ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ ಸಿದ್ದರಾಮಯ್ಯ
ಬೆಂಗಳೂರು, ಮಾ.4 : ಸೋಮವಾರ ಸಂಜೆ ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದ ಲೋಕಾಯುಕ್ತರನ್ನು ಸಮಾಧಾನಪಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.ಎಂಎಂಎಲ್ ಅಕ್ರಮ ಗಣಿಗಾರಿಕೆ ತನಿಖೆಯನ್ನು ಲೋಕಾಯುಕ್ತರಿಗೆ ವಹಿಸುವುದು ಮತ್ತು ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿಬಿದ್ದ ಐಎಎಸ್, ಐಪಿಎಸ್ ಅಧಿಕಾರಿಗಳ ವಿಚಾರಣೆಗೆ ಅನುಮತಿ ನೀಡಲು ಸಂಪುಟ ಸಭೆಯ ಒಪ್ಪಿಗೆ ಪಡೆದಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಮೈಸೂರು ಮಿನರಲ್ಸ್ ಲಿಮಿಟೆಡ್ (ಎಂಎಂಎಲ್) ನಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದ ತನಖೆಯನ್ನು ಲೋಕಾಯುಕ್ತ ಪೊಲೀಸ್ ವಿಶೇಷ ತನಿಖೆಗೆ ನೀಡಲು ತೀರ್ಮಾನ ಕೈಗೊಳ್ಳಲಾಯಿತು. [ಸಿದ್ದು ಸರ್ಕಾರ ವಿರುದ್ಧ ಲೋಕಾಯುಕ್ತರ ಅಸಮಾಧಾನ]
ಲೋಕಾಯುಕ್ತ ದಾಳಿಯ ವೇಳೆ ಸಿಕ್ಕಿಬಿದ್ದಿದ್ದ ಐಎಎಸ್, ಐಪಿಎಸ್ ಮತ್ತು ಹಾಗೂ ಐಎಫ್ಎಸ್ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಸುವುದಕ್ಕೆ ಒಪ್ಪಿಗೆ ನೀಡಲು ತೀರ್ಮಾನಿಸಲಾಗಿದೆ. ಕೆಎಎಸ್ ಹಾಗೂ ಇತರೆ ಇಲಾಖೆ ಅಧಿಕಾರಿಗಳ ವಿರುದ್ಧ ತನಿಖೆಗೂ ಹಂತ-ಹಂತವಾಗಿ ಅನುಮತಿ ನೀಡಲು ನಿರ್ಧರಿಸಲಾಗಿದೆ ಎಂದು ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ಸಂಪುಟ ಸಭೆಯ ನಿರ್ಣಯಗಳು
ಎಂಎಂಎಲ್ ಪ್ರಕರಣ ಲೋಕಾಯುಕ್ತರಿಗೆ
ಎಂಎಂಎಲ್ ನಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಲೋಕಾಯುಕ್ತ ಎಸ್ಐಟಿ ಮೂಲಕ ತನಿಖೆ ನಡೆಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಎಂಎಂಎಲ್ ನಲ್ಲಿ ಒಟ್ಟು 642 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಎಂಎಂಎಲ್ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದ ಸರ್ಕಾರದ ಹಾಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ.ಉಮೇಶ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಐ.ಆರ್.ಪೆರುಮಾಳ್, ಗಂಗಾರಾಂ ಭಡೇರಿಯಾ, ಮಹೇಂದ್ರ ಜೈನ್, ನಿವೃತ್ತ ಡಿಜಿಪಿ ಜೀಜಾ ಮಾಧವ ಹರಿಸಿಂಗ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿವೃತ್ತ ಅಧಿಕಾರಿಗಳಾದ ಶಿವಲಿಂಗಮೂರ್ತಿ, ಬಸಪ್ಪ ರೆಡ್ಡಿ, ಮಂಜುನಾಥ್, ಕೊಂಗವಾಡ, ಅಶೋಕ್ ವಿರುದ್ಧ ಎಸ್ಐಟಿ ಮೂಲಕ ತನಿಖೆ ನಡೆಸಲು ಒಪ್ಪಿಗೆ ಪಡೆಯಲಾಗಿದೆ.
ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ
ಸೋಮವಾರದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಭೂ ಸುಧಾರಣಾ ಕಾಯ್ದೆ ಸೆಕ್ಷನ್ 109, ಭೂ ಕಂದಾಯ ಕಾಯ್ದೆ ಸೆಕ್ಷನ್ 95ಕ್ಕೆ ತಿದ್ದುಪಡಿ ತರಲು ತೀರ್ಮಾನ ಕೈಗೊಳ್ಳಲಾಗಿದೆ. ಕೈಗಾರಿಕೆ ಹಾಗೂ ಸರ್ಕಾರಿ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆ ಸುಗಮಗೊಳಿಸಲು ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮುಂದಿನ ಅಧಿಕವೇಶನದಲ್ಲಿ ಈ ತಿದ್ದುಪಡಿ ಮಸೂದೆ ಮಂಡಿಸಲು ತೀರ್ಮಾನಿಸಲಾಗಿದೆ.
ಅಧಿಕಾರಿಗಳಿಗೆ ಸಂಕಷ್ಟ
ಲೋಕಾಯುಕ್ತರ ಬಹುದಿನದ ಬೇಡಿಕೆಗೆ ಸೋಮವಾರದ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಸೇವೆಯಲ್ಲಿದ್ದ ಸಂದರ್ಭದಲ್ಲಿ ಲೋಕಾಯುಕ್ತ ದಾಳಿಯ ವೇಳೆ ಸಿಕ್ಕಿಬಿದ್ದ ಆರೋಪದ ಎದುರಿಸುತ್ತಿರುವ ಹಿರಿಯ ಐಎಎಸ್ ಅಧಿಕಾರಿ ಬಾಬುರಾವ್ ಮುಡವಿ, ಡಾ.ವಿ.ಚಂದ್ರಶೇಖರ್, ಬಲದೇವಕೃಷ್ಣ ವಿರುದ್ಧ ವಿಚಾರಣೆ ನಡೆಸುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಆದರೆ, ಎಲ್ಲಾ ಅಧಿಕಾರಿಗಳು ನಿವೃತ್ತರಾಗಿದ್ದಾರೆ. ಸದ್ಯ ಸೇವೆ ಸಲ್ಲಿಸುತ್ತಿರುವ ಐಪಿಎಸ್ ಅಧಿಕಾರಿ ಡಿ.ಸಿ.ರಾಜಪ್ಪ ವಿರುದ್ಧ ಸಹ ವಿಚಾರಣೆ ನಡೆಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಲಾಗಿದೆ.
ಅರಣ್ಯ ಪದಕ್ಕೆ ಹೊಸ ವ್ಯಾಖ್ಯಾನ
ರಕ್ಷಿತಾರಣ್ಯ, ಅಭಯಾರಣ್ಯಗಳನ್ನು ಹೊರತುಪಡಿಸಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ಅರಣ್ಯ ಎಂಬ ಪದಕ್ಕೆ ಹೊಸ ವ್ಯಾಖ್ಯಾನ ನೀಡಿದೆ. ಇದರಿಂದ ಸರ್ಕಾರದ ಸಿಎನ್ ಡಿ ಭೂಮಿಗಳನ್ನೂ ಅರಣ್ಯ ಎಂದು ಪರಿಗಣಿಸಲಾಗುತ್ತಿದ್ದು, ನಿವಾಸಿಗಳನ್ನು ಒಕ್ಕಲೆಬ್ಬಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಅರಣ್ಯ ಎಂಬ ಪದಕ್ಕೆ ವ್ಯಾಖ್ಯಾನ ಮಾಡಲು ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಿವಿಧ ಸಮಿತಿ ರಚಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಆರು ತಿಂಗಳಲ್ಲಿ ಈ ಸಮಿತಿ ತನ್ನ ವರದಿ ನೀಡಲಿದೆ.