Siddaramaiah: ಕಾಂಗ್ರೆಸ್ ಪ್ರತಿಭಟನೆ ಬೆನ್ನಲ್ಲೇ, ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ತಡೆಯಾಜ್ಞೆ
ಬೆಂಗಳೂರು, ಜ. 09: ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸೋಮವಾರ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.
ಸಿದ್ದು ನಿಜಕನಸು ಪುಸ್ತಕ ಬಿಡುಗಡೆಗೆ ನಗರದ ಟೌನ್ ಹಾಲ್ನಲ್ಲಿ ಸೋಮವಾರ ನಡೆಯಬೇಕಿತ್ತು. ಇದನ್ನು ಕಾರ್ಯಕ್ರಮ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡುವೆಯೇ ಸೋಮವಾರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಪುಸ್ತಕ ಬಿಡುಗಡೆ ವಿಚಾರ ಚರ್ಚೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ತಡೆ ನೀಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದರು. ಇದರ ಬೆನ್ನಲ್ಲೇ ಹೆಚ್ಚುವರಿ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ.

ಇನ್ನು, ಸಿದ್ದು ನಿಜಕನಸು ಪುಸ್ತದಕ ಬಿಡುಗಡೆ, ಮಾರಾಟ ಅಲ್ಲದೇ ಮಾಧ್ಯಮ ಪ್ರಸಾರಕ್ಕೆ ತಡೆಯಾಜ್ಞೆ ನೀಡಿ ಮುಂದಿನ ವಿಚಾರಣೆಯನ್ನು ಮುಂದಿನ ತಿಂಗಳು ಫೆ.9ಕ್ಕೆ ಮುಂದೂಡಿದೆ.
ಪುಸ್ತಕ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, "ನನ್ನ ತೇಜೋವಧೆ ಮಾಡಲು ಚುನಾವಣೆ ಸಮೀಪದಲ್ಲಿರುವಾಗ ಬಿಜೆಪಿ ಇಂಥ ಪುಸ್ತಕ ಹೊರತರುತ್ತಿದೆ.ಕಾನೂನಿನ ಮೂಲಕ ಏನು ಸಾಧ್ಯವೊ ಅದನ್ನು ಮಾಡೋಣ" ಎಂದಿದ್ದರು.
ಇನ್ನು, ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಬೇಕಿದ್ದ ಟೌನ್ ಹಾಲ್ ಮುಂದೆಯೇ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಸಿದ್ದರಾಮಯ್ಯ ಅವರ ಆಡಳಿತ ಸಂದರ್ಭದಲ್ಲಿ ಮಾಡಿದ ಸಾಧನೆಗಳ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾ ನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಈ ಹಿಂದೆ ರಂಗಾಯಣ ನಿರ್ದೇಶಕ ಅಡ್ದಂಡ ಕಾರ್ಯಪ್ಪ ಬರೆದಿರುವ ಟಿಪ್ಪು ನಿಜ ಕನಸುಗಳು ಪುಸ್ತಕದ ಮಾದರಿಯಲ್ಲೇ ಈ ಸಿದ್ದು ನಿಜಕನಸುಗಳು ಪುಸ್ತಕದ ಮುಖಪುಟ ವಿನ್ಯಾಸ ಮಾಡಲಾಗಿದೆ. ಪುಸ್ತಕ ಬಿಡುಗಡೆಯನ್ನು ಖಂಡಿಸಿರುವ ಕಾಂಗ್ರೆಸ್ ಹಲವೆಡೆ ಪ್ರತಿಭಟನೆ ಆಯೋಜಿಸಿತ್ತು. ಜೊತೆಗೆ ಕಾರ್ಯಕ್ರಮ ಆಯೋಜನಕರ ವಿರುದ್ಧ ಕಾಂಗ್ರೆಸ್ ವಕ್ತಾರ ಹಾಗೂ ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಎಲ್ ಅವರು ಎಸ್.ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.












Click it and Unblock the Notifications