ಸಂಪುಟ ವಿಸ್ತರಣೆ; ಶಾಸಕರ ಸ್ಥಿತಿ ಬಗ್ಗೆ ಸಿದ್ದರಾಮಯ್ಯ ಟ್ವೀಟ್
ಬೆಂಗಳೂರು, ಜನವರಿ 26: "ಅತ್ತ ಸಚಿವ ಸ್ಥಾನವೂ ಸಿಗದೆ, ಇತ್ತ ಶಾಸಕರೂ ಅಲ್ಲದೆ ಅತಂತ್ರ ಸ್ಥಿತಿಯಲ್ಲಿರುವವರಿಗೆ ತಕ್ಕ ಶಿಕ್ಷೆಯಾಗುತ್ತಿದೆ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅನರ್ಹ ಶಾಸಕರ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಭಾನುವಾರ ಸರಣಿ ಟ್ವೀಟ್ಗಳನ್ನು ಸಿದ್ದರಾಮಯ್ಯ ಮಾಡಿದ್ದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಶಾಸಕರ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಸಿದ್ದರಾಮಯ್ಯ ಶಾಸಕರ ಕಾಲೆಳೆದಿದ್ದಾರೆ.
"ಪಕ್ಷಕ್ಕೆ ಹಾಗೂ ಜನರ ನಂಬಿಕೆಗೆ ದ್ರೋಹ ಮಾಡಿ, ಬಿಜೆಪಿ ಸೇರಿ ಚುನಾವಣೆಯಲ್ಲಿ ಸೋತು, ಅತ್ತ ಸಚಿವ ಸ್ಥಾನವೂ ಸಿಗದೆ, ಇತ್ತ ಶಾಸಕರೂ ಅಲ್ಲದೆ ಅತಂತ್ರ ಸ್ಥಿತಿಯಲ್ಲಿರುವವರಿಗೆ ತಕ್ಕ ಶಿಕ್ಷೆಯಾಗುತ್ತಿದೆ. ಇದು ನ್ಯಾಯಕ್ಕೆ ಸಂದ ಜಯ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇದ್ದಾಗ 17 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಉಪ ಚುನಾವಣೆ ನಡೆದಿತ್ತು. ಎಚ್. ವಿಶ್ವನಾಥ್, ಎಂಟಿಬಿ ನಾಗರಾಜ್ ಉಪಚುನಾವಣೆಯಲ್ಲಿ ಸೋತಿದ್ದಾರೆ.

ಉಪ ಚುನಾವಣೆ ಸೋಲು
"ಅತ್ತ ಸಚಿವ ಸ್ಥಾನವೂ ಸಿಗದೆ, ಇತ್ತ ಶಾಸಕರೂ ಅಲ್ಲದೆ ಅತಂತ್ರ ಸ್ಥಿತಿಯಲ್ಲಿರುವವರಿಗೆ ತಕ್ಕ ಶಿಕ್ಷೆಯಾಗುತ್ತಿದೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಉಪ ಚುನಾವಣೆಯಲ್ಲಿ ಹೊಸಕೋಟೆಯಲ್ಲಿ ಸೋತ ಎಂಟಿಬಿ ನಾಗರಾಜ್, ಹುಣಸೂರಿನಲ್ಲಿ ಸೋತ ಎಚ್. ವಿಶ್ವನಾಥ್ ಕಾಲೆಳೆದಿದ್ದಾರೆ.

ಅತ್ತ ಸಚಿವ ಸ್ಥಾನವೂ ಸಿಗಲಿಲ್ಲ
ಬಿಜೆಪಿ ಸೇರಿ ಚುನಾವಣೆಯಲ್ಲಿ ಗೆದ್ದರೂ ಸಚಿವ ಸ್ಥಾನವೂ ಸಿಗಲಿಲ್ಲ ಎಂದು ಅನರ್ಹ ಶಾಸಕರನ್ನು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. 15 ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಗೆದ್ದಿದೆ. ಆದರೆ, ಯಾವ ಶಾಸಕರಿಗೂ ಇನ್ನೂ ಸಚಿವ ಸ್ಥಾನ ಸಿಕ್ಕಿಲ್ಲ.

ಎಸ್. ಟಿ. ಸೋಮಶೇಖರ್ ಹೇಳಿಕೆ
ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್, "ಮುಖ್ಯಮಂತ್ರಿ ಯಡಿಯೂರಪ್ಪ ಸೋತವರನ್ನು ಮಂತ್ರಿ ಮಾಡಲು ಸಾಧ್ಯವಿಲ್ಲ ಎಂದು ಹಿಂದೆಯೇ ಹೇಳಿದ್ದು, ಅದರಂತೆ ಮಾಡಲಿದ್ದಾರೆ" ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಗ್ಗೆ ಈಗ ಅನರ್ಹ ಶಾಸಕರ ನಡುವೆಯೇ ಚರ್ಚೆ ನಡೆಯುತ್ತಿದೆ.

ಜನವರಿ 29ಕ್ಕೆ ವಿಸ್ತರಣೆ
ಬಿಜೆಪಿ ಹೈಕಮಾಂಡ್ ಜನವರಿ 29ರಂದು ಸಂಪುಟ ವಿಸ್ತರಣೆ ಮಾಡಲು ಯಡಿಯೂರಪ್ಪಗೆ ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಸಂಪುಟ ಸೇರುವ ಶಾಸಕರು ಯಾರು? ಎಂಬುದು ನಿಗೂಢವಾಗಿದೆ. 6 ರಿಂದ 10 ಶಾಸಕರು ಸಂಪುಟ ಸೇರುವ ನಿರೀಕ್ಷೆ ಇದೆ.












Click it and Unblock the Notifications