ದಾವಣಗೆರೆಯಲ್ಲಿ ಪೈಲಟ್ ತರಬೇತಿ ಕೇಂದ್ರ : ಸಿದ್ದೇಶ್ವರ್
ದಾವಣಗೆರೆ, ಜೂನ್ 2 : ದಾವಣಗೆರೆ ಅಥವ ಚಿತ್ರದುರ್ಗದಲ್ಲಿ ಪೈಲಟ್ ತರಬೇತಿ ಕೇಂದ್ರ ಆರಂಭಿಸುವ ಕನಸಿದೆ ಎಂದು ವಿಮಾನಯಾನ ಖಾತೆ ರಾಜ್ಯಸಚಿವ ಜಿ.ಎಂ.ಸಿದ್ದೇಶ್ವರ್ ಹೇಳಿದ್ದಾರೆ. ರಾಜ್ಯ ಸರ್ಕಾರ ಅಗತ್ಯ ಭೂಮಿಯನ್ನು ಒದಗಿಸಿದರೆ, ಕೇಂದ್ರವನ್ನು ಆರಂಭಿಸಲಾಗುವುದು ಎಂದು ಸಚಿವರು ಹೇಳಿದರು.
ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ದಾವಣಗೆರೆಗೆ ಆಗಮಿಸಿದ ಜಿ.ಎಂ.ಸಿದ್ದೇಶ್ವರ್ ಅವರಿಗೆ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಜಿಲ್ಲಾ ಬಿಜೆಪಿ ಘಟಕ ಸಿದ್ದೇಶ್ವರ್ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಂಡಿತ್ತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಿದ್ದೇಶ್ವರ್, ರಾಜ್ಯದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನಂತರ ಮಾತನಾಡಿದ ಸಿದ್ದೇಶ್ವರ್, ದಾವಣಗೆರೆ ಅಥವಾ ಚಿತ್ರದುರ್ಗದಲ್ಲಿ ಪೈಲಟ್ ತರಬೇತಿ ಕೇಂದ್ರ ಹಾಗೂ ದಾವಣಗೆರೆಯಲ್ಲಿ ಏರ್ಸ್ಟ್ರಿಪ್ ತೆರೆಯುವ ಕನಸಿದೆ. ರಾಜ್ಯ ಸರ್ಕಾರ ಅಗತ್ಯ ಭೂಮಿ ಒದಗಿಸಿದರೆ, ಇವುಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರದ ವತಿಯಿಂದ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಹೇಳಿದರು. ಚಿತ್ರಗಳಲ್ಲಿ ನೋಡಿ ಅಭಿನಂದನಾ ಸಮಾರಂಭ [ಚಿತ್ರಕೃಪೆ : ಸಿದ್ದೇಶ್ವರ್ ಫೇಸ್ ಬುಕ್]
ಜಿ.ಎಂ.ಸಿದ್ದೇಶ್ವರ್ ಅವರಿಗೆ ಅದ್ದೂರಿ ಸ್ವಾಗತ
ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಭಾನುವಾರ ದಾವಣಗೆರೆ ಜಿಲ್ಲಾ ಕೇಂದ್ರಕ್ಕೆ ಆಗಮಿಸಿದ ರಾಜ್ಯ ವಿಮಾನಯಾನ ಖಾತೆ ರಾಜ್ಯ ಸಚಿವ ಜಿ.ಎಂ.ಸಿದ್ದೇಶ್ವರ್ ಅವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಬಿಜೆಪಿ ಜಿಲ್ಲಾ ಘಟಕದಿಂದ ಸಿದ್ದೇಶ್ವರ್ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಪೈಲಟ್ ತರಬೇತಿ ಕೇಂದ್ರ ಸ್ಥಾಪನೆ
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿ.ಎಂ.ಸಿದ್ದೇಶ್ವರ್, ದಾವಣಗೆರೆ ಅಥವಾ ಚಿತ್ರದುರ್ಗದಲ್ಲಿ ಪೈಲಟ್ ತರಬೇತಿ ಕೇಂದ್ರ ತೆರೆಯುವ ಕನಸಿದೆ. ಹಾಗೆಯೇ ದಾವಣಗೆರೆಯಲ್ಲಿ ಏರ್ಸ್ಟ್ರಿಪ್ ಸ್ಥಾಪಿಸುವ ಉದ್ದೇಶವಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ
ರಾಜ್ಯ ಸರ್ಕಾರ ಪೈಲಟ್ ತರಬೇತಿ ಕೇಂದ್ರ ಸ್ಥಾಪನೆಗೆ ಅಗತ್ಯ ಭೂಮಿ ಒದಗಿಸಿದರೆ ಕೇಂದ್ರ ಸ್ಥಾಪಿಸುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಸಿದ್ದೇಶ್ವರ್ ಹೇಳಿದರು. ವಿಧಾನ ಪರಿಷತ್ ಚುನಾವಣೆ ಮುಗಿದ ನಂತರ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಭೂಮಿ ಒದಗಿಸಲು ಸೂಚನೆ ನೀಡುತ್ತೇನೆ ಎಂದರು.
ಸೋಮವಾರ ಅಧಿಕಾರ ಸ್ವೀಕಾರ
ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವರಾಗಿ ಇನ್ನೂ ಅಧಿಕಾರ ವಹಿಸಿಕೊಂಡಿಲ್ಲ. ಜೂನ್ 2ರ ಸೋಮವಾರ ಸಮಯ ನಿಗದಿಪಡಿಸಿದ್ದು, ಅಧಿಕಾರ ಸ್ವೀಕರಿಸತ್ತೇನೆ. ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ಮೋದಿ ನೀಡಿರುವ ಗುರಿ, ಗಡುವಿನಂತೆ ಎಲ್ಲಾ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಪಕ್ಷದ ನಾಯಕರಿಗೆ ಬಿಟ್ಟ ವಿಷಯ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಅಥವಾ ಕೇಂದ್ರದಲ್ಲಿ ಸೂಕ್ತ ಸ್ಥಾನಮಾನ ನೀಡುವುದು ಪಕ್ಷದ ನಾಯಕರಿಗೆ ಬಿಟ್ಟ ವಿಷಯ ಎಂದು ಸಿದ್ದೇಶ್ವರ್ ಹೇಳಿದರು. ರಾಜ್ಯದಲ್ಲಿ ಸ್ಥಾನಮಾನ ಕೊಡುವ ವಿಷಯ ಪಕ್ಷದ ರಾಜ್ಯಾಧ್ಯಕ್ಷರಿಗೆ ಬಿಟ್ಟದ್ದು, ಪಕ್ಷದ ವರಿಷ್ಠರು ಈ ಕುರಿತು ಶೀಘ್ರವೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.