ನಳಿನ್ ಕುಮಾರ್ ಮಾಡಿದ ಜೋಕ್ ಹೇಳಿದ ಸಿದ್ದರಾಮಯ್ಯ!
Recommended Video
ಬೆಂಗಳೂರು, ನವೆಂಬರ್ 04 : ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಟೀಕಾಪ್ರಹಾರ ನಡೆಸಿದ್ದಾರೆ. ಆಪರೇಷನ್ ಕಮಲದ ಆಡಿಯೋ ವಿಚಾರದಲ್ಲಿ ಟೀಕೆ ನಡೆಸಲಾಗಿದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬಿಜೆಪಿ ಸಭೆಯಲ್ಲಿ ಮಾತನಾಡಿದ ಆಡಿಯೋ ವೈರಲ್ ಆಗಿದೆ. ಈ ಆಡಿಯೋ ರಿಲೀಸ್ ಮಾಡಿಸಿದ್ದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎಂದು ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದರು.
ಟ್ವೀಟ್ ಮೂಲಕ ಸಿದ್ದರಾಮಯ್ಯ ಈ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ. "ಬಿಜೆಪಿ ಕೋರ್ ಕಮಿಟಿ ಸಭೆಗೆ ವಿರೋಧ ಪಕ್ಷದ ನಾಯಕನನ್ನು ಆಹ್ವಾನಿಸಿದ್ದೀರಾ?" ಎಂದು ಪ್ರಶ್ನೆ ಮಾಡಿದ್ದಾರೆ.
"ಮುಖ್ಯಮಂತ್ರಿ @BSYBJP ಆಡಿಯೋ ನನ್ನಿಂದ ರಿಲೀಸ್ ಆಗಿದೆಯೆಂದು ಬಿಜೆಪಿ ರಾಜ್ಯಾಧ್ಯಕ್ಷ
@nalinkateel ಜೋಕ್ ಮಾಡಿದ್ದಾರೆ. ಬಿಜೆಪಿ ಕೋರ್ ಕಮಿಟಿ ಸಭೆಗೆ ವಿರೋಧ ಪಕ್ಷದ ನಾಯಕನನ್ನು ಆಹ್ವಾನಿಸಿದ್ದೀರಾ?. ಜೋಕ್ ಮಾಡೋರನ್ನ '......' ಎನ್ನುತ್ತಾರೆ ಗೊತ್ತಾ?" ಎಂದು ಪ್ರಶ್ನೆ ಮಾಡಿದ್ದಾರೆ. ಬಿಜೆಪಿಯ ಹಲವು ನಾಯಕರು ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ.

ಯಡಿಯೂರಪ್ಪ ಪ್ರತಿಕ್ರಿಯೆ
ಆಡಿಯೋ ವೈರಲ್ ಆಗುತ್ತಿದ್ದಂತೆ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. "ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಅಮಿತ್ ಶಾ ಸೂಚನೆ ಮೇರೆಗೆ ಶಾಸಕರು ರಾಜೀನಾಮೆ ನೀಡಿದ್ದು, ಈ ವಿಚಾರವನ್ನು ಕೇಂದ್ರ ನಾಯಕರು ನೋಡಿಕೊಂಡಿದ್ದರು ಎಂದು ನಾನು ಹೇಳಿಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ರಹ್ಲಾದ್ ಜೋಶಿ ಹೇಳಿಕೆ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಡಿಯೋ ಬಗ್ಗೆ ಮಾತನಾಡಿದ್ದಾರೆ. "ಹುಬ್ಬಳ್ಳಿಯಲ್ಲಿ ಕೋರ್ ಕಮಿಟಿ ಸಭೆ ನಡದೇ ಇಲ್ಲ. ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಭೆಯಷ್ಟೇ ನಡೆದಿದೆ" ಎಂದು ಸ್ಪಷ್ಟಪಡಿಸಿದರು.

ವೈರಲ್ ಆಗಿದ್ದು ದುರಾದೃಷ್ಟ
ಮೈಸೂರಿನಲ್ಲಿ ಮಾತನಾಡಿರುವ ಸಚಿವ ವಿ. ಸೋಮಣ್ಣ, "ಬಿಜೆಪಿಯ ಆಂತರಿಕ ಸಭೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿಕೊಂಡ ಅಂತರಾಳದ ನೋವಿನ ಮಾತುಗಳು ಆಡಿಯೋ ಸ್ವರೂಪದಲ್ಲಿ ವೈರಲ್ ಆಗಿದ್ದು ದುರಾದೃಷ್ಟ" ಎಂದು ಹೇಳಿದರು.

ಒತ್ತಾಯ ಹಾಸ್ಯಾಸ್ಪದ
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, "ನಕಲಿ ಧ್ವನಿ ಸುರುಳಿ ಸೃಷ್ಟಿಸಿ ಜನತೆಯಲ್ಲಿ ಗೊಂದಲ ಮೂಡಿಸುವುದು ಕಾಂಗ್ರೆಸ್ಗೆ ಕರಗತವಾಗಿದೆ. ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸುವುದು ಹಾಸ್ಯಾಸ್ಪದ" ಎಂದರು.











Click it and Unblock the Notifications