ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಮುಂದಾದ ಸಿದ್ದರಾಮಯ್ಯ
ಬೆಂಗಳೂರು, ಜುಲೈ 19: ಮಾಜಿ ಸಿಎಂ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಸೋಮವಾರ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಲಿರುವುದಾಗಿ ತಿಳಿದುಬಂದಿದೆ.
ಸೋಮವಾರ ದೆಹಲಿಗೆ ತೆರಳಿ ಮಂಗಳವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಲಿರುವುದಾಗಿ ತಿಳಿದುಬಂದಿದೆ. ಪಕ್ಷದ ಪದಾಧಿಕಾರಿಗಳ ಆಯ್ಕೆ ಹಾಗೂ ಮುಂದಿನ ರಾಜ್ಯ ವಿಧಾನಸಭೆ ಚುನಾವಣೆ ಸಂಬಂಧ ಚರ್ಚೆಗೆ ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಲು ಮಾಜಿ ಸಿಎಂ ಸಿದ್ದರಾಮಯ್ಯ ಪರವಾಗಿ ಚಿಕ್ಕಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್, ಕಂಪ್ಲಿ ಶಾಸಕ ಜೆಎನ್ ಗಣೇಶ್ ಸೇರಿದಂತೆ ಹಲವು ನಾಯಕರು ಈಚೆಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ್ದರಿಂದ ಸಿದ್ದರಾಮಯ್ಯ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.

ಕೆಲವೇ ದಿನಗಳ ಹಿಂದೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಡುವೆ ನಾಯಕತ್ವಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳ ಸುದ್ದಿ ಕೇಳಿಬಂದಿತ್ತು. ಮುಖ್ಯಮಂತ್ರಿ ಅಭ್ಯರ್ಥಿ ವಿಷಯದಲ್ಲಿ ಬಿರುಕು ಉಂಟಾಗಿದೆ ಎನ್ನಲಾಗಿತ್ತು. "ಚುನಾವಣೆಯಲ್ಲಿ ಸೋತರೂ ಮುಖ್ಯಮಂತ್ರಿ ಪಟ್ಟಕ್ಕೆ ಬಂದವರನ್ನು ಕರ್ನಾಟಕ ಕಂಡಿದೆ" ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದರು.
ಆದರೆ ಈ ವಿವಾದವನ್ನು ಅಲ್ಲಗಳೆದಿದ್ದ ಸಿದ್ದರಾಮಯ್ಯ, "ಇವೆಲ್ಲವೂ ಮಾಧ್ಯಮಸೃಷ್ಟಿ. ನಮ್ಮ ಪಕ್ಷದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೈಕಮಾಂಡ್ ಇದ್ದಾರೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ" ಎಂದು ಹೇಳಿದ್ದರು. ಈ ಬೆಳವಣಿಗೆಗಳು ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಎತ್ತಿ ತೋರಿಸಿದ್ದವು.
ಈ ಎಲ್ಲಾ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಪ್ರಾಮುಖ್ಯ ಪಡೆದುಕೊಂಡಿದೆ.












Click it and Unblock the Notifications