ಮಂಗಳೂರು ಗಲಭೆ ವಿಡಿಯೋ; ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಡಿಸೆಂಬರ್ 24 : "ಮಂಗಳೂರು ಗಲಭೆಯ ಆಯ್ದ ವಿಡಿಯೋಗಳನ್ನು ಪೊಲೀಸರು ಸೋರಿಕೆ ಮಾಡಿ, ತನಿಖೆಯ ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟರ್ ಮೂಲಕ ಆರೋಪ ಮಾಡಿದ್ದಾರೆ.
ಮಂಗಳವಾರ ಮಂಗಳೂರು ಪೊಲೀಸರು ಡಿಸೆಂಬರ್ 19ರಂದು ನಡೆದ ಗಲಭೆಯ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ವಿಡಿಯೋ ಬಿಡುಗಡೆ ವಿಚಾರ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್, ಜೆಡಿಎಸ್ ನಾಯಕರು ಈ ಕುರಿತು ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿಡಿಯೋವನ್ನು ಬಿಡುಗಡೆ ಮಾಡಿರುವ ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಗಲಭೆ ವೇಳೆ ಪೊಲೀಸರು ಗೋಲಿಬಾರ್ ನಡೆಸಿದ್ದು, ಇಬ್ಬರು ಮೃತಪಟ್ಟಿದ್ದರು.

ಮಂಗಳೂರು ಗೋಲಿಬಾರ್ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶ ನೀಡಿದೆ. ಆದರೆ, ಸಿದ್ದರಾಮಯ್ಯ ನ್ಯಾಯಾಂಗ ತನಿಖೆಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ.
ನ್ಯಾಯಾಂಗ ತನಿಖೆ ಮಾಡಿ : "ಮಂಗಳೂರು ಗಲಭೆಯ ಆಯ್ದ ವಿಡಿಯೋಗಳನ್ನು ಪೊಲೀಸರು ಸೋರಿಕೆ ಮಾಡಿ, ತನಿಖೆಯ ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ತಮ್ಮಲ್ಲಿರುವ ಸಾಕ್ಷ್ಯಗಳನ್ನು ಮೊದಲು ತನಿಖಾಧಿಕಾರಿಗಳಿಗೆ ಒಪ್ಪಿಸಬೇಕಿತ್ತು. ಈ ಕಾರಣಕ್ಕಾಗಿಯೇ ಸಿಐಡಿ ತನಿಖೆ ಒಂದು ನಾಟಕ, ಅದರ ಬದಲಿಗೆ ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯಿಸಿದ್ದು" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ತನಿಖೆ ನಡೆಸಿ ಅವರನ್ನು ಶಿಕ್ಷೆಗೊಳಪಡಿಸಬೇಕು : "ಮಂಗಳೂರು ಗಲಭೆಯ ತಪ್ಪಿತಸ್ಥರು ಯಾರೇ ಇರಲಿ, ತನಿಖೆ ನಡೆಸಿ ಅವರನ್ನು ಶಿಕ್ಷೆಗೊಳಪಡಿಸಬೇಕು. ಆದರೆ, ಆಯ್ದ ವಿಡಿಯೋಗಳನ್ನು ಲೀಕ್ ಮಾಡಿ ಅದರ ಮೂಲಕ ಒಂದು ಧರ್ಮದ ಜನರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಸಲ್ಲದು. ಶಾಂತಿ -ಸೌಹಾರ್ದತೆ ಕಾಪಾಡಬೇಕಾಗಿರುವ ಪೊಲೀಸರೇ ಸೌಹಾರ್ದ ಕೆಡಿಸುವ ಕೆಲಸ ಮಾಡುತ್ತಿರುವುದು ಸರಿ ಅಲ್ಲ" ಎಂದು ಸಿದ್ದರಾಮಯ್ಯ ಟ್ವೀಟ್ನಲ್ಲಿ ಹೇಳಿದ್ದಾರೆ.
ಮಂಗಳೂರು ಗಲಭೆಯ ಆಯ್ದ ವಿಡಿಯೋಗಳನ್ನು ಪೊಲೀಸರು ಸೋರಿಕೆ ಮಾಡಿ,
— Siddaramaiah (@siddaramaiah) December 24, 2019
ತನಿಖೆಯ ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ.
ತಮ್ಮಲ್ಲಿರುವ ಸಾಕ್ಷ್ಯಗಳನ್ನು ಮೊದಲು ತನಿಖಾಧಿಕಾರಿಗಳಿಗೆ ಒಪ್ಪಿಸಬೇಕಿತ್ತು.
ಈ ಕಾರಣಕ್ಕಾಗಿಯೇ ಸಿಐಡಿ ತನಿಖೆ ಒಂದು ನಾಟಕ,
ಅದರ ಬದಲಿಗೆ
ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯಿಸಿದ್ದು.
1/2












Click it and Unblock the Notifications