ದೆಹಲಿಗೆ ಸಿದ್ದರಾಮಯ್ಯ, ಗುರುವಾರ ರಾಹುಲ್ ಗಾಂಧಿ ಭೇಟಿ!
ಬೆಂಗಳೂರು, ಅಕ್ಟೋಬರ್ 11 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಗುರುವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ.
ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ, 'ನಾಳೆ ದೆಹಲಿಗೆ ತೆರಳಲಿದ್ದೇನೆ. ಪಕ್ಷದ ವಿಚಾರವಾಗಿ ವರಿಷ್ಠರ ಜೊತೆ ಚರ್ಚೆ ಮಾಡಲಿದ್ದೇವೆ' ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್, ಎಸ್.ಆರ್.ಪಾಟೀಲ್ ಅವರು ದೆಹಲಿಗೆ ತೆರಳಲಿದ್ದಾರೆ. ಎಐಸಿಸಿ ಅಧಿವೇಶನವನ್ನು ಬೆಂಗಳೂರಿನಲ್ಲಿ ನಡೆಸಲು ಚಿಂತನೆ ನಡೆಸಿದ್ದು, ಈ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಕಳೆದ ವಾರದಿಂದ ರಾಜ್ಯದಲ್ಲಿ ಸರಣಿ ಸಭೆ ನಡೆಸಿದ್ದು, ಚುನಾವಣಾ ತಯಾರಿ ಬಗ್ಗೆ ನಾಯಕರಿಗೆ ಸೂಚನೆಗಳನ್ನು ನೀಡಿದ್ದಾರೆ. ಹೈಕಮಾಂಡ್ ನಾಯಕರ ಭೇಟಿ ವೇಳೆ ವೇಣುಗೋಪಾಲ್ ಅವರು ಜೊತೆಯಲ್ಲಿ ಇರಲಿದ್ದು, ಚುನಾವಣಾ ತಯಾರಿ ಬಗ್ಗೆ ನಾಯಕರಿಗೆ ಮಾಹಿತಿ ನೀಡಲಿದ್ದಾರೆ.
ನವೆಂಬರ್ನಲ್ಲಿ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷರಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಿ ಘೋಷಣೆ ಮಾಡಲಾಗುತ್ತದೆ ಎಂಬ ಸುದ್ದಿಯೂ ಇದೆ. ಈ ಬಗ್ಗೆ ಸಹ ಹೈಕಮಾಂಡ್ ನಾಯಕರ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸುವ ಸಾಧ್ಯತೆ ಇದೆ.












Click it and Unblock the Notifications