ಸಿಎಂ ಗದ್ದುಗೆ ಗುದ್ದಾಟ: 'ಶ್ರೀಘ್ರದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ'
ಬೆಂಗಳೂರು, ಜುಲೈ 07: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಬರೋಬ್ಬರಿ ಎರಡು ವರ್ಷ ಪೂರೈಸಿದೆ. ಈ ನಡುವೆ ಮುಖ್ಯಮಂತ್ರಿ ಬದಲಾವಣೆ ಕುರಿತು ಕಾಂಗ್ರೆಸ್ ಪಾಳಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಲು ಕಾಂಗ್ರೆಸ್ ಪಾಳಯದಲ್ಲಿಯೇ ಪ್ಲಾನ್ ನಡೆಯುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದು, ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಅಚ್ಚರಿ ಹೇಳಿಕೆಯನ್ನ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅತಿ ಶೀಘ್ರದಲ್ಲಿ ರಾಜೀನಾಮೆ ನೀಡುತ್ತಾರೆ. ಸಿದ್ದರಾಮಯ್ಯನವರನ್ನು ರಾಷ್ಟ್ರಮಟ್ಟದಲ್ಲಿ ಒಬಿಸಿ ಮಂಡಳಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ ಎಂದರೆ ಸಿದ್ದರಾಮಯ್ಯನವರ ಮುಖ್ಯಮಂತ್ರಿ ಸ್ಥಾನಪಲ್ಲಟ ಆಗುವುದು ನಿಶ್ಚಿತವಾಗಿದೆ. ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಬೆಂಗಳೂರಿಗೆ ಬಂದು ಶಾಸಕರ ಅಭಿಪ್ರಾಯ ಪಡೆದುಕೊಳ್ಳುತ್ತೇನೆ ಎಂದು ಹೇಳಿ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯಲು ಒಂದು ಭೂಮಿಕೆಯನ್ನು ಈಗಾಗಲೇ ಸಜ್ಜು ಮಾಡಿದ್ದಾರೆ.

ಸಿದ್ದರಾಮಯ್ಯ ಅವರನ್ನು ಅಖಿಲ ಭಾರತ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಅಂದರೆ ಸಿದ್ದರಾಮಯ್ಯ ನವರ ರಾಜೀನಾಮೆಯನ್ನು ಪಡೆದುಕೊಂಡು ದೆಹಲಿಗೆ ವರ್ಗಾವಣೆ ಮಾಡುವುದಕ್ಕೆ ಈಗಾಗಲೇ ಆದೇಶ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪೈಪೋಟಿ ನಡೆಯುತ್ತಿದೆ. ಇದರ ಪರಿಣಾಮವೇ ರಾಮನಗರದ ಶಾಸಕ ಡಿ.ಕೆ. ಶಿವಕುಮಾರ್ ಜೊತೆ 100 ಶಾಸಕರ ಬೆಂಬಲವಿದೆ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರಿಗೆ ಸಿದ್ದರಾಮಯ್ಯನವರ ಮೇಲೆ ವಿಶ್ವಾಸ ಹೋಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಬಿ.ಆರ್ ಪಾಟೀಲ್ ಅವರು ಮಾತ್ರ ಒಂದು ಹೆಜ್ಜೆ ಮುಂದೆ ಹೋಗಿ ಸಿದ್ದರಾಮಯ್ಯ ಅವರು ಲಾಟರಿ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದಾರೆ ಎಂದರು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ರಾಜ್ಯದಲ್ಲಿನ ಹಣಕಾಸು ಪರಿಸ್ಥಿತಿ ಬಗ್ಗೆ ವಾಸ್ತವಿಕ ಸತ್ಯವನ್ನು ತೆರದಿಟ್ಟಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ರಾಯರೆಡ್ಡಿ ಅವರಿಗೆ ಹೆಚ್ಚಿನ ಮಾಹಿತಿ ಇದೆ. ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ವೇತನವನ್ನು ನೀಡಲು ಆಗುತ್ತಿಲ್ಲ. ಸಿದ್ದರಾಮಯ್ಯ ಅವರು ರಸ್ತೆಗಳು ಹಾಗೂ ಅಭಿವೃದ್ಧಿ ಕೆಲಸಗಳು ಆಗಬೇಕು ಎಂದರೆ ಗ್ಯಾರಂಟಿಗಳನ್ನು ಬಿಡಿ ಎಂದು ತಮ್ಮ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರ ಮುಖೇನ ರಾಜ್ಯದ ಜನರಿಗೆ ಹೇಳಿಸುತ್ತಾರೆ ಎಂದು ವಿಜಯೇಂದ್ರ ಅವರು ಆರೋಪಿಸಿದರು.
2 ವರ್ಷದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಾಂಸ್ಕøತಿಕ ನಗರ ಮೈಸೂರು ಜಿಲ್ಲೆಗೆ ಏನು ಕೊಡುಗೆಯನ್ನು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಅವರ ಸರ್ಕಾರ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗೆ ಎಷ್ಟು ಕೋಟಿ ಅನುದಾನ ನೀಡಿದ್ದಾರೆಂದು ಅವರು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು. ಸಿದ್ದಾರಮಯ್ಯ ನವರ ನೇತೃತ್ವದಲ್ಲಿ ಗ್ಯಾರಂಟಿಗಳನ್ನು ಜಪ ಮಾಡಿಕೊಂಡು ಮತ್ತು ಬಿಜೆಪಿ ಸರ್ಕಾರದ ಮೇಲೆ ಅಪಪ್ರಚಾರಗಳನ್ನು ಮಾಡಿಕೊಂಡು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಒಂದು ರೀತಿ ರಾಜ್ಯದಲ್ಲಿರುವಂತ ರೈತರು, ಬಡವರು ಮತ್ತು ಜನ ಸಾಮಾನ್ಯರ ಜೇಬಿಗೆ ಕತ್ತರಿಯನ್ನು ಹಾಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.












Click it and Unblock the Notifications