ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ ಕುರಿತು ಮಹತ್ವದ ವರದಿ ಸಲ್ಲಿಸಿದ ಸದನ ಸಮಿತಿ!
ಬೆಂಗಳೂರು, ಜ. 22: ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಪದಚ್ಯುತಗೊಳಿಸುವ ಭರದಲ್ಲಿ ವಿಧಾನ ಪರಿಷತ್ನಲ್ಲಿ ಹೈಡ್ರಾಮಾ ನಡೆದಿತ್ತು. ಕೆಲವು ಸದಸ್ಯರು ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದರು. ಡಿಸೆಂಬರ್ 15 ರಂದು ವಿಧಾನ ಪರಿಷತ್ ವಿಶೇಷ ಕಲಾಪ ನಡೆಯುವಾಗ ಉಪ ಸಭಾಪತಿ ಎಸ್.ಎಲ್. ಧೆರ್ಮೇಗೌಡ ಅವರನ್ನು ಬಲವಂತವಾಗಿ ಸಭಾಪತಿ ಪೀಠದಿಂದ ಎಳೆದು ಹಾಕಲಾಗಿತ್ತು. ಅದೇ ಸಂದರ್ಭದಲ್ಲಿ ಕೆಲವು ಸದಸ್ಯರು ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಅವರು ವಿಧಾನ ಪರಿಷತ್ ಪ್ರವೇಶಿಸದಂತೆ ತಡೆದಿದ್ದರು.
ಘಟನೆಯಿಂದ ಸಭಾಪತಿ ಹಾಗೂ ಉಪ ಸಭಾಪತಿ ಇಬ್ಬರೂ ಮನನೊಂದಿದ್ದರು. ಆದರೆ ಮುಂದೆ ಎರಡು ದಿನಗಳಲ್ಲಿ ಘಟನೆಯನ್ನು ಅರಗಿಸಿಕೊಳ್ಳದೆ ತಾವು ಮಾಡದ ತಪ್ಪಿಗಾಗಿ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಅವರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಧಾನ ಪರಿಷತ್ನಲ್ಲಿ ನಡೆದಿದ್ದ ಘಟನೆ ಇಡೀ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದ್ದರೆ, ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಆತ್ಮಹತ್ಯೆ ರಾಜ್ಯದಲ್ಲಿ ಆತಂಕ ಸೃಷ್ಟಿಸಿತ್ತು.
ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾದ ರಾಜಕಾರಣಿ ಎಸ್.ಎಲ್. ಧರ್ಮೇಗೌಡ?
ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ನೀಡುವಂತೆ ಸಭಾಪತಿ ಕೆ. ಪ್ರತಾಪ ಚಂದ್ರ ಶೆಟ್ಟಿ ಅವರು ಸದನ ಸಮಿತಿ ರಚಿಸಿದ್ದರು. ಸಮಗ್ರ ತನಿಖೆ ನಡೆಸಿರುವ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರ ಅಧ್ಯಕ್ಷತೆಯ ಸದನ ಸಮಿತಿ ಇವತ್ತು (ಜನವರಿ 22) 84 ಪುಟಗಳ ಮಧ್ಯಂತರ ವರದಿಯನ್ನು ಪ್ರತಾಪ್ ಚಂದ್ರ ಶೆಟ್ಟಿ ಅವರಿಗೆ ಸಲ್ಲಿಸಿದೆ. ಡಿಸೆಂಬರ್ 15, 2020 ರಂದು ವಿಧಾನ ಪರಿಷತ್ನಲ್ಲಿ ನಡೆದ ಹೈಡ್ರಾಮಾ ನಂತರ ಘಟಿಸಿದ ಉಪ ಸಭಾಪತಿಗಳ ಆತ್ಮಹತ್ಯೆ ಕುರಿತು ಸಮಿತಿ ವರದಿ ಸಲ್ಲಿಸಿದೆ. ಮಧ್ಯಂತರ ವರದಿಯಲ್ಲೇನಿದೆ? ಇಲ್ಲಿದೆ ಮಾಹಿತಿ!
ವರದಿಯಲ್ಲಿನ ಅಂಶಗಳು ಹೀಗಿವೆ
ವರದಿ ಸಲ್ಲಿಸಿದ ಬಳಿಕ ಮಾತನಾಡಿದ ಸಮಿತಿ ಅಧ್ಯಕ್ಷ ಮರಿತಿಬ್ಬೇಗೌಡ ಅವರು, ನಮಗೆ ವರದಿ ನೀಡಲು 20 ದಿನಗಳ ಕಾಲಾವಕಾಶ ಕೊಡಲಾಗಿತ್ತು. ಈವರೆಗೆ ಸಮಿತಿ ಒಟ್ಟು ಐದು ಸಭೆಗಳನ್ನು ನಡೆಸಿದೆ. ಇನ್ನೂ ಹೆಚ್ಚಿನ ಸಮಯವಾಕಾಶ ಬೇಕಾಗಿದೆ. ಆದ್ದರಿಂದ, ಸಮಿತಿಯ ಮೊದಲ ನಾಲ್ಕು ಸಭೆಗಳ ಮಾಹಿತಿಯನ್ನೊಳಗೊಂಡ ವರದಿ ಹಾಗೂ ಸಾಕ್ಷ್ಯದಾರಗಳನ್ನು ಸಿ.ಡಿ. ರೂಪದಲ್ಲಿ ಮಧ್ಯಂತರ ವರದಿಯಲ್ಲಿ ಸಲ್ಲಿಸಲಾಗಿದೆ. ಸಂಪೂರ್ಣ ವರದಿ ಸಲ್ಲಿಸಲು ಇನ್ನೂ ಹೆಚ್ಚಿನ ಸಮಯವಾಕಾಶ ಕೇಳಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.
ಸಿಸಿ ಕ್ಯಾಮೆರಾ ಮಾಹಿತಿ
ಘಟನೆಯ ಕುರಿತು ಈವರೆಗೆ ಐದು ಸಭೆಗಳನ್ನು ಸಮಿತಿ ನಡೆಸಿದೆ. ಅವತ್ತು ವಿಧಾನ ಪರಿಷತ್ನಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಕಾರ್ಯದರ್ಶಿ, ಮಾರ್ಷಲ್ಸ್ ಮತ್ತು ವಿಧಾನ ಪರಿಷತ್ ಸದಸ್ಯ ರಮೇಶ್ ಅವರಿಗೆ ನೋಟಿಸ್ ನೀಡಿ ಪ್ರಾಥಮಿಕ ಹೇಳಿಕೆಯನ್ನು ಸಮಿತಿ ಪಡೆದಿದೆ.
ಪಂಚಾಯಿತಿಯಿಂದ ಪರಿಷತ್ ತನಕ; ಎಸ್. ಎಲ್. ಧರ್ಮೇಗೌಡ ಪರಿಚಯ
ಅಂದಿನ ಅಧಿವೇಶನದಲ್ಲಿ ಹಾಜರಿದ್ದು ಅಧಿವೇಶನದ ಕಲಾಪಗಳನ್ನು ಚಿತ್ರೀಕರಿಸಿರುವ ಖಾಸಗಿ ಸುದ್ದಿ ವಾಹಿನಿಗಳು, ವಿಧಾನ ಪರಿಷತ್ ವೆಬ್ಕಾಸ್ಟ್, ಲೋಕೋಪಯೋಗಿ ಇಲಾಖೆ ನಿರ್ವಹಿಸುವ ಸಿಸಿ ಕ್ಯಾಮೆರಾ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಘಟನೆ ಕುರಿತು ಮಾಹಿತಿ ಪಡೆಯುವ ಅಗತ್ಯವಿದೆ ಎಂದು ಸಮಿತಿ ತೀರ್ಮಾನಿಸಿದೆ.
ಧರ್ಮೇಗೌಡರ ಆತ್ಮಹತ್ಯೆ ಪತ್ರಕ್ಕೆ ಮನವಿ
ಘಟನೆಯ ನಂತರ ನಡೆದ ಉಪ ಸಭಾಪತಿ ಧರ್ಮೆಗೌಡ ಅವರ ಸಾವಿನ ಕುರಿತು ಅವರು ಬರೆದಿಟ್ಟಿರುವರು ಎನ್ನಲಾಗಿರುವ ಪತ್ರವನ್ನು ಒದಗಿಸಲು ಕೋರಿ ಗೃಹ ಇಲಾಖೆಯ ಕಾರ್ಯದರ್ಶಿಗಳಿಗೆ ಸಹ ಪತ್ರ ಬರೆಯಲಾಗಿದೆ. ಆದ್ದರಿಂದ, 20 ದಿನಗಳ ಒಳಗಾಗಿ ಪೂರ್ಣ ವರದಿಯನ್ನು ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
ನಮ್ಮ ದೇಶದ ಇತರೆ ರಾಜ್ಯಗಳಲ್ಲಿ ಸಹ ಇಂತಹ ಘಟನೆಗಳು ನಡೆದಿರುವ ಕುರಿತು ಮಾಹಿತಿಯನ್ನು ಪಡೆಯಲು ಸಮಿತಿ ತೀರ್ಮಾನಿಸಿದೆ. ಇನ್ನೂ ಎಷ್ಟು ಸಮಯ ಬೇಕಾಗಬಹುದು ಎನ್ನುವುದರ ಸ್ಪಷ್ಟತೆ ಸಿಕ್ಕಮೇಲೆ ಸಭಾಪತಿಗಳಿಗೆ ಪತ್ರ ಬರೆದು ಹೆಚ್ಚಿನ ಸಮಯಾವಾಕಾಶವನ್ನು ಲಿಖಿತವಾಗಿ ಕೇಳಲಾಗುವುದು ಎಂದು ಸದನ ಸಮಿತಿ ಅಧ್ಯಕ್ಷ ಮರಿತಿಬ್ಬೇಗೌಡ ಹೇಳಿದ್ದಾರೆ.
Recommended Video
ಸದಸ್ಯರ ರಾಜೀನಾಮೆ
ಸಮಿತಿಯ ಮಧ್ಯಂತರ ವರದಿಯನ್ನು ಸ್ವೀಕರಿಸಿದ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಮಾತನಾಡಿ, ಅಂದು ನಡೆದ ಅಹಿತಕರ ಘಟನೆ ಕುರಿತು ಐದು ಸದಸ್ಯರನ್ನೊಳಗೊಂಡ ಸದನ ಸಮಿತಿಯನ್ನು ಸರ್ಕಾರ ರಚಿಸಿ ಆದೇಶ ಹೊರಡಿಸಿತ್ತು. ಆದರೇ, ಅದರಲ್ಲಿ ಹೆಚ್. ವಿಶ್ವನಾಥ್ ಮತ್ತು ಸಂಕನೂರು ಅವರು ಖಾಸಗಿ ಕಾರಣಗಳಿಂದ ಸಮಿತಿಗೆ ರಾಜಿನಾಮೆ ನೀಡಿದ್ದಾರೆ.
ಹೀಗಾಗಿ ಪ್ರಸ್ತುತ ಸಮಿತಿಯಲ್ಲಿ 3 ಸದಸ್ಯರಿದ್ದಾರೆ. ಸಮಿತಿಗೆ 20 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿತ್ತು, ಸಮಿತಿಗೆ ಕಾಲಾವಕಾಶ ಸಾಕಾಗುತ್ತಿಲ್ಲವೆಂದು ಇಂದು ಮಧ್ಯಂತರ ವರದಿಯನ್ನು ಸಲ್ಲಿಸಿ ಹೆಚ್ಚಿನ ಸಮಯವನ್ನು ಕೋರಿದೆ. ಸಮಿತಿ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಪರಿಶೀಲಿಸಿದ ನಂತರ ಮುಂದಿನ ಕ್ರಮದ ಬಗ್ಗೆ ಯೋಚಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಸದನ ಸಮಿತಿಯ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಹಾಗೂ ಆರ್.ಬಿ. ತಿಮ್ಮಾಪುರ ಅವರು ಉಪಸ್ಥಿತರಿದ್ದರು.