Karnataka CM: ಸಿಎಂ ಕುರ್ಚಿಗಾಗಿ ಸಿದ್ದು vs ಡಿಕೆಶಿ ಹಗ್ಗಜಗ್ಗಾಟ; ಸಿಎಂ ರೇಸ್ನಲ್ಲಿ ಮತ್ತಿಬ್ಬರ ಹೆಸರು ಚಾಲ್ತಿಗೆ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಮುಖ್ಯಮಂತ್ರಿ ಆಯ್ಕೆಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಭಾನುವಾರ, ಮೇ 14ರ ರಾತ್ರಿ ಮುಖ್ಯಮಂತ್ರಿ ಹುದ್ದೆಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಕುರಿತು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ವಿಫಲವಾಗಿದ್ದು, ಈ ವಿಚಾರವನ್ನು ಹೈಕಮಾಂಡ್ ಬಗೆಹರಿಸಲಿ ಎಂಬ ನಿರ್ಣಯ ಮಾತ್ರ ಕೈಗೊಳ್ಳಲಾಯಿತು. ಸಿಎಂ ಕುರ್ಚಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಪಟ್ಟು ಮುಂದುವರೆಸಿದ್ದಾರೆ.

ಸಿಎಂ ಆಯ್ಕೆಯ ಹೊಣೆಯನ್ನು ಹೈಕಮಾಂಡ್ಗೆ ವಹಿಸಿದ ಬೆನ್ನಲ್ಲೇ ಎಲ್ಲರ ಕಣ್ಣು ಇದೀಗ ದೆಹಲಿಯತ್ತ ನೆಟ್ಟಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಪ್ರಮುಖರು ಕರ್ನಾಟಕದ ಮುಂದಿನ ಸಿಎಂ ಯಾರು ಎಂಬುದನ್ನು ನಿರ್ಧರಿಸಲಿದ್ದಾರೆ.
ಸಿಎಂ ರೇಸ್ನಲ್ಲಿ ಮುಂಚೂಣಿಯಲ್ಲಿರುವ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಒಂದೆರಡು ದಿನಗಳಲ್ಲಿ ತೆರೆ ಬೀಳಲಿದೆ. ಈಗಾಗಲೇ ಸಿದ್ದರಾಮಯ್ಯ ದೆಹಲಿ ತಲುಪಿದ್ದು, ಕೆಲವೇ ಕ್ಷಣಗಳಲ್ಲಿ ಡಿ.ಕೆ. ಶಿವಕುಮಾರ್ ಕೂಡ ದೆಹಲಿಗೆ ಹಾರಲಿದ್ದಾರೆ.
ಮತ್ತೆ ದಲಿತ ಸಿಎಂ ವಿಚಾರ ಮುನ್ನೆಲೆಗೆ
ಇದರ ನಡುವೆಯೇ ಸಿಎಂ ರೇಸ್ನಲ್ಲಿ ಮತ್ತೆರಡು ಹೆಸರು ಚಾಲ್ತಿಗೆ ಬಂದಿವೆ. ಕೊರಟಗೆರೆ ಶಾಸಕ ಹಾಗೂ ಮಾಜಿ ಡಿಸಿಎಂ ಜಿ. ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ದಲಿತ ಸಂಘಟನೆಗಳು ಮುಖಂಡರು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಬಹುಮತ ಪಡೆಯುತ್ತಿದ್ದಂತೆಯೇ ದಲಿತ ಸಿಎಂ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, 2013ರಲ್ಲಿ ಅನ್ಯಾಯಕ್ಕೆ ಒಳಗಾದ ದಲಿತ ಸಮುದಾಯದ ಜಿ. ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಪ್ರತಿಭಟನೆಗಳು ಆರಂಭವಾಗಿವೆ.
ನಾನು ಸಿಎಂ ಆಕಾಂಕ್ಷಿ ಎಂದ ಲಿಂಗಾಯತ ನಾಯಕ
ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಿಗಿಪಟ್ಟಿನ ನಡುವೆಯೇ ಲಿಂಗಾಯತ ಕೊಟಾದಲ್ಲಿ ತಾನು ಸಿಎಂ ಆಕಾಂಕ್ಷಿ ಎಂದು ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ಸಿಎಂ ಯಾರಗಬೇಕು ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಾಯಕರು ನಿರ್ಧರಿಸಲಿದ್ದಾರೆ. ಶಾಸಕರ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಳ್ಳಲಿದ್ದು, ಹೆಚ್ಚು ಶಾಸಕರ ಬೆಂಬಲ ಇದ್ದವರು ಸಿಎಂ ಆಗುತ್ತಾರೆ ಎಂದು ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಇನ್ನು ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಮ್ಮ ಬಳಿ 135 ಶಾಸಕರಿದ್ದಾರೆ. ನನ್ನನ್ನು ಸೇರಿದಂತೆ ಹೈಕಮಾಂಡ್ ಪಾದಕ್ಕೆ ಹಾಕಿದ್ದೇವೆ. ವರಿಷ್ಠರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡೋಣ ಎಂದು ಹೇಳಿದ್ದಾರೆ.
ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್ ವಾದ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ನನ್ನ ಶ್ರಮ ಎಷ್ಟಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಕೆಪಿಸಿಸಿ ಅಧ್ಯಕ್ಷರನ್ನು ಮುಖ್ಯಮಂತ್ರಿ ಮಾಡುವ ಪದ್ಧತಿ ಕಾಂಗ್ರೆಸ್ನಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಅದರ ಪ್ರಕಾರ ನಾನೇ ಮುಖ್ಯಮಂತ್ರಿಯಾಗಬೇಕು ಎಂದು ಡಿ.ಕೆ. ಶಿವಕುಮಾರ್ ಪಟ್ಟು ಹಿಡಿದಿದ್ದಾರೆ.
ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದ್ದಾಗ ಎಲ್ಲರೂ ಕೈಚೆಲ್ಲಿ ಕೂತರು. ಆಗ ನಾನು ಪಕ್ಷದ ನೇತೃತ್ವ ವಹಿಸಿಕೊಂಡು ಬಲಪಡಿಸಿದ್ದೇನೆ. ಪಕ್ಷವನ್ನು ಪುನಃ ಸಂಘಟನೆ ಮಾಡಿದ್ದೇನೆ. ಅದರ ಫಲವಾಗಿ ಇಂದು ಪಕ್ಷ ಬಹುಮತ ಗಳಿಸಿದೆ. ಭಾರತ್ ಜೋಡೋ, ಮೇಕೆದಾಟು ಪಾದಯಾತ್ರೆಯಂತಹ ಹಲವು ಕಾರ್ಯಕ್ರಮಗಳಿಗೆ ನನ್ನ ಸ್ವಂತ ಹಣ ಖರ್ಚು ಮಾಡಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಹೇಳುತ್ತಿದ್ದಾರೆ.
ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಪ್ರತಿವಾದ
ಒಂದು ಕಡೆ ಶ್ರಮಕ್ಕೆ ತಕ್ಕ ಪ್ರತಿಫಲ ಕೇಳುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಪಟ್ಟು ಹಿಡಿದರೆ, ಕಾಂಗ್ರೆಸ್ ಗೆಲುವಿಗೆ ಒಬ್ಬರ ಶ್ರಮ ಅಷ್ಟೇ ಇಲ್ಲ ಎಂದು ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಬಿಗಿಪಟ್ಟು ಹಿಡಿದಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕೇವಲ ಒಬ್ಬ ವ್ಯಕ್ತಿ ಮಾತ್ರ ಶ್ರಮಪಟ್ಟಿಲ್ಲ. ಸಾಮೂಹಿಕ ನಾಯಕತ್ವ ಶ್ರಮದ ಫಲವಾಗಿ ಕಾಂಗ್ರೆಸ್ ಗೆದ್ದಿದೆ. ಡಿ.ಕೆ. ಶಿವಕುಮಾರ್ ಒಬ್ಬರೇ ಪ್ರಚಾರ ಮಾಡಬಹುದಿತ್ತು. ನಾನೇಕೆ ಪ್ರಚಾರದಲ್ಲಿ ತೊಡಗಬೇಕಿತ್ತಲ್ಲವೇ?. ನಾನು ಸಿಎಂ ಆಗಿದ್ದಾಗ ಮಾಡಿದ ಜನಪರ ಕೆಲಸಗಳು ಕಾಂಗ್ರೆಸ್ ಗೆಲ್ಲಿಸಿವೆ. ನನ್ನ ವರ್ಚಸ್ಸು ಅಹಿಂದ ಸೇರಿದಂತೆ ಎಲ್ಲ ಜನರು ಕಾಂಗ್ರೆಸ್ಗೆ ಮತ ಹಾಕುವಂತೆ ಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications