ಸಿದ್ದರಾಮಯ್ಯ ಯಾತ್ರೆಗೆ ಕೆ.ಸಿ.ವೇಣುಗೋಪಾಲ್ ಸಂಧಾನ ಸೂತ್ರ!
ಬೆಂಗಳೂರು, ಡಿಸೆಂಬರ್ 07 : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಪ್ರವಾಸದ ಕುರಿತು ಎದ್ದಿದ್ದ ಗೊಂದಲಗಳಿಗೆ ತೆರೆ ಬಿದ್ದಿದೆ. ನಿಗದಿಯಂತೆ ಅವರು ಡಿಸೆಂಬರ್ 13ರಿಂದ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಯಾತ್ರೆಯ ಕುರಿತು ಎದಿದ್ದ ಗೊಂದಲ ಬಗೆಹರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಸಿದ್ದರಾಮಯ್ಯ ಯಾತ್ರೆಗೆ ಸಂಧಾನ ಸೂತ್ರವೊಂದನ್ನು ಸಿದ್ಧಪಡಿಸಿದ್ದಾರೆ.
'ಸಾಧನೆಯ ಸಂಭ್ರಮ' ಹೆಸರಿನಲ್ಲಿ ಸಿದ್ದರಾಮಯ್ಯ ರಾಜ್ಯ ಪ್ರವಾಸ ಮಾಡಲಿದ್ದು, ಕಾಂಗ್ರೆಸ್ ಶಾಸಕರಿರುವ 121 ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ವಿವಿಧ ಹೊಸ ಯೋಚನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ಡಿ.13ರಂದು ಸಿದ್ದರಾಮಯ್ಯ ರಾಜ್ಯ ಪ್ರವಾಸಕ್ಕೆ ಚಾಲನೆ ಸಿಗಲಿದೆ. ಈ ಯಾತ್ರೆಯ ನಂತರ ಪರಮೇಶ್ವರ ನೇತೃತ್ವದ ತಂಡ ಉಳಿದ ಕ್ಷೇತ್ರಗಳಲ್ಲಿ ಮತ್ತೊಂದು ಸುತ್ತಿನ ಯಾತ್ರೆ ನಡೆಸಿ ಚುನಾವಣಾ ಪ್ರಚಾರ ಮಾಡಲಿದೆ.

ಪರಮೇಶ್ವರ ವಿರೋಧ ವ್ಯಕ್ತಪಡಿಸಿದ್ದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಆದ್ದರಿಂದ, ಯಾತ್ರೆ ಆರಂಭವಾಗುವ ಕುರಿತು ಗೊಂದಲ ಎದ್ದಿತ್ತು. ಈಗ ಈ ಗೊಂದಲ ಬಗೆಹರಿದಿದೆ.

'ಸಾಧನೆಯ ಸಂಭ್ರಮ' ಹೆಸರಿನಲ್ಲಿ ಪ್ರವಾಸ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಧನೆಯ ಸಂಭ್ರಮ ಹೆಸರಿನಲ್ಲಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಸ್ಥಳೀಯ ಶಾಸಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಶಾಸಕರು ಇರುವ 121 ಕ್ಷೇತ್ರಗಳಲ್ಲಿ ಮಾತ್ರ ಈ ಯಾತ್ರೆ ನಡೆಯಲಿದೆ. ಪಕ್ಷದ ನಾಯಕರು ಈ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ.

ಪರಮೇಶ್ವರ, ದಿನೇಶ್ ಗುಂಡೂರಾವ್ ಮತ್ತೊಂದು ಯಾತ್ರೆ
ಸಿದ್ದರಾಮಯ್ಯ ಅವರ ಪ್ರವಾಸ ಮುಗಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಉಳಿದ ಕ್ಷೇತ್ರಗಳಲ್ಲಿ ಯಾತ್ರೆ ನಡೆಸುತ್ತಾರೆ. ಈ ಮೂಲಕ 224 ಕ್ಷೇತ್ರಗಳಲ್ಲಿಯೂ ಪ್ರವಾಸ ಮಾಡಲಾಗುತ್ತದೆ.

ಬಿಜೆಪಿ ಪರಿವರ್ತನಾ ಯಾತ್ರೆ
ಕರ್ನಾಟಕ ಬಿಜೆಪಿ 2018ರ ಚುನಾವಣೆಗೆ ಪ್ರಚಾರ ನಡೆಸಲು 'ನವ ಕರ್ನಾಟಕ ಪರಿವರ್ತನಾ ಯಾತ್ರೆ' ಹೆಸರಿನಲ್ಲಿ ಎಲ್ಲಾ ಕ್ಷೇತ್ರಗಳ ಪ್ರವಾಸ ಮಾಡುತ್ತಿದೆ. ಈ ಯಾತ್ರೆ ಈಗಾಗಲೇ 25 ದಿನಗಳನ್ನೂ ಪೂರೈಸಿದೆ.











Click it and Unblock the Notifications