಿಎಂ ಆದರೆ ಮುಂದಿನ ಮೂರು ವರ್ಷ ಡಿಕೆಶಿ ಸಿಎಂ ಆಗುತ್ತಾರೆ ಎಂದು ತಿಳಿದು ಬಂದಿದೆ.
ಸಿದ್ದರಾಮಯ್ಯ ಕಾಂಗ್ರೆಸ್ನಲ್ಲಿ ಯುವ ನಾಯಕರಿಗೆ ಅವಕಾಶ ನೀಡುವ ಕುರಿತು ಮಾತನಾಡಿ, ಇದು ನನ್ನ ಕೊನೆಯ ಚುನಾವಣೆಯಾಗಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇಲ್ಲ. ಕಾಂಗ್ರೆಸ್ ಪಕ್ಷವು ಜೆಡಿಎಸ್ ಜತೆ ಸೇರಿ ಸರ್ಕಾರ ರಚಿಸುವುದಿಲ್ಲ. ಅದರ ಅಗತ್ಯವೂ ಇರುವುದಿಲ್ಲ. ಏಕೆಂದರೆ, ಕಾಂಗ್ರೆಸ್ ಸಂಪೂರ್ಣ ಸಾಮರ್ಥ್ಯದಿಂದ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾದ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಒಳಗೆ ಸಿದ್ದರಾಮಯ್ಯ ಅವರು ಸಿಎಂ ಆಗಬೇಕು ಎಂದು ಬಯಸುವವರ ಸಂಖ್ಯೆ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಬಯಸುವವರ ಸಂಖ್ಯೆಗಿಂತ ದೊಡ್ಡದಿದೆ. ಹಾಗಾಗಿ ಸಿದ್ದರಾಮಯ್ಯ ಹೆಚ್ಚು ವಿಶ್ವಾದ ಹೊಂದಿದ್ದಾರೆ. ಕರ್ನಾಟಕ ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಅವರ ಚರಿಷ್ಮಾ ಹೆಚ್ಚಾಗಿಯೇ ಇದೆ. ಆದರೆ ಡಿಕೆಶಿ ಅವರ ಪ್ರಬಲ ಸಂಘಟನಾ ಶಕ್ತಿಗೆ ಹೆಸರಾದರೆ ಸಿದ್ದು ತಮ್ಮದೇ ವೈಯುಕ್ತಿಕ ವರ್ಚಸ್ಸು ಹೊಂದಿದ್ದಾರೆ. ಈಗಾಗಲೇ ನಡೆದಿರುವ 6 ಸಮೀಕ್ಷೆಗಳಲ್ಲಿ 3 ಸಮೀಕ್ಷೆಗಳು ಸಮ್ಮಿಶ್ರ ಸರ್ಕಾರ ಬರುತ್ತದೆ ಎಂದು ಹೇಳಿದರೆ, 3 ಸಮೀಕ್ಷೆಗಳು ಕಾಂಗ್ರೆಸ್ಗೆ ಸುಲಭ ಬಹುಮತ ಬರುತ್ತದೆ ಎಂದು ತಿಳಿಸಿವೆ. ಒಟ್ಟಿನಲ್ಲಿ ಯಾರೂ ಸಿಎಂ ಅಗುತ್ತಾರೆ ನೋಡಬೇಕಿದೆ.












Click it and Unblock the Notifications