ಸಚಿವ ಎಂ.ಟಿ.ಬಿ. ಭೇಟಿ ಮಾಡಿದ್ದು ನಿಜ, ಈ ಸರ್ಕಾರ ಅವಧಿ ಪೂರ್ಣಗೊಳಿಸುವುದಿಲ್ಲ!
ಬೆಂಗಳೂರು, ಆ. 14: ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಬಳಿಕ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪಕ್ಷದಲ್ಲಿನ ಅಸಮಾಧಾನವನ್ನು ಸಾಧ್ಯವಾದಷ್ಟೂ ನಿಯಂತ್ರಿಸುತ್ತಿದ್ದಾರೆ. ಆದರೆ ಅಸಮಾಧಾನ ಪರಿಹರಿಸುವಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತಿಗೆ ಹೆಚ್ಚು ಬಲವಿದೆ ಎಂಬುದು ಬಿಜೆಪಿಯಲ್ಲಿನ ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಯಡಿಯೂರಪ್ಪ ಅವರ ಸಹಕಾರ ಇರುವವರೆಗೆ ರಾಜ್ಯ ಬಿಜೆಪಿ ಸರ್ಕಾರ ಸದೃಢವಾಗಿರುತ್ತದೆ ಎಂದ ಎಂಬ ಚರ್ಚೆಗಳು ಬಿಜೆಪಿಯಲ್ಲಿಯೇ ನಡೆದಿವೆ ಎಂಬ ಮಾಹಿತಿಯಿದೆ.
ಯಡಿಯೂರಪ್ಪ ಅವರು ಅಧಿಕಾರ ಬಿಟ್ಟುಕೊಟ್ಟಿದ್ದರೂ ಅವರ ಮಾತೇ ಅಂತಿಮ ಎಂಬ ಮಾಹಿತಿಯಿದೆ. ಜೊತೆಗೆ ಸಚಿವರಾದ ಆನಂದ್ ಸಿಂಗ್ ಹಾಗೂ ಎಂ.ಟಿ.ಬಿ. ನಾಗರಾಜ್ ಅವರ ಅಸಮಾಧಾನ ತಣಿಸಿದ್ದು ಕೂಡ ಮಾಜಿ ಸಿಎಂ ಯಡಿಯೂರಪ್ಪ. ಹೀಗಾಗಿ ರಾಜ್ಯ ಬಿಜೆಪಿ ಶಕ್ತಿಯಾಗಿ ಈಗಲೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮುಂದುವರೆದಿದ್ದಾರೆ. ಇದೇ ಕಾರಣದ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಹೇಳಿಕೆ ನೀಡಿದ್ದಾರೆ.

ಬೊಮ್ಮಾಯಿ ಸರ್ಕಾರ ಅವಧಿ ಮುಗಿಸುವುದಿಲ್ಲ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿ ಶನಿವಾರ ಮಾತನಾಡಿದ ಸಿದ್ದರಾಮಯ್ಯ, "ಸರ್ಕಾರದಲ್ಲಿ ಗೊಂದಲ ಮುಂದುವರಿದಿದೆ. ಈ ಸರ್ಕಾರ ಅವಧಿ ಪೂರ್ಣಗೊಳಿಸುವುದು ಅನುಮಾನ. ಯಾವುದೇ ಸಂದರ್ಭದಲ್ಲಿ ಪತನಗೊಳ್ಳುವ ಸಾಧ್ಯತೆ ಇದೆ" ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. "ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ, ಅರವಿಂದ ಬೆಲ್ಲದ್, ರಾಮದಾಸ ಮತ್ತಿತರ ಶಾಸಕರು ದೆಹಲಿಗೆ ಹೋಗಿ ಬಂದು ಮಾಡುತ್ತಿದ್ದಾರೆ. ಹೀಗಾಗಿ ಈ ಸರ್ಕಾರ ಬಹಳ ದಿನ ಬಾಳುವುದಿಲ್ಲ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಚಿವ ಎಂ.ಟಿ.ಬಿ. ಭೇಟಿ ಸಂದರ್ಭ ಶರತ್ ಬಚ್ಚೇಗೌಡ ಇದ್ದರು
ನಾನು ಮತ್ತು ಸಚಿವ ಎಂಟಿಬಿ ನಾಗರಾಜ್ ನಿನ್ನೆ ಹೊಸಕೋಟೆಯಲ್ಲಿ ಭೇಟಿಯಾಗಿದ್ದುದು ನಿಜ. ಆದರೆ ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಲಿಲ್ಲ. ಬಿಜೆಪಿಯವರ ಜೊತೆ ರಾಜಕೀಯ ಮಾತನಾಡುವುದೂ ಇಲ್ಲ. ಬಿಜೆಪಿಯವರು ಅಧಿಕಾರದಿಂದ ತೊಲಗಲಿ ಎಂದು ಹೇಳುವವನು ನಾನು. ಕನಕ ಸಮೃದ್ಧಿ ಸಹಕಾರ ಬ್ಯಾಂಕ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಹೊಸಕೋಟೆಗೆ ಹೋಗಿದ್ದೆ. ಕಾರ್ಯಕ್ರಮಕ್ಕೆ ಮುನ್ನ ಕಾಂಗ್ರೆಸ್ ಮುಖಂಡರ ಮನೆಯಲ್ಲಿ ಊಟ ಇತ್ತು. ನಾಗರಾಜ್ ಸಹ ಅಲ್ಲಿಗೆ ಬಂದಿದ್ದರು ಅಷ್ಟೆ. ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯಿಲಿ, ಶಾಸಕ ಬೈರತಿ ಸುರೇಶ್ ಶರತ್ ಬಚ್ಚೇಗೌಡ ಸಹ ಇದ್ದರು ಎಂದು ಸಿದ್ದರಾಮಯ್ಯ ಎಂಬಿಟಿ ನಾಗರಾಜ್ ಅವರ ಭೇಟಿಯ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಸಚಿವ ಕೆ.ಎಸ್. ಈಶ್ವರಪ್ಪ ಆಸಕ್ತಿ ವಹಿಸಲಿ
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಗಣತಿ ವರದಿ ನಾನು ಮುಖ್ಯಮಂತ್ರಿ ಆಗಿದ್ದಾಗ ಸಿದ್ಧವಾಗಿರಲಿಲ್ಲ. ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದಾಗ ವರದಿ ಸಿದ್ಧವಾಗಿತ್ತು. ಅಂದಿನ ಸಚಿವ ಪುಟ್ಟರಂಗ ಶೆಟ್ಟಿ ವರದಿ ಮಂಡನೆಗೆ ಮುಂದಾದಾಗ ಅವಕಾಶ ಕೊಡಲಿಲ್ಲ. ಈಗ ಈಶ್ವರಪ್ಪ ಸಚಿವರಾಗಿದ್ದಾರೆ. ಅವರು ವರದಿ ಸ್ವೀಕಾರ ಆಗುವಂತೆ ಮಾಡಲಿ. ರಾಯಣ್ಣ ಬ್ರಿಗೇಡ್, ಕುರುಬರ ಎಸ್ ಟಿ ಹೋರಾಟದ ಜೊತೆಗೆ ಈ ಕೆಲಸಕ್ಕೂ ಅವರು ಮುಂದಾಗಲಿ. ವರದಿ ಮಂಡನೆಗೆ ನಿರಾಕರಿಸಿದಾಗ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕಿತ್ತು ಎಂದು ಈಶ್ವರಪ್ಪ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ನಾನು ಮಂತ್ರಿ ಆಗಿರಲಿಲ್ಲ. ಸಮನ್ವಯ ಸಮಿತಿ ಅಧ್ಯಕ್ಷ ಆಗಿದ್ದೆ. ರಾಜೀನಾಮೆ ಪರಿಹಾರ ಎಂದಾಗಿದ್ದರೆ ಕೊಡುತ್ತಿದೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.

ಶಾಲೆ, ಕಾಲೇಜು ಆರಂಭಿಸುವುದು ಬೇಡ!
ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಬರದಿದ್ದರೆ ಶಾಲೆ, ಕಾಲೇಜುಗಳನ್ನು ಆರಂಭಿಸುವುದು ಸೂಕ್ತವಲ್ಲ. ಇದರಿಂದ ಮಕ್ಕಳನ್ನು ನಾವೇ ತೊಂದರೆಗೆ ದೂಡಿದಂತೆ ಆಗುತ್ತದೆ. ಜನಜಂಗುಳಿ ಹೆಚ್ಚಾಗಿರುವ ಕಾರ್ಯಕ್ರಮಗಳಿಗೆ ಸರ್ಕಾರ ಅನುಮತಿ ನೀಡಬಾರದು. ಈ ಒಂದು ವರ್ಷ ಹಬ್ಬ ಹರಿದಿನ, ಜಾತ್ರೆಗಳನ್ನು ಮಾಡದಿರುವುದು ಉತ್ತಮ. ಮುಂದಿನ ತಿಂಗಳು ಗಣೇಶನ ಹಬ್ಬ. ಸಾಧ್ಯವಾದಷ್ಟು ಮನೆಗಳಲ್ಲಿಯೇ ಮೂರ್ತಿ ಕೂರಿಸಿ ಪೂಜಿಸಬೇಕು" ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ರಾಜ್ಯಕ್ಕೆ 3ನೇ ಆತಂಕ, ಸರ್ಕಾರ ಗೊಂದಲದಲ್ಲಿ!
ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಅಪ್ಪಳಿಸುತ್ತಿದೆ. ಕೊಡಗು, ದಕ್ಷಿಣ ಕನ್ನಡ, ಮೈಸೂರು ಸೇರಿದಂತೆ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕು. ಮೂರನೇ ಅಲೆಯಿಂದ ಜನ ತೊಂದರೆಗೆ ಒಳಗಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ. ವಾರಾಂತ್ಯದ ಲಾಕ್ಡೌನ್ ಘೋಷಣೆ ಮಾಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಸೋಂಕು ಹರಡದಂತೆ ಮುಂಜಾಗ್ರತೆ ವಹಿಸುವುದು ಉತ್ತಮ. ಆದರೆ ಸರ್ಕಾರ ತನ್ನ ಗೊಂದಲದಲ್ಲಿಯೇ ಮುಳುಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
"ಸರ್ಕಾರದ ಕ್ರಮಗಳ ಜೊತೆ ಜೊತೆಗೆ ಜನತೆಯೂ ಸಹ ಕೊರೊನಾ ಕುರಿತು ಎಚ್ಚರ ವಹಿಸಬೇಕು. ಮಾಸ್ಕ್, ಸ್ಯಾನಿಟೈಸರ್ ಬಳಸಬೇಕು. ರಾಜ್ಯದಲ್ಲಿ ಲಸಿಕೆ ಕೊರತೆ ಉಂಟಾಗಿದೆ. ಎಲ್ಲಿರಿಗೂ ಲಸಿಕೆ ಕೊಡಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿ. ಕೇವಲ ಸಭೆಗಳನ್ನು ನಡೆಸುವುದರಿಂದ ಏನೂ ಆಗದು. ಜನರಿಗೆ ಲಸಿಕೆ ಕೊಡಿಸುವ ಕಾರ್ಯ ಮೊದಲ ಆಗಬೇಕು" ಎಂದು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರವನ್ನು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಜೊತೆಗೆ ಸರ್ಕಾರದ ಮತ್ತೊಂದು ಗೊಂದಲವನ್ನು ಸಿದ್ದರಾಮಯ್ಯ ವಿವರಿಸಿದ್ದಾರೆ.












Click it and Unblock the Notifications