ಕೋಲಾರಕ್ಕೆ ಭೇಟಿ ನೀಡಿದ ಯತೀಂದ್ರ ಸಿದ್ದರಾಮಯ್ಯ!
ಬೆಂಗಳೂರು, ಜನವರಿ 30; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೋಲಾರಕ್ಕೆ ಭೇಟಿ ನೀಡಿದರು. ಕೋಲಾರ ಕ್ಷೇತ್ರದಿಂದ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಈಗಾಗಲೇ ಘೋಷಣೆ ಮಾಡಿದ್ದಾರೆ.
ಸೋಮವಾರ ವರುಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಕೋಲಾರಕ್ಕೆ ಭೇಟಿ ನೀಡಿದರು. ಕೋಲಾರಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಆದರೆ ಹೈಕಮಾಂಡ್ ಈ ಕುರಿತು ಇನ್ನೂ ಒಪ್ಪಿಗೆ ನೀಡುವುದು ಬಾಕಿ ಇದೆ.
ಸಿದ್ದರಾಮಯ್ಯ ಸ್ಪರ್ಧೆ ಹಿನ್ನಲೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಸಿದ್ದರಾಮಯ್ಯ ವಾಸ್ತವ್ಯ ಹೂಡಲು ನಿಗದಿ ಮಾಡಿರುವ ಬಾಡಿಗೆ ಮನೆ ವೀಕ್ಷಣೆ ಮಾಡಿದರು. ಚುನಾವಣಾ ಸಮಯದಲ್ಲಿ ಪ್ರಚಾರ ಕೈಗೊಳ್ಳುವಾಗ ಸಿದ್ದರಾಮಯ್ಯ ಇದೇ ಮನೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಕೋಲಾರ ಬಳಿ ಕೋಗಿಲಹಳ್ಳಿಯ ಶಂಕರಪ್ಪ ಎಂಬುವವರ ಮನೆಯನ್ನು ವೀಕ್ಷಣೆ ಮಾಡಿದರು. ಮನೆಯ ಸುತ್ತಮುತ್ತಲಿನ ಪರಿಸರವನ್ನು ಯತೀಂದ್ರ ಸಿದ್ದರಾಮಯ್ಯ ವೀಕ್ಷಣೆ ಮಾಡಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, "ಮನೆ ಚೆನ್ನಾಗಿದೆ, ಸಿದ್ದರಾಮಯ್ಯ ಅಂತಿಮ ತೀರ್ಮಾನ ತೆಗೆದುಕೊಳ್ತಾರೆ" ಎಂದು ಹೇಳಿದರು.

ಕೋಲಾರದಲ್ಲಿ ಬೃಹತ್ ಸಮಾವೇಶ
ಜನವರಿ 9ರಂದು ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಂಡು ಮಾತನಾಡಿದರು.
"ಇಲ್ಲಿನ ಜನರ ಪ್ರೀತಿ ಅಭಿಮಾನವನ್ನು ನಾನು ತಿರಸ್ಕಾರ ಮಾಡಲಾರೆ. ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಆದರೆ ಹೈಕಮಾಂಡ್ ನ ಅನುಮತಿ ಮೇರೆಗೆ ನನ್ನ ಸ್ಪರ್ಧೆ ನಿರ್ಧಾರವಾಗಲಿದೆ" ಎಂದು ಹೇಳಿದ್ದರು.

ಹೈಕಮಾಂಡ್ ಒಪ್ಪಿಗೆ ನೀಡುತ್ತಾ?
ಕೋಲಾರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, "ಸಿದ್ದರಾಮಯ್ಯ ಎಂಬ ಕಾರಣಕ್ಕೆ ಪಕ್ಷದಲ್ಲಿ ನನಗೊಬ್ಬನಿಗೇ ವಿಶೇಷ ಅವಕಾಶ, ಸೌಲಭ್ಯ ಇಲ್ಲ, ಪಕ್ಷದಲ್ಲಿ ಯಾರೇ ಆಗಲಿ ಎಲ್ಲರೂ ಹೈಕಮಾಂಡ್ನ ಅನುಮತಿ ಪಡೆದು ಸ್ಪರ್ಧೆ ಮಾಡಬೇಕು. ಅದರಂತೆ ನನಗೂ ಹೈಕಮಾಂಡ್ ಅನುಮತಿ ನೀಡಿದರೆ ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ" ಎಂದು ಹೇಳಿದ್ದರು.
ಸಿದ್ದರಾಮಯ್ಯ ಸದ್ಯ ಬಾಗಲಕೋಟೆಯ ಬಾದಾಮಿ ಕ್ಷೇತ್ರದ ಶಾಸಕರು. ಆದರೆ ಕ್ಷೇತ್ರ ದೂರ ಎಂಬ ಕಾರಣಕ್ಕೆ ಅವರು ಮುಂದಿನ ಚುನಾವಣೆಯಲ್ಲಿ ಬೆಂಗಳೂರು ನಗರಕ್ಕೆ ಹತ್ತಿರದ ಕ್ಷೇತ್ರ ಹುಡುಕುತ್ತಿದ್ದರು. ಸದ್ಯ ಕೋಲಾರದಿಂದ ಕಣಕ್ಕಿಳಿಯಲು ಬಯಸಿದ್ದಾರೆ.

ಕೋಲಾರದಲ್ಲಿ ಬಾಡಿಗೆ ಮನೆ
ಸಿದ್ದರಾಮಯ್ಯ ಕೋಲಾರದಲ್ಲಿ, "ಮುಂದಿನ ಚುನಾವಣೆಯಲ್ಲಿ ಇಲ್ಲಿಂದ ಸ್ಪರ್ಧೆ ಮಾಡಿ ಜಯಗಳಿಸಿದರೆ ಪ್ರತೀ ವಾರ ಕೋಲಾರಕ್ಕೆ ಬರುತ್ತೇನೆ. ನಾನು ಬೆಳೆಸಿಕೊಂಡು ಬಂದಿರುವ ಸಂಪ್ರದಾಯದಂತೆ ಯಾವ ಮುಖಂಡನನ್ನೂ ತಮ್ಮ ಜೊತೆ ಕರೆದುಕೊಂಡು ಬಂದು ನನ್ನನ್ನು ಭೇಟಿ ಮಾಡಬೇಕಾದ ಅಗತ್ಯ ಇಲ್ಲ, ಯಾವುದೇ ಸಾಮಾನ್ಯ ವ್ಯಕ್ತಿ ಬಂದು ನನ್ನನ್ನು ನೇರವಾಗಿ ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು" ಎಂದು ಹೇಳಿದ್ದರು.
ಸಿದ್ದರಾಮಯ್ಯ ಕೋಲಾರದಲ್ಲಿ ವಾಸ್ತವ್ಯ ಮಾಡಲು ಬಾಡಿಗೆ ಮನೆ ನೋಡಿದ್ದಾರೆ. ಸೋಮವಾರ ಯತೀಂದ್ರ ಸಿದ್ದರಾಮಯ್ಯ ಈ ಮನೆಯನ್ನು ವೀಕ್ಷಣೆ ಮಾಡಿದ್ದಾರೆ. ಮನೆ ಒಪ್ಪಿಗೆ ಆಗಿದೆಯೇ? ಎಂದು ಸಿದ್ದರಾಮಯ್ಯ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

ವರುಣದಿಂದಲೂ ಸ್ಪರ್ಧೆಗೆ ಬೇಡಿಕೆ
ಸಿದ್ದರಾಮಯ್ಯ ಕೋಲಾರದಲ್ಲಿ ಮಾತನಾಡಿ, "ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ಜೊತೆಗೆ ನಾನು ಸ್ಪರ್ಧಿಸಿ ಗೆದ್ದ ಕ್ಷೇತ್ರಕ್ಕೆ ವಿಶೇಷ ಕಾಳಜಿ ನೀಡಿ ಅಭಿವೃದ್ಧಿ ಮಾಡಿದ್ದೇನೆ. ಇಡೀ ರಾಜ್ಯದ ಎಲ್ಲಾ ಜನರ ನೆರವಿಗೆ ಹೋಗುವಂತಾ ಕೆಲಸಗಳನ್ನು ಹಿಂದೆಯೂ ಮಾಡಿಕೊಂಡು ಬಂದಿದ್ದೇನೆ, ಮುಂದೆಯೂ ಮಾಡಲಿದ್ದೇನೆ" ಎಂದು ಹೇಳಿದ್ದರು.
ಇದು ನನ್ನ ಕೊನೆಯ ಚುನಾವಣೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕೊನೆಯ ಚುನಾವಣೆಗೆ ವರುಣದಿಂದ ಕಣಕ್ಕಿಳಿಯಬೇಕು ಎಂದು ಅಭಿಮಾನಿಗಳು, ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ.












Click it and Unblock the Notifications