ಪರೀಕ್ಷೆ ನಡೆಸದೇ ಕಾನೂನು ವಿದ್ಯಾರ್ಥಿಗಳ ಹಿತ ಕಾಪಾಡಿ!
ಬೆಂಗಳೂರು, ಆ. 23: ರಾಜ್ಯದಲ್ಲಿ ಕೊರೊನಾ ವೈರಸ್ ಉಲ್ಬಣವಾಗುತ್ತಿರುವ ಈ ಸಂದರ್ಭದಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ನಿರ್ಧಾರದಿಂದ ಸರ್ಕಾರ ಹಿಂದಕ್ಕೆ ಸರಿಯಬೇಕು. ಲಾಕ್ಡೌನ್ನಿಂದಾಗಿ ಅವರಿಗೆ ಸರಿಯಾಗಿ ಕ್ಲಾಸ್ಗಳು ನಡೆದಿಲ್ಲ. ಜೊತೆಗೆ ಅರ್ಧದಷ್ಟು ಪಠ್ಯಕ್ರಮವನ್ನೂ ಈವರೆಗೆ ಮುಗಿಸಿಲ್ಲ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ತೀರ್ಮಾನ ಮಾಡಿರುವುದು ಸರಿಯಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
Recommended Video
ಕೊರೊನಾ ವೈರಸ್ ಸೋಂಕಿನಿಂದಾಗಿ ಬೋಧನಾ ತರಗತಿಗಳು ನಡೆದಿಲ್ಲ. ಹೀಗಾಗಿ ಅರ್ಧದಷ್ಟೂ ಪಠ್ಯಕ್ರಮವೇ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ರಾಜ್ಯ ಕಾನೂನು ವಿಶ್ವವಿದ್ಯಾಲಯ ಕೈಬಿಟ್ಟು ವಿದ್ಯಾರ್ಥಿಗಳ ಹಿತ ಕಾಯಬೇಕು. ಯುಜಿಸಿ ಕೂಡ ಸ್ಥಳೀಯ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಪರೀಕ್ಷೆಯ ನಿರ್ಧಾರ ಕೈಗೊಳ್ಳುವಂತೆ ತಿಳಿಸಿದೆ.

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಉಲ್ಭಣಿಸುತ್ತಿರುವಾಗ ರಾಜ್ಯ ಕಾನೂನು ವಿಶ್ವವಿದ್ಯಾಲಯ ಪ್ರತಿಷ್ಠೆಗೆ ಅಂಟಿಕೊಳ್ಳದೆ ಸೆಮಿಸ್ಟರ್ ಪರೀಕ್ಷೆ ಕೈಬಿಡುವುದು ಒಳಿತು. ಕೊರೊನಾ ಸೋಂಕಿನಿಂದಾಗಿ ದೂರದ ಸ್ಥಳಗಳಿಗೆ ಪ್ರಯಾಣಿಸುವುದು ಸೂಕ್ತವಲ್ಲದ ಕಾರಣ ಕಾನೂನು ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ಅವರಿಗೆ ಅನುಕೂಲಕರವಾದ ಪರೀಕ್ಷಾ ಕೇಂದ್ರಗಳಲ್ಲಿಯೇ ಪರೀಕ್ಷೆಗೆ ಹಾಜರಾಗಲು ಕಾನೂನು ವಿಶ್ವವಿದ್ಯಾಲಯ ಅವಕಾಶ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.












Click it and Unblock the Notifications