Prajwal Revanna Case: ಸಿಐಡಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಆರೋಪ ಪ್ರಕರಣ ಸದ್ಯ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖೆಗಾಗಿ ಎಸ್ಐಟಿ ತಂಡ ರಚನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇಂದು ವಿಶೇಷ ತನಿಖಾ ತಂಡ (ಎಸ್ಐಟಿ) ವನ್ನು ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಸಿಐಡಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ತಂಡ ರಚನೆ ಮಾಡಲಾಗಿದೆ. ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ. ಪನ್ನೇಕರ್ ಮತ್ತು ಮೈಸೂರು ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಸೀಮಾ ಲಾಠ್ಕರ್ ಅವರು ಈ ತಂಡದಲ್ಲಿ ಇರಲಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊಕದ್ದಮೆ ಸಂಖ್ಯೆ 107/2024 ಕಲಂ 354A, 354D, 506, 509 ಐಪಿಸಿ ಪ್ರಕರಣದ ತನಿಖೆಗಾಗಿ ಸಿಐಡಿ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಹಿಳಾ ಆಯೋಗ ಪತ್ರ
ಹಾಸನದಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರು ಮಹಿಳೆಯರ ಮೇಲೆ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಅನೇಕ ರಾಜಕಾರಣಿಗಳು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ, ಚಿತ್ರೀಕರಣ ಮಾಡಿದ ಮತ್ತು ಅದನ್ನು ಸಾರ್ವಜನಿಕಗೊಳಿಸಿದ ಇಬ್ಬರನ್ನೂ ಪತ್ತೆ ಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು.
ವಿದೇಶಕ್ಕೆ ಹಾರಿದ ಪ್ರಜ್ವಲ್ ರೇವಣ್ಣ?
ಇನ್ನು ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪಗಳು ಹೆಚ್ಚಾಗುತ್ತಿದ್ದಂತೆ ಲೋಕಸಭಾ ಚುನಾವಣೆ ಬಳಿಕ ಅವರು ವಿದೇಶಕ್ಕೆ ಹಾರಿದ್ದಾರೆ ಎನ್ನುವ ವರದಿಗಳಿವೆ. ಶನಿವಾರ ಎಸ್ಐಟಿ ತಂಡ ರಚನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು, ಪ್ರಕರಣ ಗಂಭೀರ ತಿರುವು ಪಡೆಯುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಎಸ್ಕೇಪ್ ಆಗಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ.
ಪೆನ್ಡ್ರೈವ್ನಲ್ಲಿ ನೂರಾರು ಮಹಿಳೆಯರ ಸಾವಿರಾರು ವಿಡಿಯೋಗಳು ಇವೆ ಎಂದು ಹೇಳಲಾಗಿದ್ದು, ಮಹಿಳಾ ಅಧಿಕಾರಿಗಳ ಮೇಲೂ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನುವ ಆರೋಪಗಳಿವೆ. ಇಷ್ಟೆಲ್ಲಾ ವಿವಾದದ ನಡುವೆ ಪ್ರಜ್ವಲ್ ರೇವಣ್ಣ ಮುಖವನ್ನು ಮಾರ್ಫ್ ಮಾಡಿ ಅವರ ಹೆಸರು ಕೆಡಿಸಲು ಈ ವಿಡಿಯೋಗಳನ್ನು ಹಂಚಿಕೆ ಮಾಡಲಾಗಿದೆ ಎಂದು ದೂರು ಕೂಡ ದಾಖಲಾಗಿದೆ.












Click it and Unblock the Notifications