ಶಾಸಕರಿಗೆ, ಸಂಸದರಿಗೆ ಭೋಜನಕೂಟ ಆಯೋಜಿಸಿದ ಸಿದ್ದರಾಮಯ್ಯ!
ಬೆಂಗಳೂರು, ಮಾರ್ಚ್ 23: ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕಾಂಗ್ರೆಸ್ ಸದಸ್ಯರು ಬಿಗಿಪಟ್ಟನ್ನು ಮುಂದುವರೆಸಿದ್ದಾರೆ. ವಿಧಾನಸಭೆಯಲ್ಲಿ ಹೋರಾಟವನ್ನು ತೀವ್ರಗೊಳಿಸುವ ಬಗ್ಗೆ ಚರ್ಚಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶಾಸಕರು, ಸಂಸದರಿಗೆ ಭೋಜನಕೂಟವನ್ನು ಆಯೋಜಿಸಿದ್ದಾರೆ.
ಬುಧವಾರ ಮಧ್ಯಾಹ್ನ ವಿಧಾನಸೌಧದಲ್ಲಿ ಭೋಜನ ಕೂಟವನ್ನು ಆಯೋಜನೆ ಮಾಡಲಾಗಿದೆ. ಎಲ್ಲಾ ಶಾಸಕರು, ಸಂಸದರಿಗೆ ಭೋಜನಕೂಟಕ್ಕೆ ಆಹ್ವಾನ ನೀಡಲಾಗಿದೆ. ವಿಧಾನಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ಭೋಜನ ಕೂಟ ಕರೆಯಲಾಗಿದೆ.

Recommended Video
ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕಾಂಗ್ರೆಸ್ ಸದಸ್ಯರು ಹೋರಾಟವನ್ನು ನಡೆಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರರಕರಣ ದಾಖಲು ಮಾಡಬೇಕು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು. ಕೋರ್ಟ್ ಮೊರೆ ಹೋಗಿರುವ 6 ಸಚಿವರು ರಾಜೀನಾಮೆ ನೀಡಬೇಕು ಎಂಬುದು ಕಾಂಗ್ರೆಸ್ ಬೇಡಿಕೆಯಾಗಿದೆ.
ಕಾಂಗ್ರೆಸ್ ಸದಸ್ಯರ ಪ್ರತಿಭಟನೆ, ಗದ್ದಲದ ಹಿನ್ನಲೆಯಲ್ಲಿ ಸ್ಪೀಕರ್ ಮಂಗಳವಾರ ಕಲಾಪವನ್ನು ಎರಡು ಬಾರಿ ಮುಂದೂಡಿದರು. ಆದರೆ, ಮತ್ತೆ ಸದಸನ ಸಮಾವೇಶಗೊಂಡರೂ ಕಾಂಗ್ರೆಸ್ ಸದಸ್ಯರು ಹೋರಾಟವನ್ನು ಮುಂದುವರೆಸಿದರು. ಇದರಿಂದಾಗಿ ಬುಧವಾರ ಬೆಳಗ್ಗೆ 11 ಗಂಟೆಗೆ ಕಲಾಪವನ್ನು ಮುಂದೂಡಲಾಯಿತು.
ಈ ಬಾರಿ ಬಜೆಟ್ ಅಧಿವೇಶನ ನಿಗದಿಯಂತೆ ಮಾರ್ಚ್ 31ರ ತನಕ ನಡೆಯಬೇಕು. ಆದರೆ, ಕಾಂಗ್ರೆಸ್ ಸದಸ್ಯರ ಗದ್ದಲದ ಹಿನ್ನಲೆಯಲ್ಲಿ ಸರ್ಕಾರ ಅಧಿವೇಶನ ಮೊಟಕುಗೊಳಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಕರೆದಿರುವ ಭೋಜನಕೂಟದಲ್ಲಿ ಅಧಿವೇಶನ ಮೊಟಕುಗೊಂಡರೆ ಮುಂದಿನ ಕಾರ್ಯತಂತ್ರದ ಬಗ್ಗೆಯೂ ಚರ್ಚಿಸಲಾಗುತ್ತದೆ.












Click it and Unblock the Notifications