ಉಪ ಸಮರ: ಕಗ್ಗಂಟಾದ ಅಭ್ಯರ್ಥಿಗಳ ಆಯ್ಕೆ; ಭಾನುವಾರ ಮಹತ್ವದ ಕೋರ್ ಕಮಿಟಿ ಸಭೆ!
ಬೆಂಗಳೂರು, ಸೆ. 30: ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಬಳಿಕ ಮೊದಲ ಅಗ್ನಿಪರೀಕ್ಷೆ ರಾಜ್ಯ ಬಿಜೆಪಿ ನಾಯಕರಿಗೆ ಎದುರಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಿದ ಬಳಿಕ ಮೊದಲ ಉಪ ಸಮರ ಇದೇ ತಿಂಗಳು ನಡೆಯಲಿದೆ. ಹೀಗಾಗಿ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತಂತೆ ಚರ್ಚಿಸಲು ಭಾನುವಾರ ರಾಜ್ಯ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದೆ.
ಎರಡು ಕ್ಷೇತ್ರಗಳಲ್ಲಿ ಅದರಲ್ಲಿಯೂ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಮಾಜಿ ಸಚಿವ ದಿ. ಸಿ.ಎಂ. ಉದಾಸಿ ಪುತ್ರ ಸಂಸದ ಶಿವಕುಮಾರ್ ಉದಾಸಿ ತಮ್ಮ ಪತ್ನಿ ರೇವತಿ ಅವರಿಗೆ ಬಿಜೆಪಿ ಟಿಕೆಟ್ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಜೊತೆಗೆ ಸಿಂದಗಿ ಉಪ ವಿಧಾನಸಭಾ ಕ್ಷೇತ್ರದಲ್ಲಿಯೂ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಹೀಗಾಗಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯನ್ನು ಕರೆಯಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷ್ಯತೆಯಲ್ಲಿ ನಡೆಯುವ ಸಭೆಯಲ್ಲಿ ಸಿಂಧಗಿ ಹಾಗೂ ಹಾನಗಲ್ ಕ್ಷೇತ್ರಗಳಿಗೆ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಪಕ್ಷದ ಹೈಕಮಾಂಡ್ಗೆ ಕಳುಹಿಸಿ ಕೊಡಲಾಗುತ್ತದೆ ಎಂದು ತಿಳಿದು ಬಂದಿದೆ. ಆದರೆ ಅದು ಅಷ್ಟು ಸುಲಭವಲ್ಲ ಎನ್ನಲಾಗುತ್ತಿದೆ. ಅದಕ್ಕೆ ಕಾರಣಗಳು ಮುಂದಿವೆ.
ಕಗ್ಗಂಟಾದ ಹಾನಗಲ್ ಕ್ಷೇತ್ರದ BJP ಅಭ್ಯರ್ಥಿ ಆಯ್ಕೆ!
ಹಾನಗಲ್ ಕ್ಷೇತ್ರದಲ್ಲಿ ನಾಲ್ಕೈದು ಜನ ಪ್ರಬಲ ಆಕಾಂಕ್ಷಿಗಳಿದ್ದಾರೆ. ದಿ. ಸಿಎಂ ಉದಾಸಿ ಅವರ ಸೊಸೆ ರೇವತಿ ಶಿವಕುಮಾರ್ ಉದಾಸಿ, ಮೂಲ ಬಿಜೆಪಿಗ ಕಲ್ಯಾಣ ಕುಮಾರ್ ಶೆಟ್ಟರ್, ಸಿದ್ದರಾಜ ಕಲಕೋಟೆ, ಮಾಜಿ ಶಾಸಕ ಶಿವರಾಜ ಸಜ್ಜನ್, ಮಹಾಂತೇಶ ಸೊಪ್ಪಿನ ಅವರ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿದೆ. ಸಂಸದ ಶಿವಕುಮಾರ್ ಉದಾಸಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಆಪ್ತರು, ಹೀಗಾಗಿ ರೇವತಿ ಉದಾಸಿ ಅವರಿಗೆ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚು ಎಂಬ ಮಾತುಗಳಿವೆ. ಇನ್ನು ಸಿಂದಗಿ ಕ್ಷೇತ್ರದಲ್ಲಿಯೂ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ.
ಸಿಂದಗಿಯಲ್ಲಿಯೂ ಬಿಜೆಪಿ ಪರಿಸ್ಥಿತಿ ಭಿನ್ನವಾಗಿಲ್ಲ!
ಸಿಂದಗಿಯಲ್ಲಿ ಮಾಜಿ ಶಾಸಕ ರಮೇಶ್ ಬೂಸನೂರು, ಸಂಗನಗೌಡ ಪಾಟೀಲ್ ಹಾಗೂ ಸಿದ್ದು ಬಿರಾದಾರ ಅವರ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಟಿಕೆಟ್ ಆಕಾಂಕ್ಷಿಗಳು ಎಂದು ಕೇಳಿ ಬಂದಿತ್ತಾದರೂ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಬಿಜೆಪಿ ಅಭ್ಯರ್ಥಿಯ ಆಯ್ಕೆ ಸಿಂದಗಿ ಕ್ಷೇತ್ರದಲ್ಲಿಯೂ ಬಿಜೆಪಿಗೆ ಸವಾಲಾಗಿದೆ. ದಿ. ಎಂ.ಸಿ. ಮನಗೂಳಿ ಅವರ ನಿಧನದಿಂದ ಕ್ಷೇತ್ರ ತೆರವಾಗಿದೆ. ದಿ. ಮನಗೂಳಿನ ಅವರ ಪುತ್ರ ಅಶೋಕ್ ಮನಗೂಳಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ ಅಲ್ಲಿ ಬಿಜೆಪಿಗೆ ಕಾಂಗ್ರೆಸ್ ತೀವ್ರ ಪೈಪೋಟಿ ಕೊಡುವ ಸಾಧ್ಯತೆಯಿದೆ.
ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ಕೊಡುವ ಒತ್ತಡದಲ್ಲಿ..!
ಹೀಗಾಗಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ಕೊಡುವ ಒತ್ತಡದಲ್ಲಿ ರಾಜ್ಯ ಬಿಜೆಪಿ ನಾಯಕರಿದ್ದಾರೆ. ಜೊತೆಗೆ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿರುವುದು ಚುನಾವಣೆಯ ಮೇಲೆ ಋಣಾತ್ಮಕ ಪರಿಣಾಮ ಬೀರದಂತೆ ತಡೆಯಲು ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿಗೆ ಸೂಚಿಸಿದೆ ಎನ್ನಲಾಗಿದೆ. ಹೀಗಾಗಿ ಕೋರ್ ಕಮಿಟಿ ಸಭೆಯಲ್ಲಿ ಆಕಾಂಕ್ಷಿಗಳ ಕುರಿತು ಚರ್ಚಿಸಿ ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸಲು ತೀರ್ಮಾನ ಮಾಡಲಾಗಿದೆ. ಸರ್ಕಾರದಿಂದ ಹಾಗೂ ಪಕ್ಷದಿಂದ ಪ್ರತ್ಯೇಕ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗುತ್ತದೆ ಎನ್ನಲಾಗಿದೆ.
ಅಭ್ಯರ್ಥಿಗಳ ಆಯ್ಕೆ ಮಾಡಲಿದೆ BJP ಹೈಕಮಾಂಡ್!
ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಕುರಿತು ಬಿಜೆಪಿ ಹೈಕಮಾಂಡ್ ಕೂಡ ವರದಿ ತರಿಸಿಕೊಳ್ಳಲಿದೆ ಎಂಬ ಮಾಹಿತಿಯಿದೆ. ಹೀಗಾಗಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಬೆಯಲ್ಲಿ ಅಂತಿಮವಾಗಿ ಬರುವ ಹೆಸರುಗಳನ್ನು ಪರಿಶೀಲಿಸಿ, ತಾನು ಪಡೆದುಕೊಂಡಿರುವ ವರದಿ ಆಧರಿಸಿ ಅಭ್ಯರ್ಥಿಗಳನ್ನು ಬಿಜೆಪಿ ವರಿಷ್ಠರು ಅಂತಿಮ ಮಾಡಲಿದ್ದಾರೆ. ಆ ಬಳಿಕ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಿದೆ.
Recommended Video