ಶಾಸಕರ ಜೊತೆ ಮಹತ್ವದ ಸಭೆ ನಡೆಸಿದ ಸಿದ್ದರಾಮಯ್ಯ
ಬೆಂಗಳೂರು, ಜುಲೈ 14 : ಹೊಸಕೋಟೆ ಶಾಸಕ ಎಂ. ಟಿ. ಬಿ. ನಾಗರಾಜ್ ಕಾಂಗ್ರೆಸ್ಗೆ ಕೈಕೊಟ್ಟು ಮುಂಬೈಗೆ ತೆರಳಿದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶಾಸಕರ ಜೊತೆ ಮಹತ್ವದ ಸಭೆ ನಡೆಸಿದರು.
ಭಾನುವಾರ ಬೆಳಗ್ಗೆ ಸಿದ್ದರಾಮಯ್ಯ ಯಶವಂತಪುರದಲ್ಲಿರುವ ತಾಜ್ ವಿವಾಂತ ಹೋಟೆಲ್ಗೆ ಭೇಟಿ ನೀಡಿದರು. ಕಾಂಗ್ರೆಸ್ನ 62 ಶಾಸಕರು ಶುಕ್ರವಾರ ಸಂಜೆಯಿಂದ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಶಾಸಕರ ಜೊತೆ ಸಭೆ ನಡೆಸಿದ ಸಿದ್ದರಾಮಯ್ಯ ಅವರು ರಾಜಕೀಯ ಬೆಳವಣಿಗೆ ಬಗ್ಗೆ ಸಮಾಲೋಚನೆ ನಡೆಸಿದರು. ವಿಶ್ವಾಸಮತಯಾಚನೆ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಗ್ಗೆ 9 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹೊಸಕೋಟೆ ಶಾಸಕ ಎಂ. ಟಿ. ಬಿ. ನಾಗರಾಜ್ ಮನವೊಲಿಕೆ ಮಾಡಲಾಗಿತ್ತು. ರಾಜೀನಾಮೆ ವಾಪಸ್ ಪಡೆಯುವುದಾಗಿ ಹೇಳಿದ್ದ ಅವರು, ಭಾನುವಾರ ಬೆಳಗ್ಗೆ ಮುಂಬೈಗೆ ಹಾರಿದ್ದು, ಮೈತ್ರಿ ಪಕ್ಷದಲ್ಲಿ ಆತಂಕ ಎದುರಾಗಿದೆ.
ಸದನದಲ್ಲಿ ವಿಶ್ವಾಸಮತಯಾಚನೆ ಮಾಡುವುದಾಗಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಆದರೆ, ರಾಜೀನಾಮೆ ನೀಡಿರುವ ಶಾಸಕರ ಮನವೊಲಿಕೆ ಕಾರ್ಯ ಫಲಕೊಟ್ಟಿಲ್ಲ.
ಯಾವ ಶಾಸಕರು ಎಲ್ಲಿದ್ದಾರೆ? : ವಿಶ್ವಾಸಮತಯಾಚನೆ ಹಿನ್ನಲೆಯಲ್ಲಿ ಮೂರು ಪಕ್ಷಗಳ ಶಾಸಕರು ರೆಸಾರ್ಟ್ ಸೇರಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಮುಂಬೈನಲ್ಲಿದ್ದಾರೆ.
ಜೆಡಿಎಸ್ ಪಕ್ಷದ ಶಾಸಕರು ದೇವನಹಳ್ಳಿ ಬಳಿಯ ರೆಸಾರ್ಟ್ನಲ್ಲಿದ್ದಾರೆ. ಕಾಂಗ್ರೆಸ್ ಶಾಸಕರು ಯಶವಂತಪುರದ ತಾಜ್ ವಿವಾಂತ ಹೋಟೆಲ್ನಲ್ಲಿದ್ದಾರೆ. ಬಿಜೆಪಿ ಶಾಸಕರು ರಾಜಾನಕುಂಟೆ ಬಳಿಯ ರಮಾಡ ಹೋಟೆಲ್ನಲ್ಲಿದ್ದಾರೆ.












Click it and Unblock the Notifications