ಲೋಕಾಯುಕ್ತದಲ್ಲಿ ಅಕ್ರಮ, ತನಿಖೆ ಹೊಣೆ ಕಮಲ್ ಪಂತ್ಗೆ
ಬೆಂಗಳೂರು, ಜೂ. 30 : ಕರ್ನಾಟಕ ಲೋಕಾಯುಕ್ತದಲ್ಲಿನ ಹಣದ ಬೇಡಿಕೆ ಪ್ರಕರಣದ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ದಳವನ್ನು ರಚನೆ ಮಾಡಿದೆ. ಲೋಕಾಯುಕ್ತ ನ್ಯಾ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಮತ್ತು ಕೃಷ್ಣರಾವ್ ಎಂಬುವವರು ಹಣದ ಬೇಡಿಕೆ ಇಟ್ಟಿದ್ದಾರೆ ಎಂಬುದು ಆರೋಪವಾಗಿದೆ.
ಮಂಗಳವಾರ ಕರ್ನಾಟಕ ಸರ್ಕಾರ ಲೋಕಾಯುಕ್ತದಲ್ಲಿನ ಹಗರಣದ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ಆದೇಶ ಹೊರಡಿಸಿದೆ. ಕಾರಾಗೃಹ ಇಲಾಖೆ ಎಡಿಜಿಪಿ ಕಮಲ್ ಪಂತ್ ಅವರಿಗೆ ಎಸ್ಐಟಿ ನೇತೃತ್ವ ವಹಿಸಲಾಗಿದೆ. [ಲೋಕಾಯುಕ್ತದಲ್ಲೇ ಭ್ರಷ್ಟಾಚಾರ, ಮುಂದೇನು?]

ಲೋಕಾಯುಕ್ತ ಕಚೇರಿಯಲ್ಲಿಯೇ ಸರ್ಕಾರಿ ಅಧಿಕಾರಿಯೊಬ್ಬರ ಬಳಿ 1 ಕೋಟಿ ರೂ.ಗೆ ಬೇಡಿಕೆಯಿಟ್ಟ ಪ್ರಕರಣ ಮೇ ತಿಂಗಳಿನಲ್ಲಿ ಬೆಳಕಿಗೆ ಬಂದಿತ್ತು. ಈ ಪ್ರಕರಣದ ಬಗ್ಗೆ ಮೇ 11ರಂದು ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ರಿಜಿಸ್ಟ್ರಾರ್ಗೆ ಪತ್ರ ಬರೆದಿದ್ದರು. ನಂತರ ಈ ಬಗ್ಗೆ ಭಾರೀ ಚರ್ಚೆ ಆರಂಭವಾಗಿತ್ತು. ನ್ಯಾ.ಭಾಸ್ಕರರಾವ್ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. [ಲೋಕಾಯುಕ್ತ ಕಚೇರಿಯಲ್ಲಿ ಆಗಿದ್ದೇನು?]
ಜೂನ್ 26ರಂದು ಪತ್ರಿಕಾಗೋಷ್ಠಿ ನಡೆಸಿದ್ದ ನ್ಯಾ.ಭಾಸ್ಕರರಾವ್ ಪ್ರರಕರಣದ ತನಿಖೆಯನ್ನು ಸಿಸಿಬಿಗೆ ವಹಿಸುವುದಾಗಿ ಘೋಷಿಸಿದ್ದರು. ಆದರೆ, ಉಪ ಲೋಕಾಯುಕ್ತರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಕೊನೆಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸುವಂತೆ ಲೋಕಾಯುಕ್ತರು ಸರ್ಕಾರಕ್ಕೆ ಪತ್ರ ಬರೆದಿದ್ದರು. [ಕರ್ನಾಟಕದಿಂದ ವರ್ಗಾವಣೆ ಬಯಸಿಲ್ಲ: ಸೋನಿಯಾ ನಾರಂಗ್]
ಮಂಗಳವಾರ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದು, ವಿಶೇಷ ತನಿಖಾ ದಳವನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಲೋಕಾಯುಕ್ತ ನ್ಯಾ.ಭಾಸ್ಕರ ರಾವ್ ಪುತ್ರ ಅಶ್ವಿನ್ ರಾವ್ ಮತ್ತು ಕೃಷ್ಣರಾವ್ ಎಂಬುವವರು ಸರ್ಕಾರಿ ಅಧಿಕಾರಿಯೊಬ್ಬರಿಗೆ ಬೆದರಿಕೆ ಹಾಕಿ, 1 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬುದು ಆರೋಪವಾಗಿದೆ.
ತನಿಖೆಗೆ ತಡೆ ನೀಡಿದ್ದರು : ಲೋಕಾಯುಕ್ತ ಕಚೇರಿಯಲ್ಲಿ ನಡೆದ ಭ್ರಷ್ಟಾಚಾರದ ಕುರಿತು ಉಪ ಲೋಕಾಯುಕ್ತ ಸುಭಾಷ್ ಅಡಿ ಅವರ ಆದೇಶದ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದರು. ಮೂರು ದಿನಗಳಿಂದ ತನಿಖೆ ನಡೆಸುತ್ತಿದ್ದ ಲೋಕಾಯುಕ್ತ ಪೊಲೀಸರು ಹಗರಣದ ಆರೋಪಿ ಕೃಷ್ಣರಾವ್ ವಿವರಗಳನ್ನು ಸಂಗ್ರಹಣೆ ಮಾಡಿದ್ದರು. ಆದರೆ, ಜೂನ್ 29ರ ಸೋಮವಾರ ಸಂಜೆ ಈ ತನಿಖೆಗೆ ಲೋಕಾಯುಕ್ತರು ತಡೆ ನೀಡಿದ್ದರು.
ಲೋಕಾಯುಕ್ತ ಪುತ್ರನ ವಿರುದ್ಧ ದೂರು : ಲೋಕಾಯುಕ್ತದಲ್ಲಿ ನಡೆದಿದೆ ಎನ್ನಲಾದ ಹಣದ ಬೇಡಿಕೆ ಪ್ರಕರಣದ ಬಗ್ಗೆ ಆಮ್ ಆದ್ಮಿ ಪಕ್ಷ ದೂರು ನೀಡಿತ್ತು. ನ್ಯಾ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಮತ್ತು ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿರುವ ಕೃಷ್ಣರಾವ್ ವಿರುದ್ಧ ಸೋಮವಾರ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.












Click it and Unblock the Notifications