ಸತೀಶ್ ಜಾರಕಿಹೊಳಿ ರಾಜೀನಾಮೆ, ಸಿಎಂ ಹೇಳುವುದೇನು?
ಬೆಂಗಳೂರು, ಜ. 28 : 'ಸಚಿವ ಸತೀಶ್ ಜಾರಕಿಹೊಳಿ ರಾಜೀನಾಮೆ ಪತ್ರ ತಲುಪಿದೆ. ಅವರ ರಾಜೀನಾಮೆಗೆ ಕಾರಣ ತಿಳಿದುಬಂದಿಲ್ಲ. ಈ ವಿಚಾರವಾಗಿ ಅವರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿಗೆ ಬರುವಂತೆ ಆಹ್ವಾನ ನೀಡಿರುವುದಾಗಿ ಹೇಳಿದರು. ಸಂಜೆ ಅವರು ಬೆಂಗಳೂರಿಗೆ ಆಗಮಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

'ಅಬಕಾರಿ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅವರು ನೀಡಿರುವ ರಾಜೀನಾಮೆ ಪತ್ರ ತಲುಪಿದೆ. ಅವರ ರಾಜೀನಾಮೆಗೆ ಕಾರಣ ತಿಳಿದುಬಂದಿಲ್ಲ. ಈ ವಿಚಾರವಾಗಿ ಅವರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸುತ್ತೇನೆ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ' ಎಂದು ತಿಳಿಸಿದರು. [ರಾಜೀನಾಮೆ ಬಳಿಕ ಸತೀಶ್ ಜಾರಕಿಹೊಳಿ ಹೇಳಿದ್ದೇನು?]
'ಸತೀಶ್ ಜಾರಕಿಹೊಳಿ ಅವರು ಬಹಳ ಸೂಕ್ಷ್ಮ ಮನಸ್ಸಿನ ವ್ಯಕ್ತಿ. ಎಲ್ಲವನ್ನೂ ಸೂಕ್ಷ್ಮ ಸಂವೇದನೆಯಿಂದಲೇ ನೋಡುತ್ತಾರೆ. ಖಾತೆ ಬದಲಾವಣೆ ಬಗ್ಗೆ ಮನವಿ ಮಾಡಿದ್ದರು. ಸಂಪುಟ ಪುನಾರಚನೆ ವೇಳೆ ಖಾತೆ ಬದಲಾವಣೆ ಮಾಡುವ ಬಗ್ಗೆ ಆಲೋಚಿಸುವುದಾಗಿ ಹಿಂದೆಯೇ ಅವರಿಗೆ ಭರವಸೆ ನೀಡಿದ್ದೇನೆ' ಎಂದರು. [ಜಾರಕಿಹೊಳಿ ಮನವೊಲಿಕೆ ಯತ್ನ ವಿಫಲ?]
'ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರನ್ನು ಸತೀಶ್ ಜಾರಕಿಹೊಳಿ ಅವರ ನಿವಾಸಕ್ಕೆ ನಾನು ಕಳಿಸಿಲ್ಲ ಎಂದು ಸ್ಪಷ್ಟಪಡಿಸಿದ ಸಿಎಂ ಸಿದ್ದರಾಮಯ್ಯ ಅವರು, ನಾನು ಮತ್ತು ಜಾರಕಿಹೊಳಿ ಒಟ್ಟಾಗಿ ಕೂತು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ, ನಮಗೆ ಮಧ್ಯವರ್ತಿಗಳ ಅವಶ್ಯಕತೆ ಇಲ್ಲ' ಎಂದು ಹೇಳಿದರು.
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿಎಂ ಸಿದ್ದರಾಮಯ್ಯ ಅವರಿಗೆ ಜಾರಕಿಹೊಳಿ ಅವರು ರಾಜೀನಾಮೆ ಪತ್ರವನ್ನು ಕಳುಹಿಸಿದ್ದರು. ಆದರೆ, ರಾಜೀನಾಮೆ ಇನ್ನೂ ಅಂಗೀಕಾರಗೊಂಡಿಲ್ಲ.












Click it and Unblock the Notifications