ಶಿವಮೊಗ್ಗ ಸ್ಪೋಟ: ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಮಾಡುತ್ತಿರುವುದೇನು?
ಬೆಂಗಳೂರು, ಫೆ. 07: ಶಿವಮೊಗ್ಗದ ಹುಣಸೋಡಿನ ಕಲ್ಲುಕ್ವಾರಿ ಸ್ಪೋಟದ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ಗಣಿಗಾರಿಕೆಗೆ ಸಂಬಂಧಿಸಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಕ್ರಮ ಗಣಿಗಾರಿಕೆ ತಡೆಯುವುದು ಸೇರಿದಂತೆ ಕಾನೂನು ಪ್ರಕಾರ ಗಣಿಗಾರಿಕೆ ಮಾಡುವವರಿಗೆ ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ ಹಲವು ಪರಿಣಾಮಕಾರಿ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ.
ಶಿವಮೊಗ್ಗದ ಘಟನೆ ಕುರಿತು ಕಠಿಣಕ್ರಮಗಳನ್ನು ಕೈಗೊಳ್ಳುತ್ತಿರುವ ಸರ್ಕಾರ ಸಕ್ರಮ ಗಣಿಗಾರಿಕೆ ನಿಷೇಧವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. ಕಲ್ಲು ಗಣಿಗಾರಿಕೆಯನ್ನು ನಿಷೇಧ ಮಾಡಿದರೆ ಅಭಿವೃದ್ಧಿ ಅಸಾಧ್ಯ ಎಂಬುದು ಸರ್ಕಾರದ ನಿಲುವು. ಇದೇ ಸಂದರ್ಭದಲ್ಲಿ ಗಣಿಗಾರಿಕೆ ಸಕ್ರಮವಾಗಿ ನಡೆದುಕೊಳ್ಳುವಂತೆ ನಿಗಾವಹಿಸುವುದು ಕೂಡ ಸರ್ಕಾರದ ಕರ್ತವ್ಯ. ಹೀಗಾಗಿ ಗಣಿಗಾರಿಕೆಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ.
ಹೀಗಾಗಿ ಶಿವಮೊಗ್ಗ ಸ್ಪೋಟದ ಬಳಿಕ ರಾಜ್ಯ ಬಿಜೆಪಿ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಸರ್ಕಾರದ ತೀರ್ಮಾನದ ಸಂಪುರ್ಣ ಮಾಹಿತಿ ಇಲ್ಲಿದೆ!

ಹೂಡಿಕೆ ಅಗತ್ಯ!
ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭವಾಗಿ ಹಾಗೂ ಸರಳವಾಗಿ ಅನುಮೋದನೆ ನೀಡಲು ಸಾಧ್ಯವಾಗುವಂತಹ 'ಏಕಗವಾಕ್ಷಿ 'ಪದ್ದತಿಯನ್ನು ಅಳವಡಿಸಲು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ತೀರ್ಮಾನಿಸಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ದಿಮೆದಾರರಿಗೆ ಸುಲಭವಾಗಿ ಹಾಗೂ ಸುಲಲಿತವಾಗಿ ವ್ಯಾಪಾರ, ವಹಿವಾಟು ನಡೆಸಲು ಅನುಕೂಲವಾಗುವಂತೆ ಈ ಪದ್ದತಿಯನ್ನು ಜಾರಿ ಮಾಡಲು ಮುಂದಾಗಿದ್ದಾರೆ.
ಈ ಸಂಬಂಧ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಉದ್ಯಮಿಗಳ ಜೊತೆ ಸಭೆ ನಡೆಸಿರುವ ನಿರಾಣಿ ಅವರು, ಹೂಡಿಕೆದಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.

ಏಕಗವಾಕ್ಷಿ ಪದ್ದತಿ
ಗಣಿಗಾರಿಕೆ ಕ್ಷೇತ್ರದಲ್ಲಿ ಹೂಡಿಕೆದಾರರಲ್ಲಿ ವಿಶ್ವಾಸ ಮೂಡಿಸಲು ಬಯಸಿದೆ. ಅನೇಕ ವರ್ಷಗಳಿಂದ ಅನುಮೋದನೆಗಾಗಿ ಕಾಯುತ್ತಿರುವ ಪ್ರಸ್ತಾವನೆಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡಬೇಕು. ಉದ್ದಿಮೆದಾರರ ಮನೆ ಬಾಗಿಲಿಗೆ ನಾವೇ ಹೋಗಬೇಕೆಂಬುದು ನಮ್ಮ ಗುರಿಯಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಇಲಾಖೆಯಿಂದ ಇಲಾಖೆಗೆ ಪರವಾನಗಿ ಪಡೆಯಲು ಹೂಡಿಕೆದಾರರು ಎದುರಿಸುತ್ತಿರುವ ಸಮಸ್ಯೆಯನ್ನು ನಿವಾರಣೆ ಮಾಡಬೇಕು. ಹಾಗೆ ಮಾಡಲು ಏಕಗವಾಕ್ಷಿ (single window) ಪದ್ದತಿ ಜಾರಿ ಮಾಡುವುದೇ ಏಕೈಕ ಪರಿಹಾರ ಎಂದರು.
ಏಕಗವಾಕ್ಷಿ ಪದ್ಧತಿ ಜಾರಿ ಮಾಡಿದರೆ, ಉದ್ದಿಮೆದಾರರು ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುತ್ತಾರೆ. ಇದರಿಂದ ಉದ್ಯೋಗಗಳನ್ನು ಸೃಷ್ಟಿಸಬಹುದೆಂದು ಸಚಿವರು ಅಭಿಪ್ರಾಯಪಟ್ಟರು.

ಕೈಗಾರಿಕಾ ಇಲಾಖೆ ಮಾದರಿ
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಮಾದರಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿಯೂ ಯೋಜನೆಗಳನ್ನು ಅನುಮೋದಿಸಲು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಏಕಗವಾಕ್ಷಿ ಪದ್ದತಿಯನ್ನು ಜಾರಿ ಮಾಡಬೇಕು. 5 ಕೋಟಿ ರೂಪಾಯಿಗಳಿಗಿಂದ ಕಡಿಮೆ ಮೊತ್ತದ ಹೂಡಿಕೆ ಪ್ರಸ್ತಾವನೆಗಳಿಗೆ ಜಿಲ್ಲಾ ಮಟ್ಟದ ಸಮಿತಿ ಅನುಮೋದನೆ ಕೊಡಬಹುದು. ಅದಕ್ಕೆ ಆಯಾ ಜಿಲ್ಲಾಧಿಕಾರಿಗಳು ಮುಖ್ಯಸ್ಥರಾಗಿರುತ್ತಾರೆ. 5 ಕೋಟಿ ರೂ.ಗಳಿಗಿಂತ ಹೆಚ್ಚಿನ ಮೊತ್ತದ ಹೂಡಿಕೆ ಪ್ರಸ್ತಾವನೆಗಳಿಗೆ ರಾಜ್ಯಮಟ್ಟದ ಸಮಿತಿ ಒಪ್ಪಿಗೆ ನೀಡಬೇಕು. ಅದಕ್ಕೆ ಇಲಾಖೆಯ ಸಚಿವರು ಮುಖ್ಯಸ್ಥರಾಗಿರಬೇಕು ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಇದೇ ಮಾದರಿಯಲ್ಲಿ ಕೈಗಾರಿಕಾ ಇಲಾಖೆಯಲ್ಲಿ ಹೂಡಿಕೆ ಆಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ವಿವರಿಸಿದ್ದಾರೆ.
Recommended Video

ಸಾಲ-ಸೌಲಭ್ಯ
ಮರಳು, ಕಲ್ಲು ಮತ್ತು ಗ್ರಾನೈಟ್ನಂತಹ ಸಣ್ಣ ಉದ್ದಿಮೆದಾರರು ನಿರಪೇಕ್ಷಣಾ ಪತ್ರ (ಎನ್ಒಸಿ)ವನ್ನು ನಾಲ್ಕು ಇಲಾಖೆಗಳಿಂದ ಪಡೆಯಬೇಕು. ಈ ಸಮಸ್ಯೆಯನ್ನು ತಕ್ಷಣವೇ ಪರಿಹರಸಬೇಕು. ಉದ್ದಿಮೆದಾರರು ಎನ್ಒಸಿ ಪಡೆಯಲು ಕಂದಾಯ ಇಲಾಖೆ (ಜಿಲ್ಲಾಧಿಕಾರಿ), ಅರಣ್ಯ( ಅರಣ್ಯ ಇಲಾಖೆಯ ಉಪಸಂರಕ್ಷಣಾಧಿಕಾರಿ), ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಎನ್ಒಸಿ ಪತ್ರ ಪಡೆಯಬೇಕು. ಪಟ್ಟಾ ಭೂಮಿಯಲ್ಲಿ ತಹಸೀಲ್ದಾರ್ ಅವರಿಂದ ಅನುಮತಿ ಪಡೆಯಬೇಕಾದ ಅಗತ್ಯವಿದೆ. ಯೋಜನೆಯು 25 ಹೆಕ್ಟೇರ್ಗಿಂತ ಕಡಿಮೆ ಭೂಮಿಯಲ್ಲಿದ್ದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪತ್ರ ಪಡೆಯಬೇಕು. 25 ಹೆಕ್ಟೇರ್ಗಳಿಗಿಂತ ಹೆಚ್ಚಿದ್ದರೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪಡೆಯಬೇಕು. ಪರವಾನಗಿ ಪಡೆಯಲು ಹಲವು ವರ್ಷಗಳೇ ಬೇಕಾಗಿರುವುದರಿಂದ ಈ ಸಮಸ್ಯೆಯನ್ನು ತಪ್ಪಿಸಲು ಏಕಗವಾಕ್ಷಿ ಪದ್ದತಿ ಜಾರಿ ಅಗತ್ಯವಿದೆ ಎಂದು ಸಚಿವ ಮುರುಗೇಶ್ ನಿರಾಣಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಜೊತೆಗೆ ಏಕಗವಾಕ್ಷಿ ಪದ್ದತಿಯಲ್ಲಿ ಸಮಿತಿಯು ಅನುಮೋದಿಸಿದ ಯೋಜನೆಗಳಿಗೆ ಸಾಲದ ಸೌಲಭ್ಯವನ್ನು ವಿವಿಧ ರಾಷ್ಟ್ರೀಕೃತ ಬ್ಯಾಂಕ್ಳಿಂದ ಪಡೆಯಲು ಅನುಕೂಲ ಮಾಡಿಕೊಡಬೇಕು ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಸಭೆಯಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯ್ಕ್,ಕರ್ನಾಟಕ ಅದಿರು ನಿಗಮದ ವ್ಯವಸ್ಥಾಪಕ ನಿದೇರ್ಶಕ ನವೀನ್ ರಾಜ್ ಸಿಂಗ್, ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿದೇರ್ಶಕ ಡಿ.ರಮೇಶ್ ಉಪಸ್ಥಿತರಿದ್ದರು.












Click it and Unblock the Notifications