ಸಿದ್ದರಾಮಯ್ಯ ಮೊಮ್ಮಗ ಧವನ್ ರಾಜಕೀಯಕ್ಕೆ ಎಂಟ್ರಿ; ರಾಹುಲ್ ಗಾಂಧಿ ಭೇಟಿ ಹಿಂದಿದೆ ಸಿದ್ದು ಆ ಲೆಕ್ಕಾಚಾರ?
ಬೆಂಗಳೂರು, ಅಕ್ಟೋಬರ್ 11: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ರಾಕೇಶ್ ಸಿದ್ದರಾಮಯ್ಯ ಮಗ ಧವನ್ ರಾಕೇಶ್ ಇತ್ತೀಚೆಗೆ ತಾತ ಸಿದ್ದರಾಮಯ್ಯ ಅವರ ಜೊತೆ ಹಲವು ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊಮ್ಮಗ ಧವನ್ ನನ್ನು ರಾಜಕೀಯಕ್ಕೆ ಕರೆತರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರಾ ಎಂಬ ಮಾತುಗಳು ಕೇಳಿಬಂದಿದ್ದವು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ನನ್ನ ಕೊನೆಯ ಚುನಾವಣೆ ಎಂದು ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಹೇಳಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಮತ್ತೊಂದು ಕುಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಕ್ರಿಯ ರಾಜಕೀಯ ಪ್ರವೇಶ ಮಾಡಲಿದೆ. ಇದಕ್ಕೆ ಸಿದ್ದರಾಮಯ್ಯ ಅವರು ಈಗಿನಿಂದಲೇ ಅಖಾಡ ಸಿದ್ದ ಮಾಡುತ್ತಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಧವನ್ ಇನ್ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕಿದ್ದು, ರಾಹುಲ್ ಗಾಂಧಿ ಜೊತೆ ನಿಂತಿರುವ ಫೋಟೋ ಹಂಚಿಕೊಂಡು ಬರೆದುಕೊಂಡಿದ್ದಾರೆ. ರಾಜಕೀಯ ಬಗೆಗಿನ ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಈಗಾಗಲೇ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಈ ಹಿಂದೆ ವರುಣಾ ಕ್ಷೇತ್ರದಿಂದ ಶಾಸಕರಾಗಿದ್ದರು. ಈಗ ಯತೀಂದ್ರ , ವಿಧಾನಪರಿಷತ್ ಸದಸ್ಯರಾಗಿದ್ದಾರೆ. ತಂದೆಯ ಕ್ಷೇತ್ರವಾದ ವರುಣಾ ಕ್ಷೇತ್ರದ ಉಸ್ತುವಾರಿಯಾಗಿ ಅಲ್ಲಿನ ಅಭಿವೃದ್ದಿ ಕೆಲಸಗಳನ್ನು ಯತೀಂದ್ರ ನೋಡಿಕೊಳ್ಳುತ್ತಿದ್ದಾರೆ. ರಾಜಕೀಯವಾಗಿಯೂ ಮೈಸೂರು ಜಿಲ್ಲೆಯಲ್ಲಿ ತಂದೆ ಸಿದ್ದರಾಮಯ್ಯಗೆ ನೆರವಾಗುತ್ತಿದ್ದಾರೆ. ಆದರೇ ಯತೀಂದ್ರ ಇನ್ನೂ ಅವಿವಾಹಿತರಾಗಿಯೇ ಉಳಿದಿದ್ದಾರೆ. ಹೀಗಾಗಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಒಬ್ಬ ರಾಜಕೀಯ ಉತ್ತರಾಧಿಕಾರಿ ಬೇಕಾಗಿದೆ. ಹೀಗಾಗಿ ಆ ರಾಜಕೀಯ ಉತ್ತರಾಧಿಕಾರಿ ಯಾರು ಎಂಬುದು ಈಗಾಗಲೇ ನಿರ್ಧಾರವೂ ಆಗಿದೆ. ಹೀಗಾಗಿ ರಾಕೇಶ್ ಪುತ್ರ ಧವನ್ ರಾಕೇಶ್ ಅವರನ್ನ ರಾಜಕೀಯಕ್ಕೆ ಕರೆತರಲು ಸಿದ್ದರಾಮಯ್ಯ ವೇದಿಕೆ ಸಜ್ಜುಗೊಳಿದ್ದು, ರಾಹುಲ್ ಗಾಂಧಿ ಅವರಿಗೆ ಮೊಮ್ಮಗನ ಪರಿಚಯವನ್ನ ಮಾಡಿಸಿದ್ದಾರೆ.
ಧವನ್ ರಾಕೇಶ್ ಪೋಸ್ಟ್ನಲ್ಲಿ ಏನಿದೆ?
ಕಳೆದ ಆಗಸ್ಟ್ 8 ರಂದು, ನಮ್ಮ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸದಾವಕಾಶ ನನಗೆ ದೊರೆಯಿತು. ಪ್ರಾಮಾಣಿಕ ನಾಯಕರನ್ನು ನಾನು ಎಷ್ಟರ ಮಟ್ಟಿಗೆ ಗೌರವಿಸುತ್ತೇನೆ ಮತ್ತು ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂಬುದನ್ನು ನನ್ನ ತಾತ ಗುರುತಿಸಿದ್ದರಿಂದ ಇದು ಸಾಧ್ಯವಾಯಿತು. ಈ ರಾಜಕೀಯ ವಲಯದಲ್ಲಿ ಪ್ರಾಮಾಣಿಕತೆಯನ್ನು ಬಹುತೇಕವಾಗಿ ಕಡೆಗಣಿಸಲಾಗಿದೆ. ಆದರೆ, ಇದೇ ವಲಯದಲ್ಲಿ ಪ್ರಾಮಾಣಿಕವಾಗಿರಲು ಯತ್ನಿಸುವ, ತನ್ನ ನಂಬಿಕೆಗೆ ಬದ್ಧವಾಗಿರುವ ನಾಯಕರನ್ನು ಭೇಟಿಯಾಗಲು ನಾನು ಇಚ್ಛಿಸುತ್ತೇನೆ.
ರಾಜಕಾರಣವು ನನ್ನ ಬದುಕಿನ ಹಿನ್ನೆಲೆಯ ಒಂದು ಭಾಗವಾಗಿರುವುದು ನಿಜ. ಆದರೆ, ನಿರಂತರ ವಿರೋಧದ ನಡುವೆಯೂ ತನ್ನ ನಂಬಿಕೆ ಹಾಗೂ ಸಿದ್ದಾಂತದ ಪರ ನಿಲ್ಲಲು ರಾಹುಲ್ ಗಾಂಧಿ ನಿರ್ಧರಿಸಿದರು. ಇಂತಹ ನಾಯಕನನ್ನು ಭೇಟಿಯಾಗಿದ್ದು ನಿಜವಾಗಿಯೂ ವಿಭಿನ್ನ ಅನುಭವವಾಗಿತ್ತು. ಅವರೊಂದಿನ ಸ್ವಲ್ಪ ಕ್ಷಣಗಳ ಕಾಲ ಮಾತನಾಡಿದೆ. ಅವರ ಕುರಿತು ನನ್ನಲ್ಲಿರುವ ಅಪಾರ ಗೌರವದ ಬಗ್ಗೆ ತಿಳಿಸಿದೆ. ಈಗ ವಿದ್ಯಾರ್ಥಿಯಾಗಿ, ಮುಂದೆ ವಕೀಲನಾಗಿ ನಾನು ಅವರ ಜೊತೆ ನಿಲ್ಲಲು, ಅವರೊಂದಿಗೆ ಹೆಜ್ಜೆ ಹಾಕಲು ಬಯಸುತ್ತೇನೆಂದು ಹೇಳಿದೆ.
ಈಗ ನಾವೆಲ್ಲರೂ ಸ್ವಲ್ಪ ಹೆಚ್ಚು ಮುನ್ನೆಚ್ಚರಿಕೆಯಿಂದ ಯೋಚಿಸಬೇಕಿದೆ. ಹೆಚ್ಚು ಜಾಗೃತರಾಗಬೇಕಿದೆ. ಸತ್ಯ, ನಿಷ್ಠೆ ಹಾಗೂ ಪಾರದರ್ಶಕತೆಯ ಮೂಲಕ ದೇಶವನ್ನು ಮುನ್ನಡೆಸುವ ನಾಯಕರನ್ನು ಗೌರವಿಸಬೇಕಿದೆ. ರಾಹುಲ್ ಗಾಂಧಿ ಅವರು ಸಾರ್ವಜನಿಕರು ಹಾಗೂ ಮಾಧ್ಯಮಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸುತ್ತಾರೆ. ಅದೇ ರೀತಿ, ನಾವು ಸಹ ಸಂವಾದಕ್ಕೆ ಮುಂದಾಗಬೇಕಿದೆ. ಪ್ರಾಮಾಣಿಕ ಸಂವಾದವನ್ನು ನಾನು ಯಾವಾಗಲೂ ಸ್ವಾಗತಿಸುತ್ತೇನೆ.












Click it and Unblock the Notifications