SCSP, TSP ಅನುದಾನ ಖರ್ಚು ಮಾಡದಿದ್ರೆ ಕ್ರಮ- ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ವಾರ್ನಿಂಗ್
ಬೆಂಗಳೂರು ಜುಲೈ 06 : ಎಸ್ ಸಿ ಎಸ್ ಪಿ ಮತ್ತು ಟಿಎಸ್ ಪಿ ಅನುದಾನವನ್ನ ಶೇ 100 ರಷ್ಟು ಖರ್ಚು ಮಾಡದಿದ್ದರೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಶೇ 100 ಸಾಧನೆ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಡೀ ದೇಶದಲ್ಲಿ scsp/tsp ಕಾಯ್ದೆ ಮಾಡಿರುವುದು ನಾವು ಮಾತ್ರ. ಜನಸಂಖ್ಯೆಗೆ ಅನುಗುಣವಾಗಿ sc-st ಸಮುದಾಯಕ್ಕೆ ಹಣ ಖರ್ಚು ಕೊಡುತ್ತಿರುವುದು ನಾವು ಮಾತ್ರ. ನಮ್ಮ ಸರ್ಕಾರ ಮಾತ್ರ ಎಂದು ಹೇಳಿದರು.

2024-25 ನೇ ಸಾಲಿನಲ್ಲಿ 39121.46 ಕೋಟಿ ಇದ್ದರೆ, ಹಿಂದಿನ ವರ್ಷ 35221.84 ಕೋಟಿ ಇತ್ತು. ಇದರಲ್ಲಿ ಬಿಡುಗಡೆ ವೆಚ್ಚದ ಶೇ 99.64 ಕೋಟಿಯಷ್ಟು ಖರ್ಚಾಗಿದೆ. ಉಳಿದದ್ದು ಏಕೆ ಆಗಿಲ್ಲ. ಆಯಾಯ ವರ್ಷವೇ ಶೇ 100 ರಷ್ಟು ಖರ್ಚು ಮಾಡಬೇಕು ಎನ್ನುವ ಕಾನೂನು ಮಾಡಿದ್ದು ನಾವೇ. ಖರ್ಚು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎನ್ನುವ ನಿಯಮವನ್ನೂ ಮಾಡಿದ್ದೇವೆ. ಯಾರು ನಿರ್ಲಕ್ಷ್ಯ ಮಾಡಿದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ನಿರ್ಲಕ್ಷ್ಯಕ್ಕೆ ಕ್ಷಮೆ ಇಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಕಾಯ್ದೆ 2013 ನ್ನು ಜಾರಿಗೆ ತಂದು, ಸರ್ಕಾರದ ಒಟ್ಟಾರೆ ಅಭಿವೃದ್ಧೀ ಆಯವ್ಯಯದ ಶೇ. 24.1 ರಷ್ಟನ್ನು ಈ ಸಮುದಾಯಗಳ ಅಭಿವೃದ್ಧಿಗೆ ವೆಚ್ಚ ಮಾಡಲಾಗುತ್ತಿದೆ. ಇಂದು ನಡೆದ ರಾಜ್ಯ ಪರಿಷತ್ ಸಭೆಯಲ್ಲಿ 2024-25 ನೇ ಸಾಲಿಗೆ ಎಸ್.ಸಿ.ಎಸ್.ಪಿ. / ಟಿಎಸ್.ಪಿ. ಅಡಿ ಒಟ್ಟಾರೆ. ರೂ.39,121.46 ಕೋಟಿ ಅನುದಾನ ಒದಗಿಸಲಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಇದು 11% ಅಂದರೆ ರೂ.3897 ಕೋಟಿ ಹೆಚ್ಚಳವಾಗಿದೆ. ಎಸ್.ಸಿ.ಎಸ್.ಪಿ. ಅಡಿ 27,673.96 ಕೋಟಿ ರೂ. ಹಾಗೂ ಟಿ.ಎಸ್.ಪಿ. ಅಡಿ 11447.50 ಕೋಟಿ ರೂ. ಒದಗಿಸಲಾಗಿದೆ. ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಮುಖ್ಯವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 8,480 ಕೋಟಿ ರೂ., ಇಂಧನ ಇಲಾಖೆಗೆ 5026 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ 4174 ಕೋಟಿ ರೂ., ಕಂದಾಯ ಇಲಾಖೆಗೆ 3403 ಕೋಟಿ ರೂ. , ಗ್ರಾಮೀಣಾಭಿವೃದ್ಧಿ ಇಲಾಖೆಗೆ 3163 ಕೋಟಿ ರೂ. ಒದಗಿಸಲಾಗಿದೆ.
ಕಳೆದ ವರ್ಷ 35221.84 ಕೋಟಿ ರೂ. ಆಯವ್ಯಯ ಹಂಚಿಕೆಗೆ ಎದುರಾಗಿ ಶೇ. 97.23 ರಷ್ಟು ಹಾಗೂ ಬಿಡುಗಡೆಗೆ ಎದುರಾಗಿ ಶೇ. 99.64 ರಷ್ಟು ಸಾಧನೆಯಾಗಿದೆ. ಈ ಅನುದಾನ ಯಾವ ಕಾರಣಕ್ಕೂ ಬಳಕೆಯಾಗದೆ ಉಳಿಕೆ (lapse) ಆಗಬಾರದು. ಅದೇ ವರ್ಷ ವೆಚ್ಚವಾಗಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನಿಗಮಗಳಲ್ಲಿ ಹಣ ವೆಚ್ಚವಾಗಿಲ್ಲ. ಇದಕ್ಕೆ ಶಾಸಕರು ಪಟ್ಟಿ ಕೊಡಲಿಲ್ಲ ಎಂಬ ಕಾರಣ ನೀಡುತ್ತಾರೆ.
ನಿಗಮಗಳ ಅಧ್ಯಕ್ಷರು ಹಾಗೂ ಸಂಬಂಧಿಸಿದ ಸಚಿವರು, ಶಾಸಕರು ಫಲಾನುಭವಿಗಳ ಪಟ್ಟಿ ಒದಗಿಸುವಂತೆ ಮನವೊಲಿಸಬೇಕು. ಈ ಯೋಜನೆಗಳ ಮೌಲ್ಯಮಾಪನದಿಂದ ಶೇ. 65 ರಷ್ಟು ಉಪಯೋಗವಾಗಿರುವುದು ಕಂಡು ಬರುತ್ತದೆ. ಸೆಕ್ಷನ್ 7 (ಡಿ) ಕೈಬಿಡಲಾಗಿದೆ. ಇದರಿಂದಾಗಿ ಈ ಯೋಜನೆಯ ಸಂಪೂರ್ಣ ವೆಚ್ಚ ಈ ಸಮುದಾಯದವರಿಗೇ ಬಳಕೆಯಾಗಲಿದೆ ಎಂದು ಹೇಳಿದರು.
ಇನ್ನೂ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಸಚಿವರಾದ ಹೆಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಡಾ. ಎಂ.ಸಿ. ಸುಧಾಕರ್, ಪರಿಷತ್ತಿನ ಸದಸ್ಯರಾಗಿರುವ ಶಾಸಕರುಗಳಾದ ಪ್ರಸಾದ್ ಅಬ್ಬಯ್ಯ, ಬಸಂತಪ್ಪ, ಶ್ರೀನಿವಾಸ್,ನರೇಂದ್ರಸ್ವಾಮಿ, ಕೃಷ್ಣಾನಾಯಕ್ , ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಸಂಸದರಾದ ಸುನಿಲ್ ಬೋಸ್ ಪ್ರಕಾಶ್ ಲೋಕಸಭಾ ಸದಸ್ಯರು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು..












Click it and Unblock the Notifications