ಎರಡು ಕ್ಷೇತ್ರಗಳ ಉಪ ಚುನಾವಣೆ; ಹೆಚ್ಚಿದ ಜೆಡಿಎಸ್ ಶಕ್ತಿ
ಬೆಂಗಳೂರು, ಅಕ್ಟೋಬರ್ 25 : ಬೆಂಗಳೂರಿನ ರಾಜರಾಜೇಶ್ವರಿ ನಗರ, ತುಮಕೂರು ಜಿಲ್ಲೆಯ ಶಿರಾ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಹೆಚ್ಚಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, 10ರಂದು ಫಲಿತಾಂಶ ಪ್ರಕಟವಾಗಲಿದೆ.
ಅಖಿಲೇಶ್ ಯಾದವ್ ಅವರ ನೇತೃತ್ವದ ಸಮಾಜವಾದಿ ಪಕ್ಷ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಲಿದೆ. ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಪಕ್ಷ ಶ್ರಮಿಸಲಿದೆ ಎಂದು ಭರವಸೆ ನೀಡಲಾಗಿದೆ.
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಗೆ ಸಮಾಜವಾದಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರಾಬಿನ್ ಮ್ಯಾಥ್ಯುಸ್ ಈ ಕುರಿತು ಪತ್ರ ಬರೆದಿದ್ದಾರೆ. ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಬೇಷರತ್ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ.

ಈ ಪತ್ರಕ್ಕೆ ಧನ್ಯವಾದಗಳನ್ನು ಅರ್ಪಿಸಿ ಜೆಡಿಎಸ್ ರಾಜ್ಯ ಘಟಕ ಟ್ವೀಟ್ ಮಾಡಿದೆ. "ಸಮಾಜವಾದಿ ಪಕ್ಷವು ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ಘೋಷಣೆ ಮಾಡಿದೆ. ಸಮಾಜವಾದಿ ಪಕ್ಷಕ್ಕೆ ನಮ್ಮ ಕೃತಜ್ಞತೆಗಳು" ಎಂದು ತಿಳಿಸಿದೆ.
ಅಖಿಲೇಶ್ ಯಾದವ್ ಎಚ್. ಡಿ. ಕುಮಾರಸ್ವಾಮಿ ಅವರ ಮಿತ್ರರು. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಆಸ್ತಿತ್ವಕ್ಕೆ ಬಂದಾಗ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಆಗ ಪ್ರಮಾಣ ವಚನ ಸಮಾರಂಭಕ್ಕೆ ಅಖಿಲೇಶ್ ಯಾದವ್ ಆಗಮಿಸಿದ್ದರು.
ಸಮಾಜವಾದಿ ಪಕ್ಷವು ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ತಮ್ಮ ಬೆಂಬಲ ಘೋಷಿಸಿದ್ದಾರೆ.
— Janata Dal Secular (@JanataDal_S) October 23, 2020
ಸಮಾಜವಾದಿ ಪಕ್ಷದ ಬೆಂಬಲಕ್ಕೆ ನಮ್ಮ ಕೃತಜ್ಞತೆಗಳು.@samajwadiparty pic.twitter.com/DLpdMXHY0A
ರಾಜರಾಜೇಶ್ವರಿ ನಗರದಲ್ಲಿ ಪಿ. ಕೃಷ್ಣಮೂರ್ತಿ ಮತ್ತು ಶಿರಾ ಕ್ಷೇತ್ರದಲ್ಲಿ ಅಮ್ಮಾಜಮ್ಮ ಅವರು ಜೆಡಿಎಸ್ ಅಭ್ಯರ್ಥಿಗಳು. ಎರಡೂ ಕ್ಷೇತ್ರದಲ್ಲಿ ಪಕ್ಷ ಬಿರುಸಿನಿಂದ ಪ್ರಚಾರವನ್ನು ನಡೆಸುತ್ತಿದೆ. ಶಿರಾ 2018ರಲ್ಲಿ ಜೆಡಿಎಸ್ ಪಕ್ಷವೇ ಗೆದ್ದ ಕ್ಷೇತ್ರವಾಗಿದೆ.












Click it and Unblock the Notifications